ಕನ್ನಡಪ್ರಭ ವಾರ್ತೆ ಹಳೇಬೀಡುಗ್ರಾಮೀಣ ಪ್ರದೇಶದ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತವಾಗಬಾರದು ಎಂಬ ಸರ್ಕಾರದ ಆದೇಶ ಮೇರೆಗೆ ಎಲ್ಲಾ ಶಾಲೆಗಳಲ್ಲಿ ಸಮುದಾಯದತ್ತ ಶಿಕ್ಷಣ ಕಾರ್ಯಕ್ರಮವನ್ನು ನೀಡುತ್ತಿದ್ದೇವೆ ಎಂದು ಶಿಕ್ಷಣ ಇಲಾಖೆಯ ಸಿಆರ್ಪಿ ನಾರಾಯಣ ತಿಳಿಸಿದರು.
ಸರ್ಕಾರಿ ಕೆಪಿಎಸ್ ಶಾಲಾ ಅಭಿವೃದ್ಧಿ ಅಧ್ಯಕ್ಷ ಬಿ.ಎಸ್. ಸೋಮಶೇಖರ್ ಮಾತನಾಡುತ್ತಾ, ಹಿಂದಿನಿಂದ ಇಂದಿನವರೆಗೂ ಸರಕಾರಿ ಶಾಲೆಯಲ್ಲಿ ಓದಿ ಉನ್ನತ ಸ್ಥಾನವನ್ನು ಪಡೆದ ಮಕ್ಕಳು ಹೆಚ್ಚು ವಿದ್ಯಾವಂತರಾಗಿದ್ದಾರೆ. ಖಾಸಗಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಶಾಲೆ, ಪುಸ್ತಕ, ಶಿಕ್ಷಕ ಮಾತ್ರ ಅರ್ಥ ಮಾಡಿಕೊಂಡಿರುತ್ತಾರೆ. ಆದರೆ ಸರ್ಕಾರಿ ಶಾಲೆಯಲ್ಲಿ ಓದಿದಂತ ವಿದ್ಯಾರ್ಥಿಗಳಿಗೆ ಹೊರಗಿನ ಪ್ರಪಂಚ, ಜೀವನದ ಬಗ್ಗೆ ಹಾಗೂ ಜೀವನ ಸಾಗಿಸುವುದು ಹೇಗೆ ಎಂಬುದು ಗೊತ್ತು. ಸರ್ಕಾರಿ ಶಾಲೆ ಉಳಿಸಿ-ಬೆಳೆಸಿ ಎಂದು ತಿಳಿಸಿದರು.
ಪ್ರೌಢಶಾಲೆ ವಿಭಾಗದ ಗಣಿತ ಶಿಕ್ಷಕರಾದ ಶಶಿಧರ್ ಮಾತನಾಡುತ್ತಾ, ಪ್ರತಿಯೊಬ್ಬ ಶಿಕ್ಷಕರು ಪ್ರತಿಭಾವಂತ ಬಡ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಅವರಿಗೆ ಹೆಚ್ಚಿನ ರೀತಿಯಲ್ಲಿ ವೈಯಕ್ತಿಕವಾಗಿ ಸಹಕಾರ ನೀಡಿದರೆ ಆ ವಿದ್ಯಾರ್ಥಿಯ ಪ್ರತಿಭಾವಂತ ವಿದ್ಯಾರ್ಥಿ ಆಗಲು ಸಾಧ್ಯವಾಗುತ್ತದೆ. ಎಲ್ಲಾ ಶಿಕ್ಷಕರು ತಮ್ಮ ಮನದಲ್ಲಿಟ್ಟುಕೊಂಡು ಬಡ ವಿದ್ಯಾರ್ಥಿಗೆ ಹೆಚ್ಚು ಸಹಕಾರ ನೀಡಿದರೆ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜು, ಶಾಲಾ ಅಭಿವೃದ್ಧಿಸಮಿತಿಯ ಸದಸ್ಯರಾದ ಬಸವರಾಜು, ಈಶ್ವರ್, ಯೋಗೀಶ್ ಹಾಗೂ ಮುಖ್ಯ ಶಿಕ್ಷಕಿ ಶಶಿಕಲಾ ಹಾಗೂ ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.