ಕನ್ನಡಪ್ರಭ ವಾರ್ತೆ ಬೆಳಗಾವಿ
ಆರಂಭದಲ್ಲಿ ದುಷ್ಕರ್ಮಿಗಳು ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ್ದಾರೆ ಎಂಬ ರೀತಿಯಲ್ಲಿ ಪ್ರಕರಣ ದಾಖಲಾಗಿದ್ದರೂ, ಸೂಕ್ಷ್ಮ ತನಿಖೆ ನಡೆಸಿದ ಪೊಲೀಸರು ದೂರುದಾರನೇ ಕಳ್ಳತನದ ಕಥೆಯ ಸೂತ್ರಧಾರ ಎಂಬುದನ್ನು ಪತ್ತೆಹಚ್ಚಿದ್ದಾರೆ. ಆರೋಪಿಯಿಂದ ಒಟ್ಟು ₹65.95 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ, ನಗದು ಹಾಗೂ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ. ತಿಳಕವಾಡಿಯ ಸಾವರ್ಕರ್ ರಸ್ತೆಯ ನಿವಾಸಿ ಕೃಷ್ಣಾನಂದ ವಿಶ್ವನಾಥ ವೇರ್ಣೇಕರ್ ಬಂಧಿತ ಆರೋಪಿ. ಈತ ರಾಮದೇವ ಗಲ್ಲಿಯ ವಿ.ಪಿ.ವೇರ್ಣೇಕರ್ ಆ್ಯಂಡ್ ಸನ್ಸ್ ಬಂಗಾರದ ಅಂಗಡಿಯ ಮಾಲೀಕ.
ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ₹45 ಸಾವಿರ ಮೌಲ್ಯದ ದ್ವಿಚಕ್ರ ವಾಹನ, 519.8 ಗ್ರಾಂ ತೂಕದ ₹62.60 ಲಕ್ಷ ಮೌಲ್ಯದ ಚಿನ್ನಾಭರಣ, 31 ಗ್ರಾಂ ತೂಕದ ₹6 ಸಾವಿರ ಮೌಲ್ಯದ ಬೆಳ್ಳಿ ಆಭರಣ ಹಾಗೂ ₹2.83 ಲಕ್ಷ ನಗದು ಸೇರಿ ಒಟ್ಟು ₹65.95 ಲಕ್ಷ ಮೌಲ್ಯದ ಸ್ವತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣವನ್ನು ಭೇದಿಸುವಲ್ಲಿ ಖಡೇಬಜಾರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಂ.ಕೆ.ಧಾಮಣ್ಣವರ ನೇತೃತ್ವದ ತಂಡ ಪ್ರಮುಖ ಪಾತ್ರ ವಹಿಸಿದೆ. ಪೊಲೀಸ್ ಸಿಬ್ಬಂದಿ ಹಾಗೂ ತಾಂತ್ರಿಕ ವಿಭಾಗದ ಸಹಕಾರದಿಂದ ಅಲ್ಪಾವಧಿಯಲ್ಲೇ ಪ್ರಕರಣವನ್ನು ಭೇದಿಸಿ ಆರೋಪಿಯನ್ನು ಬಂಧಿಸಲಾಗಿದೆ. ಈ ಯಶಸ್ವಿ ಕಾರ್ಯಾಚರಣೆಗೆ ಪೊಲೀಸ್ ಆಯುಕ್ತರು ತನಿಖಾ ತಂಡವನ್ನು ಅಭಿನಂದಿಸಿದ್ದಾರೆ.ಈ ಪ್ರಕರಣವು ಸುಳ್ಳು ದೂರು ನೀಡಿ ಪೊಲೀಸರನ್ನು ದಿಕ್ಕುತಪ್ಪಿಸಲು ಯತ್ನಿಸುವವರ ವಿರುದ್ಧ ಕಾನೂನು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.
ಬಾಕ್ಸ್
ಜು.16ರ ರಾತ್ರಿ ದುಷ್ಕರ್ಮಿಗಳು ಅಂಗಡಿಯ ಬಾಗಿಲು ಮುರಿದು ಒಳನುಗ್ಗಿ ಚಿನ್ನಾಭರಣ, ಬೆಳ್ಳಿ ಆಭರಣ ಹಾಗೂ ನಗದು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ಕೃಷ್ಣಾನಂದ ವಿಶ್ವನಾಥ ವೇರ್ಣೇಕರ್ ಖಡೇಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಪೊಲೀಸರು ಬಿಎನ್ಎಸ್-2023ರ ಕಲಂ 331(4) ಹಾಗೂ 305(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.