ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಕೇಂದ್ರೀಯ ವಿದ್ಯಾಲಯವು ಒಂದು ಶೈಕ್ಷಣಿಕ ವೇದಿಕೆಯಾಗಿದ್ದು, ಮಕ್ಕಳಿಗೆ ಮೂಲಭೂತ ಶಿಕ್ಷಣ ನೀಡಲಾಗುತ್ತದೆ. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶವನ್ನು ಪಡೆಯುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಿದೆ ಎಂದು ಪ್ರಾಂಶುಪಾಲೆ ಡಾ. ರುಬಿನಾ ತಿಳಿಸಿದರು.ಗೌರಿಬಿದನೂರು ಕೇಂದ್ರೀಯ ವಿದ್ಯಾಲಯ ಆಯೋಜಿಸಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ ಅಂಗವಾಗಿ ಪರಾಕ್ರಮ್ ದಿವಸ್ ಆಚರಣೆಯ ಪ್ರಯುಕ್ತ ನೇತಾಜಿ ಸುಭಾಷ್ ಚಂದ್ರ ಬೋಸ್ ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನ ಕಚೇರಿ ದೆಹಲಿ ಮತ್ತು ಭಾರತ ಸರ್ಕಾರದ ಸೂಚನೆಗಳ ಪ್ರಕಾರ ಶಾಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಾಗುತ್ತಿದೆ, ಅವುಗಳಲ್ಲಿ ಪರಾಕ್ರಮ್ ದಿವಸ್ ಕಾರ್ಯಕ್ರಮವೂ ಆಗಿದ್ದು, ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿವಸ್ ಎಂದು ಆಚರಿಸಲು ಭಾರತ ಸರ್ಕಾರ ನಿರ್ಧರಿಸಿರುವುದರಿಂದ ಈ ಕಾರ್ಯಕ್ರಮವನ್ನು ಭಾರತದ ಬಹುತೇಕ ಸಂಸ್ಥೆಗಳಲ್ಲಿ ಆಚರಿಸಲಾಗುತ್ತಿದೆ ಎಂದರು.
ಗೌರಿ ಬಿದನೂರು ಕೇಂದ್ರೀಯ ವಿದ್ಯಾಲಯವು ಜಿಲ್ಲೆಯಲ್ಲಿ ಶೈಕ್ಷಣಿಕ ಗುಣಮಟ್ಟಕ್ಕೆ ಹೆಸರುವಾಸಿಯಾದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದ್ದು, ಈ ಶಾಲೆಯಲ್ಲಿ ಪರಾಕ್ರಮ್ ದಿವಸ್ ಸಂದರ್ಭದಲ್ಲಿ ಸ್ಥಳೀಯ ಶಾಲೆಗಳ 100 ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಬರೆದ ಪುಸ್ತಕದ ಜೊತೆಗೆ ಪ್ರಮಾಣಪತ್ರವನ್ನು ನೀಡಲಾಯಿತು. ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ''''''''ಎಕ್ಸಾಮ್ ವಾರಿಯರ್ಸ್'''''''' ಪುಸ್ತಕ ಹಾಗೂ ಪ್ರಮಾಣಪತ್ರವನ್ನು ಸಹ ನೀಡಲಾಯಿತು. ಶಾಲೆಯ ಭೋದಕರು ಮತ್ತು ಭೋದಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.-------
ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲೆ ಡಾ. ರುಬಿನಾ ಪರಾಕ್ರಮ್ ದಿವಸ್ ಆಚರಣೆಯ ಪ್ರಯುಕ್ತ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.