ಪೋಷಕರು ಮಕ್ಕಳ ಭವಿಷ್ಯದ ಶಿಕ್ಷಣಕ್ಕೆ ಆದ್ಯತೆ ನೀಡಿ: ಮಾಜಿ ಸಂಸದ ಡಿ.ಕೆ.ಸುರೇಶ್ ಸಲಹೆ

KannadaprabhaNewsNetwork | Published : Apr 23, 2025 12:34 AM

ಸಾರಾಂಶ

ಈ ಅಂಗನವಾಡಿ ಕೇಂದ್ರವು ಅತ್ಯಂತ ಸುಸಜ್ಜಿತ ಹಾಗೂ ಸುಂದರವಾಗಿ ನಿರ್ಮಾಣ ಮಾಡಲಾಗಿದ್ದು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೋಷಕರು ಇದನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಕನಕಪುರ

ಶಿಕ್ಷಣ ಎಂಬುದು ಮಕ್ಕಳ ಭವಿಷ್ಯದ ದೊಡ್ಡ ಆಸ್ತಿಯಾಗಿದ್ದು, ಪೋಷಕರು ಬಾಲ್ಯದಿಂದಲೇ ತಮ್ಮ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿಯ ಶಿವನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ನರೇಗಾ ಯೋಜನೆಯಡಿ ಕಾಳೇಗೌಡನ ದೊಡ್ಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಭವ್ಯ ಭಾರತದ ಭವಿಷ್ಯದ ಪ್ರಜೆಗಳಾಗಿರುವ ಮಕ್ಕಳಿಗೆ ನಾವು ನೀಡುವ ಶಿಕ್ಷಣದಿಂದ ಅವರ ಜೀವನ ಶೈಲಿ ಬದಲಾಗಲಿದ್ದು, ಅವರಿಗಾಗಿ ಆಸ್ತಿ ಮಾಡದೇ ಉತ್ತಮ ಶಿಕ್ಷಣ ನೀಡಿದರೆ ಅದೇ ಅವರ ಪಾಲಿಗೆ ದೊಡ್ಡ ಆಸ್ತಿ ಆಗಲಿದೆ ಎಂದರು.

ಈ ನಿಟ್ಟಿನಲ್ಲಿ ಪೋಷಕರು ಅದರಲ್ಲೂ ಗ್ರಾಮೀಣ ಭಾಗದ ಜನತೆ ಅಂಗನವಾಡಿ ಕೇಂದ್ರಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುವ ಮೂಲಕ ಅವರ ಬುದ್ಧಿ ಕೌಶಲ್ಯಕ್ಕೆ ನಾಂದಿ ಹಾಡುವಂತೆ ತಿಳಿಸಿ, ಈ ಅಂಗನವಾಡಿ ಕೇಂದ್ರವು ಅತ್ಯಂತ ಸುಸಜ್ಜಿತ ಹಾಗೂ ಸುಂದರವಾಗಿ ನಿರ್ಮಾಣ ಮಾಡಲಾಗಿದ್ದು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೋಷಕರು ಇದನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಸ್. ರವಿ, ಗ್ರಾಪಂ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಭೀಮಾನಾಯ್ಕ್, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಡಿ. ವಿಜಯ್ ದೇವ್, ಜಿಪಂ ಮಾಜಿ ಅಧ್ಯಕ್ಷ ಬಸಪ್ಪ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಹರೀಶ್, ನಗರಸಭೆ ಮಾಜಿ ಅಧ್ಯಕ್ಷ ದಿಲೀಪ್, ಮುಖಂಡರಾದ ತಮ್ಮಣ್ಣ ಗೌಡ, ವೀರಪ್ಪ, ರಮೇಶ್ ಸೇರಿದಂತೆ ಪಕ್ಷದ ಹಲವು ಮುಖಂಡರು, ಗ್ರಾಮಸ್ಥರು ಈ ವೇಳೆ ಉಪಸ್ಥಿತರಿದ್ದರು.

Share this article