ರಾಜ್ಯಕ್ಕೆ*ರಾಜ್ಯಪಾಲರ ಅಧಿಕಾರ ದುರ್ಬಳಕೆಗೆ ಆಕ್ರೋಶ

KannadaprabhaNewsNetwork |  
Published : Aug 06, 2024, 12:32 AM IST
ಪ್ರತಿಭಟನೆ | Kannada Prabha

ಸಾರಾಂಶ

ಬಿಜೆಪಿ ಜೆಡಿಎಸ್ ಮೈತ್ರಿ ಹವಣಿಸುತ್ತಿದ್ದು, ರಾಜ್ಯಪಾಲರ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ

*ಕರ್ನಾಟಕ ಪ್ರದೇಶ ಕುರುಬರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ತುಮಕೂರುಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ, ತೇಜೋವಧೆ ಮಾಡಲು ಬಿಜೆಪಿ ಜೆಡಿಎಸ್ ಮೈತ್ರಿ ಹವಣಿಸುತ್ತಿದ್ದು, ರಾಜ್ಯಪಾಲರ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿವೆ ಎಂದು ಆರೋಪಿಸಿ ಕುರುಬ ಸಮುದಾಯದ ವಿವಿಧ ಸಂಘಟನೆಗಳ ಮುಖಂಡರು ಕರ್ನಾಟಕ ಪ್ರದೇಶ ಕುರುಬರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಕರ್ನಾಟಕ ಪ್ರದೇಶ ಕುರುಬರ ಸಂಘ, ಬೆಂಗಳೂರು, ಜಿಲ್ಲಾ ಕುರುಬರ ಸಂಘ, ತುಮಕೂರು, ಕಾಳಿದಾಸ ವಿದ್ಯಾವರ್ಧಕ ಸಂಘ, ತುಮಕೂರು, ಕನಕ ಯುವ ಸೇನೆ ತುಮಕೂರು ಹಾಗೂ ತುಮಕೂರು ಜಿಲ್ಲೆಯ ಕುರುಬ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಟೌನ್‌ಹಾಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ನೀಡಿರುವ ಷೋಕಾಸ್ ನೊಟೀಸ್‌ ಹಿಂಪಡೆಯಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಅಧಿಕಾರ ದುರ್ಬಳಕೆ:

ಈ ವೇಳೆ ಮಾತನಾಡಿದ ಕನಕ ಯುವಸೇನೆಯ ಅಧ್ಯಕ್ಷ ಕೆಂಪರಾಜು ಅಧಿಕಾರದಿಂದ ವಂಚಿತರಾಗಿರುವ, ಜನರಿಂದ ತಿರಸ್ಕೃತರಾಗಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಜನಪರ ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಅಧಿಕಾರ ದುಬರ್ಳಕೆ ಮಾಡಿಕೊಳ್ಳುತ್ತಿವೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಸುಸೂತ್ರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಏಳಿಗೆಯನ್ನು ಸಹಿಸಲಾರದೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ದೊಡ್ಡ ಮಟ್ಟದ ಷಡ್ಯಂತ್ರ ರೂಪಿಸಿದ್ದಾರೆ ಎಂದರು.ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ನಾಯಕ ಸಿದ್ದರಾಮಯ್ಯರವರ ವರ್ಚಸ್ಸಿಗೆ ಮಸಿ ಬಳಿದು ಅವರನ್ನು ರಾಜಕೀಯವಾಗಿ ಮುಗಿಸಿಯೇ ಬಿಡುವ ಹುನ್ನಾರ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ರಾಜ್ಯ ನಾಯಕರ ಕುತಂತ್ರಕ್ಕೆ ಬಿಜೆಪಿಯ ರಾಷ್ಟ್ರೀಯ ನಾಯಕರೂ ಕುಮ್ಮಕ್ಕು ನೀಡುತ್ತಿದ್ದಾರೆ. ರಾಜ್ಯಪಾಲರ ಮುಖಾಂತರ ರಾಜ್ಯದ ಕಾಂಗ್ರೆಸ್ ಸರಕಾರವನ್ನು ಅಸ್ತಿರಗೊಳಿಸಲು ಕೇಂದ್ರ ಸರಕಾರ ಪಿತೂರಿ ನಡೆಸುತ್ತಿದೆ.ರಾಜ್ಯಪಾಲರು ಷೋಕಾಸ್ ನೊಟೀಸ್‌ ಹಿಂಪಡೆಯದಿದ್ದರೆ ರಾಜ್ಯಭವನ ಮುತ್ತಿಗೆ ಹಾಕುವುದಾಗಿ ತಿಳಿಸಿದರು.ಜೆಡಿಎಸ್ ನಾಯಕ ಹಾಗೂ ಕೇಂದ್ರದ ಕೈಗಾರಿಕ ಮಂತ್ರಿಯಾಗಿರುವ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಬಿಜೆಪಿ ನಾಯಕರಾದ ಆರ್.ಅಶೋಕ್, ಬಿ.ವೈ,ವಿಜಯೇಂದ್ರ ಜೊತೆಗೆ ಬಿಜೆಪಿಯ ರಾಷ್ಟ್ರೀಯ ನಾಯಕರಾದ ನರೇಂದ್ರ ಮೋದಿ,ಅಮಿತ್ ಶಾ, ಬಿ.ಎಲ್.ಸಂತೋಷ್ ಮತ್ತಿತರರು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಿರುವುದರ ಹಿಂದೆ ಹಲವು ಕಾರಣಗಳಿವೆ ಎಂದರು.ಸಿದ್ದರಾಮಯ್ಯರವರನ್ನು ಅಧಿಕಾರದಿಂದ ಕೆಳಗಿಳಿಸಿ ಹಿಂದುಳಿದ ವರ್ಗಗಳ ನಾಯಕತ್ವವನ್ನು ಕೊನೆಗಾಣಿಸಬಹುದು, ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಶಾಶ್ವತವಾಗಿ ಹಿಂದುಳಿದ ವರ್ಗದವರನ್ನು ಅಧಿಕಾರದಿಂದ ದೂರ ಇಡಬಹುದು ಎಂಬುದು ಇವರ ಉದ್ದೇಶವಾಗಿದೆ. ಮುಡಾ ಮತ್ತು ವಾಲ್ಮೀಕಿ ನಿಗಮದ ಅವ್ಯವಹಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರನ್ನು ತಳಕು ಹಾಕಲಾಗುತ್ತಿದೆ. ಒಂದು ವೇಳೆ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ದ ನಿಂತಲ್ಲಿ, ರಾಜ್ಯದ ಎಲ್ಲಾ ಕುರುಬರು ಸೇರಿ ಗೋಬ್ಯಾಕ್ ಗೆಹ್ಲೋಟ್ ಚಳವಳಿ ಹಮ್ಮಿಕೊಳ್ಳುವುದಾಗಿ ತಿಳಿಸಿದರು.ಸಿದ್ದು ಹಿಂದೆ ಅಹಿಂದ ವರ್ಗ:

ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮೈಲಪ್ಪ ಮಾತನಾಡಿ, ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತನಿಖಾ ಆಯೋಗ ರಚಿಸಿರುವ ದೇಶದ ಎಕೈಕ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ, ನ್ಯಾಯಾಂಗ ತನಿಖೆಯಿಂದ ಎಲ್ಲಿ ನಮ್ಮ ಹುಳುಕುಗಳು ಹೊರಬಂದು ಜೈಲು ಸೇರಬೇಕಾಗುತ್ತದೆಯೋ ಎಂದು ಹೆದರಿರುವ ವಿರೋಧಪಕ್ಷಗಳು ಪಾದಯಾತ್ರೆ ನಡೆಸುತ್ತಿವೆ. ಸಮಾಜವಾದದ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಸದಾ ಬಡವರು, ಮಹಿಳೆಯರು, ರೈತರು ಮತ್ತು ಕಾರ್ಮಿಕರ ಪರ ಇದ್ದಾರೆ. ಅವರು ಜಾರಿಗೆ ತಂದ ಅನ್ನಭಾಗ್ಯ, ಕ್ಷೀರಭಾಗ್ಯ, ಶೂಭಾಗ್ಯ ಅಲ್ಲದೆ, ಐದು ಗ್ಯಾರಂಟಿಗಳು ಈ ನಾಡಿನ ಬಡವರ ಪರವಾಗಿವೆ.ಸಿದ್ದರಾಮಯ್ಯ ಪರ ಇಡೀ ಅಹಿಂದ ವರ್ಗ ಬಂಡೆಯಂತೆ ನಿಂತಿದೆ.ಸಿದ್ದರಾಮಯ್ಯರವರನ್ನು ದುರ್ಬಲಗೊಳಿಸುವ ಕುತಂತ್ರವನ್ನು ಕೂಡಲೇ ನಿಲ್ಲಿಸಬೇಕು.ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು. ಉಗ್ರ ಹೋರಾಟ :

ತುಮಕೂರು ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಟಿ.ಆರ್.ಸುರೇಶ್ ಮಾತನಾಡಿ,ಶೋಷಿತ ಸಮುದಾಯಗಳ ಜನನಾಯಕ ಸಿದ್ದರಾಮಯ್ಯ ತೇಜೋವಧೆ ಕೇಂದ್ರ ಸರಕಾರ ನಡೆಸುತ್ತಿರುವ ಪ್ರಯತ್ನ ಖಂಡನೀಯ. ರಾಜ್ಯಪಾಲರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಒಂದು ಸ್ಥಿರ ಸರಕಾರವನ್ನು ಅಸ್ಥಿರಗೊಳಿಸಲು ಹೊರಟಿದೆ.ಇದನ್ನು ಇಡೀ ಅಹಿಂದ ವರ್ಗ ಖಂಡಿಸುತ್ತದೆ.ಜನಪರ ಆಡಳಿತ ನೀಡುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಮುಂದಾದರೆ ಇಡೀ ರಾಜ್ಯದ ಹಳ್ಳಿ ಹಳ್ಳಿಗಳಲ್ಲಿಯೂ ಅಹಿಂದ ವರ್ಗ ಉಗ್ರ ಹೋರಾಟ ನಡೆಸಿ, ರಾಜ್ಯಪಾಲರಿಗೆ ಘೇರಾವ್ ಹಾಕಲಿದೆ ಎಂದರು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಕನಕ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುನೀತ ನಟರಾಜ್,ಕರ್ನಾಟಕ ಪ್ರದೇಶ ಕುರುಬರ ಸಂಘದ ಅಂತರಿಕ ಲೆಕ್ಕ ಪರಿಶೋಧಕ ಟಿ.ಇ.ರಘುರಾಮ್,ಸೌಭಾಗ್ಯ,ಗುರು ಪ್ರಸಾದ್,ಅನಿಲ್,ಮಹೇಶ್, ಮಹಾಲಿಂಗಯ್ಯ,ಪುಟ್ಟಣ್ಣ,ರಘುರಾಮ್,ಜ್ವಾಲಮಾಲ ರಾಜಣ್ಣ, ಸಂಪತ್ ಕುಮಾರಿ, ಮಂಜುಳ, ಶೇಷಗಿರಿ ಸೇರಿದಂತೆ ಹ¯ವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ