ಕನ್ನಡಪ್ರಭ ವಾರ್ತೆ ಚಾಮರಾಜನಗರಗ್ಯಾರಂಟಿ ಯೋಜನೆಗಳ ಸೌಲಭ್ಯ ರಾಜ್ಯದ ೪ ಕೋಟಿ ೬೦ ಲಕ್ಷ ಫಲಾನುಭವಿಗಳಿಗೆ ತಲುಪುತ್ತಿದ್ದು ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಮಾತನಾಡಿ, ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಭೂತಪೂರ್ವ ಕಾರ್ಯಕ್ರಮವಾಗಿದೆ. ದೇಶದಲ್ಲಿಯೇ ನುಡಿದಂತೆ ನಡೆದ ಸರ್ಕಾರ ನಮ್ಮದು. ಸಂವಿಧಾನದ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಇಡೀ ರಾಜ್ಯದ ಜನರಿಗೆ ತಲುಪಿಸುವ ದಿಸೆಯಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಲಾಭವನ್ನು ಜಿಲ್ಲೆಯ ಶೇ. ೯೮ರಷ್ಟು ಜನರು ಪಡೆದಿದ್ದಾರೆ. ಇದು ಹೆಮ್ಮೆಯ ಸಂಗತಿ. ಕುಡಿಯುವ ನೀರು, ಕೆರೆಗಳನ್ನು ತುಂಬಿಸುವ ಯೋಜನೆ, ರಸ್ತೆಗಳು ಸೇರಿದಂತೆ ಜಿಲ್ಲೆಯ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚಿನ ಒತ್ತು ನೀಡಿದ್ದಾರೆ. ಪ್ರಸ್ತುತ ಜಿಲ್ಲೆಗೆ ಕುಡಿಯುವ ನೀರಿನ ಯೋಜನೆಗಾಗಿ ೩೬೭ ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಮಾತನಾಡಿ, ಜನಸಾಮಾನ್ಯರ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಯಾವುದೇ ತಾರತಮ್ಯವಿಲ್ಲದೆ ಸಮಾಜದ ಎಲ್ಲಾ ವರ್ಗಗಳ ಜನರಿಗೂ ಸಮತೋಲಿತ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಮನ್ನಣೆ ಗಳಿಸಿದ್ದಾರೆ. ಸರ್ಕಾರದ ಬಗ್ಗೆ ಜನರು ವಿಶ್ವಾಸ ಹೊಂದಿದ್ದಾರೆ ಎಂದು ತಿಳಿಸಿದರು. ಗುಂಡ್ಲುಪೇಟೆ ಶಾಸಕ ಎಸ್. ಎಂ. ಗಣೇಶ್ ಪ್ರಸಾದ್ ಮಾತನಾಡಿ, ಸರ್ಕಾರ ಅಧಿಕಾರಿಕ್ಕೆ ಬಂದ ಕಡಿಮೆ ಸಮಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ನುಡಿದಂತೆ ನಡೆದಿದೆ. ಜಿಲ್ಲೆಯ ಅಭಿವೃದ್ದಿಗೆ ಸರ್ಕಾರ ಸಾಕಷ್ಟು ನೀಡಿದೆ. ಜಿಲ್ಲೆಯ ಪ್ರಗತಿಗೆ ಎಚ್.ಎಸ್. ಮಹದೇವಪ್ರಸಾದ್ ಅವರು ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕಾಲೇಜು ಸೇರಿದಂತೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ ಎಂದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಯಿತು.