1619 ಸರ್ಕಾರಿ ಪ್ರಾಥಮಿಕ ಶಾಲೆ,115 ಪ್ರೌಢಶಾಲೆ,38 ಪದವಿಪೂರ್ವ ಕಾಲೇಜುಗಳಲ್ಲಿನ 2,22,004 ಪೋಷಕರು ಭಾಗಿ ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿ ಹಾಗೂ ಫಲಿತಾಂಶ ಸುಧಾರಣೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಪೂರ್ಣ ಚರ್ಚೆ ನಡೆಸಿ ವಿಚಾರ ವಿನಿಮಯ ಮಾಡಿಕೊಳ್ಳುವ ಸಂಬಂಧ ನ.14ರ ಶುಕ್ರವಾರ ಜಿಲ್ಯಾದ್ಯಂತ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ಪೋಷಕ-ಶಿಕ್ಷಕ ಮಹಾಸಭೆ ಕರೆಯಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.ಹಾಜರಿ, ಶಾಲೆ ಬಿಡುವ ಮಕ್ಕಳ ಸಂಖ್ಯೆ ಕಡಿಮೆ ಮಾಡುವ ಹಾಗೂ ಫಲಿತಾಂಶಗಳನ್ನು ಹೆಚ್ಚಿಸುವ ಕುರಿತು ಹಾಗೂ ಆಯಾ ಮಕ್ಕಳ ಕಲಿಕಾ ಪ್ರಗತಿ ಕುರಿತಂತೆ ಮಹಾಸಭೆಯಲ್ಲಿ ಮಕ್ಕಳ ಸಮ್ಮುಖದಲ್ಲಿ ಶಿಕ್ಷಕರು ಪೋಷಕರೊಂದಿಗೆ ಚರ್ಚಿಸಲಿದ್ದಾರೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪೋಷಕರ ಪಾತ್ರ ಪ್ರಮುಖವಾಗಿದ್ದು, ಈ ಪ್ರಕ್ರಿಯೆಯಲ್ಲಿ ಅವರನ್ನು ತೊಡಗಿಸಿಕೊಳ್ಳುವುದು ಮುಖ್ಯ ಉದ್ದೇಶವಾಗಿದೆ. ನಿರಂತರ ಗೈರು ಹಾಜರಿಯನ್ನು ತಡೆಗಟ್ಟುವ ಮುಖಾಂತರ ಮಕ್ಕಳ ನಿಯಮಿತ ಹಾಜರಾತಿಯೊಂದಿಗೆ ಎಲ್ಲ ಮಕ್ಕಳು ಮುಖ್ಯ ವಾಹಿನಿಗೆ ಬಂದು ಗುಣಮಟ್ಟದ ಶಿಕ್ಷಣ ಪಡೆಯುವ ಉದ್ದೇಶಕ್ಕಾಗಿ ಪೋಷಕರ ಸಹಕಾರವನ್ನು ಪಡೆಯುವುದು ಅಗತ್ಯವಾಗಿದೆ ಎಂದಿದ್ದಾರೆ.
ಪೋಷಕರು, ಶಿಕ್ಷಕರು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವುದು ಪೋಷಕ-ಶಿಕ್ಷಕರ ಸಭೆಯ ಪ್ರಮುಖ ಉದ್ದೇಶವಾಗಿದೆ. ಸರ್ಕಾರದಿಂದ ದೊರೆಯುವ ಪ್ರೋತ್ಸಾಹದಾಯಕ ಸೌಲಭ್ಯಗಳಾದ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಬಿಸಿಯೂಟ, ಮೊಟ್ಟೆ, ಬಾಳೆಹಣ್ಣು, ಹಾಲು, ಶೂ ಮತ್ತು ಸಾಕ್ಸ್, ವಿದ್ಯಾರ್ಥಿ ವೇತನ ಇತ್ಯಾದಿ ಯೋಜನೆಗಳ ಅನುಷ್ಠಾನದ ಕುರಿತು ಪರಸ್ಪರ ಚಿಂತನ ಮಂಥನವನ್ನು ಇದೇ ಮಹಾ ಸಭೆಯಲ್ಲಿ ಕೈಗೊಳ್ಳಲಾಗುವುದು. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಕಲಿಕೆ ಉತ್ತಮ ಪಡಿಸಲು ಇಲಾಖೆಯಿಂದ ಹಮ್ಮಿಕೊಂಡಿರುವ ಕಲಿಕಾ ಉಪಕ್ರಮಗಳ ಬಗ್ಗೆ ಈ ಸಂದರ್ಭದಲ್ಲಿ ಪೋಷಕರಿಗೆ ಮಾಹಿತಿ ನೀಡಿ, ಅವರಿಂದಲೂ ಅಭಿಪ್ರಾಯ ಆಲಿಸಲಾಗುವುದು. ಶಾಲಾ ಪರಿಸರ, ಸುರಕ್ಷತೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವ ವಿಷಯದಲ್ಲಿ ಶಾಲೆಗಳಲ್ಲಿ ಅನುಪಾಲನೆ ಮಾಡುತ್ತಿರುವ ಬಗ್ಗೆ ಪೋಷಕರು ಖಾತ್ರಿ ಪಡಿಸಿಕೊಳ್ಳಲು ಇದರಿಂದ ಸಾಧ್ಯವಾಗಲಿದೆ.ಸರ್ಕಾರದ ಸೂಚನೆಯಂತೆ ನ.14 ರಂದು ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾ ಸಭೆಯ ಅಂಗವಾಗಿ ಶಾಲಾ ಕಾಲೇಜುಗಳನ್ನು ತಳಿರು-ತೋರಣಗಳಿಂದ ಅಲಂಕರಿಸಿ, ಹಬ್ಬದ ವಾತಾವರಣ ಸೃಷ್ಟಿಸಲಾಗುತ್ತಿದೆ. ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಸಭೆಯಲ್ಲಿ ಅಭಿನಂದಿಸುವ ಕೆಲಸ ಆಗುತ್ತಿದೆ. ಶಾಲಾ ಕಾಲೇಜು ಹಂತದಲ್ಲಿ ನಡೆಸಲಾಗುತ್ತಿರುವ ಪಾಠ ಆಧಾರಿತ ಮೌಲ್ಯ ಮಾಪನದ ವಿಶ್ಲೇಷಣೆ ಕುರಿತು ಪೋಷಕರಿಗೆ ಮಾಹಿತಿ ನೀಡಲಾಗುತ್ತದೆ.
ಪ್ರಮುಖ ಪರೀಕ್ಷೆಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಮತ್ತು ಆತಂಕ ನಿವಾರಣೆ, ಏಕಾಗ್ರತೆ, ಮಾನಸಿಕ ಒತ್ತಡಗಳ ನಿರ್ವಹಣೆ ಬಗ್ಗೆ ಸಂವಾದ ಕಾರ್ಯಕ್ರಮ ಏರ್ಪಡಿಸಿ, ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಮಾತುಗಳನ್ನು ಶಿಕ್ಷಕರು ಹೇಳಲಿದ್ದಾರೆ. ಸರ್ಕಾರ ವಿದ್ಯಾರ್ಥಿಗಳಿಗೆ ನೀಡುತ್ತಿರುವ ವಿವಿಧ ಸವಲತ್ತುಗಳ ಅನುಷ್ಠಾನ ಕುರಿತು ಪೋಷಕರಿಗೆ ಮಾಹಿತಿ ಒದಗಿಸಲಾಗುತ್ತದೆ. ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣಾ ನೀತಿ, ಪೋಕ್ಸೋ ಕಾಯ್ದೆ ಕುರಿತಂತೆ ಪೋಷಕರಲ್ಲಿ ಅರಿವು ಮೂಡಿಸಲಿದ್ದಾರೆಂದು ಜಿಪಂ ಸಿಇಒ ಡಾ. ಆಕಾಶ್ ತಿಳಿಸಿದ್ದಾರೆ.2,22,004 ಮಕ್ಕಳ ಪೋಷಕರು ಭಾಗಿ ಜಿಲ್ಲೆಯಲ್ಲಿನ 1619 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 88,613 ವಿದ್ಯಾರ್ಥಿಗಳು, 115- ಪ್ರೌಢಶಾಲೆಗಳಲ್ಲಿ 18,362 ವಿದ್ಯಾರ್ಥಿಗಳು ಹಾಗೂ 38 ಪದವಿಪೂರ್ವ ಕಾಲೇಜುಗಳಲ್ಲಿ 8,054 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 2,22,004 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಈ ಮಕ್ಕಳ ಎಲ್ಲ ಪೋಷಕರು ನ. 14 ರಂದು ನಡೆಯುವ ಪೋಷಕ-ಶಿಕ್ಷಕ ಮಹಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೆ ವಿದ್ಯಾರ್ಥಿಗಳ ಪೋಷಕರು ಈ ಮಹಾಸಭೆಯಲ್ಲಿ ಭಾಗವಹಿಸಲು ಅನುವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಡಿಪಿಐ ಮಂಜುನಾಥ್ ಹಾಗೂ ಡಿಡಿಪಿಯು ತಿಮ್ಮಯ್ಯ ತಿಳಿಸಿದ್ದಾರೆ.