ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಬೆಳೆಸಲು ಪಾಲಕರು ಸಹಕರಿಸಿ: ಡಿಸಿ

KannadaprabhaNewsNetwork |  
Published : Jun 15, 2024, 01:00 AM IST
12ಡಿಡಬ್ಲೂಡಿ8ವಿಶ್ವಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯಲ್ಲಿ ವಿವಿಧ ಶಾಲಾ ಮಕ್ಕಳು ಧಾರವಾಡದಲ್ಲಿ ಜಾಗೃತಿ ಜಾಥಾ ನಡೆಸಿದರು.  | Kannada Prabha

ಸಾರಾಂಶ

ಮಕ್ಕಳಿಗೆ ಯಾವುದೇ ರೀತಿಯ ದೈಹಿಕ, ಮಾನಸಿಕ ಕಿರುಕುಳ ಆದಾಗ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿ ತಿಳಿಸಬೇಕು. ತೊಂದರೆ, ಕಿರುಕುಳ, ಹಲ್ಲೆ ಆದಾಗ ಭಯಪಡದೆ ಶಾಲೆಯ ಶಿಕ್ಷಕರಿಗೆ, ಪಾಲಕರಿಗೆ ಅದರಲ್ಲೂ ವಿಶೇಷವಾಗಿ ಮನೆಯಲ್ಲಿ ತಾಯಿಗೆ ಮಾಹಿತಿ ನೀಡಬೇಕು

ಧಾರವಾಡ:

ವಿದ್ಯೆ ಕಲಿಯುವ ಹೊತ್ತಿನಲ್ಲಿ ಮಕ್ಕಳನ್ನು ದುಡಿಮೆಗೆ ಕಳುಹಿಸಬಾರದು. ಇದು ಅಪರಾಧವೂ ಹೌದು. ಮಕ್ಕಳಲ್ಲಿ ಸಂಸ್ಕೃತಿ, ಸಂಸ್ಕಾರ ಬೆಳೆಸಲು ನಾವು ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.

ನಗರದ ಭಾರತ ಪ್ರೌಢಶಾಲೆಯ ಸಭಾಭವನದಲ್ಲಿ ಜಿಲ್ಲಾಡಳಿತವು ವಿವಿಧ ಇಲಾಖೆಗಳ ಜತೆಗೂಡಿ ಆಯೋಜಿಸಿದ್ದ ವಿಶ್ವಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಬಾಲ ಮತ್ತು ಕಿಶೋರ ಮಕ್ಕಳನ್ನು ದುಡಿಮೆಗೆ ಕಳುಹಿಸಬಾರದು. ಅವರಿಗೆ ಉತ್ತಮ ಸಂಸ್ಕಾರ ನೀಡಿ, ಶಿಕ್ಷಣ ಮತ್ತು ಕೌಶಲ್ಯಭರಿತ ತರಬೇತಿ ನೀಡಬೇಕು ಎಂದರು.

ಮಕ್ಕಳಿಗೆ ಯಾವುದೇ ರೀತಿಯ ದೈಹಿಕ, ಮಾನಸಿಕ ಕಿರುಕುಳ ಆದಾಗ ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡಿ ತಿಳಿಸಬೇಕು. ತೊಂದರೆ, ಕಿರುಕುಳ, ಹಲ್ಲೆ ಆದಾಗ ಭಯಪಡದೆ ಶಾಲೆಯ ಶಿಕ್ಷಕರಿಗೆ, ಪಾಲಕರಿಗೆ ಅದರಲ್ಲೂ ವಿಶೇಷವಾಗಿ ಮನೆಯಲ್ಲಿ ತಾಯಿಗೆ ಮಾಹಿತಿ ನೀಡಬೇಕು. ಇದು ಎಲ್ಲ ಮಕ್ಕಳಿಗೂ ಅನ್ವಯಿಸುತ್ತದೆ. ಬಾಲ್ಯವಿವಾಹ, ಒತ್ತಾಯದ ದುಡಿಮೆ ತಡೆಯಲು ನೇರವಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್. ದೊಡ್ಡಮನಿ, ಬಡತನ ಮತ್ತು ಶಿಕ್ಷಣದ ಕೊರತೆಯಿಂದ ಬಾಲ ಕಾರ್ಮಿಕ ಪದ್ಧತಿ ಇಂದಿಗೂ ಮುಂದುವರಿದೆ. ಮಕ್ಕಳ ವಿದ್ಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಕಡ್ಡಾಯ ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದೆ. ಇದರ ಬಗ್ಗೆ ಅರಿವು ಮೂಡಿಸಬೇಕೆಂದರು.

ಇತಿಹಾಸ ಅವಲೋಕಿಸಿದರೆ, ಮಕ್ಕಳನ್ನು ಅತೀ ಹೆಚ್ಚು ಕಠಿಣ ಹಾಗೂ ಅಪಾಯಕಾರಿ ಕೆಲಸಕ್ಕೆ ಬಳಸಿಕೊಂಡಿದ್ದಾರೆ. ಈ ವೇಳೆ ಹಲವಾರು ಮಕ್ಕಳು ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ. ಪಾಳೇಗಾರಿಕೆ, ಜಮೀನುದಾರಿ ಪದ್ಧತಿ ಹಾಗೂ ಬಂಡವಾಳಶಾಹಿ ಪದ್ಧತಿಗಳಲ್ಲಿ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳಲಾಗುತ್ತಿತ್ತು ಎಂದರು.

ಇದೇ ವೇಳೆ ಬಾಲಕಾರ್ಮಿಕ ಪದ್ಧತಿಯಿಂದ ಬಿಡುಗಡೆಯಾಗಿ ಶಾಲಾ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಜಿಲ್ಲಾಧಿಕಾರಿ ಶೈಕ್ಷಣಿಕ ಕಿಟ್ ವಿತರಿಸಿದರು. ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಪ್ರಮಾಣಪತ್ರ ಮತ್ತು ಬಹುಮಾನ ವಿತರಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿರಿಯ ಕಾರ್ಮಿಕ ನಿರೀಕ್ಷಕ ಅಶೋಕ ಒಡೆಯರ ಅವರನ್ನು ಸನ್ಮಾನಿಸಲಾಯಿತು. ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಬಸವರಾಜ ಪಂಚಾಕ್ಷರಿಮಠ ಸ್ವಾಗತಿಸಿದರು. ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ, ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ, ಶಹರ ಬಿಇಒ ಅಶೋಕ ಸಿಂಧಗಿ, ಮರಾಠಾ ವಿದ್ಯಾಪ್ರಸಾರಕ ಮಂಡಳಿ ಅಧ್ಯಕ್ಷ ಎಂ.ಎನ್. ಮೋರೆ, ಉಪಾಧ್ಯಕ್ಷ ಯಲ್ಲಪ್ಪ ಚವ್ಹಾಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀತಾ ವಾಡಕರ, ಕಾರ್ಮಿಕ ಅಧಿಕಾರಿ ಮಾರಿಕಾಂಬಾ ಹುಲಕೋಟಿ, ಪೊಲೀಸ್‌ ಅಧಿಕಾರಿ ಒಡೆಯರ್ ಇದ್ದರು.

ಹಿರಿಯ ಕಾರ್ಮಿಕ ನಿರೀಕ್ಷಕರಾದ ಅಕ್ರಮ ಅಲ್ಲಾಪುರ, ಭುವನೇಶ್ವರಿ ಕೋಟಿಮಠ, ಮೀನಾಕ್ಷಿ ಶಿಂದಿಹಟ್ಟಿ, ರಜನಿ ಹಿರೇಮಠ, ಸಂಗೀತಾ ಬೆನಕನಕೊಪ್ಪ, ಲತಾ ಟಿ.ಎಸ್. ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಭಾರತ ಪ್ರೌಢಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಸಿನಿಮಾಗಳ ನಿರ್ಮಾಣ ಅರ್ಧಕ್ಕರ್ಧ ಕುಸಿತ!
ಎಸ್ಸೆಸ್ಸೆಲ್ಸಿ: ಎಸ್‌ಬಿಆರ್‌ನ ಇಬ್ಬರು 4ನೇ ರ್‍ಯಾಂಕ್