ಕನ್ನಡಪ್ರಭ ವಾರ್ತೆ ಮಂಗಳೂರು
ಒಂದು ಮತವೂ ಹೆಚ್ಚು ಸಿಗದು: ಬೋಳಿಯಾರ್ ವಿಚಾರದಲ್ಲಿ ರಾಜಕೀಯ ಮಾಡಿದರೆ ಯಾರಿಗೂ ಒಂದು ಮತವೂ ಹೆಚ್ಚಾಗದು. ವಿಧಾನಸಭಾ ಚುನಾವಣೆಯಲ್ಲಿ ಎರಡು ಪಕ್ಷದವರು ಸೇರಿ ನನ್ನನ್ನು ಸೋಲಿಸಲು ಪ್ರಯತ್ನಿಸಿದರೂ ಆಗಿಲ್ಲ. ಇಂತಹ ವಿಚಾರಗಳಲ್ಲಿ ರಾಜಕೀಯ ಮಾಡಿ ಸಮಸ್ಯೆ ಸೃಷ್ಟಿಸುವವರು ನಿಜವಾದ ದೇಶದ್ರೋಹಿಗಳು. ಅದು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಯು.ಟಿ. ಖಾದರ್ ಹೇಳಿದರು.
ಇತ್ತಂಡ ಕೃತ್ಯ ತಪ್ಪು:ಭಾರತ್ ಮಾತಾಕಿ ಜೈ ಎಂದು ಯಾರೂ ಹೇಳಬಹುದು. ಅದಕ್ಕೆ ಯಾರೂ ಆಕ್ಷೇಪ ಮಾಡುವುದಿಲ್ಲ. ಆದರೆ ಅಲ್ಲಿ ಏನೋ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಬಗ್ಗೆ ಯಾರಿಗೂ ಗೊತ್ತಿಲ್ಲ. ಇದನ್ನು ಪೊಲೀಸರು ಸಿಸಿಟಿವಿ ಕ್ಯಾಮರಾದ ಮೂಲಕ ತನಿಖೆ ನಡೆಸುತ್ತಿದ್ದಾರೆ. ಮೆರವಣಿಗೆ ಮುಗಿದ ಬಳಿಕ ಮೂವರು ಬೈಕ್ನಲ್ಲಿ ಬಂದು ಪ್ರಚೋದನಕಾರಿಯಾಗಿ ಮಾತನಾಡುವ ಉದ್ದೇಶವೇನು? ಅದು ತಪ್ಪು, ಅದಕ್ಕೆ ಪ್ರತಿಯಾಗಿ ಅವರನ್ನು ಹಿಂಬಾಲಿಸಿಕೊಂಡು ಹಲ್ಲೆ ಮಾಡಿರುವ ಕೃತ್ಯವೂ ತಪ್ಪೇ. ಈ ಎರಡೂ ಘಟನೆಗಳ ಬಗ್ಗೆ ಪೊಲೀಸರು ಕಾನೂನು ಪ್ರಕಾರ ಕ್ರಮ ವಹಿಸಲಿದ್ದಾರೆ. ಅಲ್ಲಿ ಪ್ರಚೋದನಕಾರಿ ಮಾತುಗಳ ಬಗ್ಗೆ ಸ್ಥಳೀಯರು ದೂರು ನೀಡಿದ್ದಾರೆ ಎಂದರು.
ವಿಚಾರಣೆಗೆ ಕರೆಸುವುದು ಸಹಜ:ಬೋಳಿಯಾರ್ ಘಟನೆ ಬಗ್ಗೆ ಹೊರಗಿನವರು ಬಂದು ಮಾತನಾಡೋ ಅಗತ್ಯ ಇಲ್ಲ. ಪೊಲೀಸ್ ಇಲಾಖೆಯಿಂದ ನ್ಯಾಯ ದೊರಕಿಲ್ಲ ಎಂದು ನನ್ನ ಬಳಿ ಬಂದರೆ ಈ ಬಗ್ಗೆ ಖಂಡಿತಾ ನಾನು ಪರಿಶೀಲಿಸುತ್ತೇನೆ. ನನಗೆ ಅಂತಹ ಯಾವುದೇ ದೂರು ಬಂದಿಲ್ಲ. ವಾಟ್ಸಾಪ್ ವಾಯ್ಸ್ ಮೆಸೇಜ್ ಮೂಲಕ ಯಾರೋ ಹೇಳಿಕೊಂಡು ತಿರುಗಾಡುತ್ತಿದ್ದರೆ ಅದಕ್ಕೆ ನಾನು ಪ್ರತಿಕ್ರಿಯಿಸಲಾರೆ. ನಿರಪರಾಧಿಗಳಿಗೆ ಪೊಲೀಸರು ತೊಂದರೆ ನೀಡಬಾರದು ಎಂದು ಯು.ಟಿ.ಖಾದರ್ ಸಮರ್ಥಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಧ್ವನಿ ಸಂದೇಶ ಕಳುಹಿಸಿ ಜನರ ದಾರಿತಪ್ಪಿಸುವವರ ಮೇಲೂ ಪೊಲೀಸರು ಕ್ರಮ ವಹಿಸಬೇಕು. ಇಂತಹ ಘಟನೆಗಳ ಸಂದರ್ಭ ರಾಜಕಾರಣಿಗಳು ಅಲ್ಲಿ ಭೇಟಿ ನೀಡಿದಾಗ ಮತ್ತಷ್ಟು ಗೊಂದಲಕ್ಕೆ ಕಾರಣವಾಗುತ್ತದೆ. ಅದಕ್ಕಾಗಿ ಭೇಟಿ ನೀಡಿಲ್ಲ. ಸಮಸ್ಯೆ ಸೃಷ್ಟಿಸಿ ಗಲಾಟೆ ಮಾಡಿಸಿದವರನ್ನು ಭೇಟಿ ಮಾಡುವ ಅಗತ್ಯ ಇಲ್ಲ, ಅಂತಹವರನ್ನು ನಿರ್ಲಕ್ಷ್ಯ ಮಾಡಬೇಕು ಎಂದು ಗಾಯಾಳುಗಳ ಭೇಟಿಗೆ ಆಸ್ಪತ್ರೆಗೆ ತೆರಳದಿರುವ ನಿಲುವನ್ನು ಖಾದರ್ ಸಮರ್ಥಸಿದರು. ನನ್ನ ವಿರುದ್ಧ ಸಂದೇಶ ಹಾಕಿದವರಿಗೆ ಇನಾಮು!ನನ್ನನ್ನು ಕ್ಷೇತ್ರದಲ್ಲಿ ಸೋಲಿಸಲು ಪ್ರಯತ್ನಿಸಿದವರು ಬೋಳಿಯಾರ್ ಘಟನೆಗೆ ಸಂಬಂಧಿಸಿ ಶಾಸಕರು ಕಾಣೆಯಾಗಿದ್ದಾರೆ ಎಂಬ ಸಂದೇಶ ಹರಿಬಿಟ್ಟು ಸಂತೋಷ ಪಡುತ್ತಿದ್ದಾರೆ. ನಾನು ಅವರಿಗೆ ಶುಭಾಶಯ ಹೇಳುತ್ತೇನೆ. ಅವರು ನನ್ನ ಬಳಿ ಬಂದು ನಾನೇ ಆ ಸಂದೇಶ ಹಾಕಿರುವುದಾಗಿ ಹೇಳಿದರೆ ಅವರಿಗೆ ನಗದು ನೀಡಿ ಬಹುಮಾನವನ್ನೂ ನೀಡಲಿದ್ದೇನೆ. ಒಳ್ಳೆಯವರಿಗೆ, ಅಗತ್ಯವುಳ್ಳವರಿಗೆ ಖಾದರ್ ಯಾವತ್ತೂ ಕಾಣಿಸುತ್ತಾರೆ ಎಂದು ಯು.ಟಿ. ಖಾದರ್ ಹೇಳಿದರು.----------------