ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಚೆಸ್ ಪಂದ್ಯಾವಳಿ
ಕನ್ನಡಪ್ರಭ ವಾರ್ತೆ ಭಟ್ಕಳಪಟ್ಟಣದ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಚೆಸ್ ಪಂದ್ಯಾವಳಿಯು ನಡೆಯಿತು.
ನ.೨೪ರಂದು ಜರುಗುವ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ವ್ಯಾಪ್ತಿಯ ಕಾಲೇಜುಗಳ ಏಕ ವಲಯದ ಪುರುಷ ಮತ್ತು ಮಹಿಳೆಯರ ಚೆಸ್ ಪಂದ್ಯಾವಳಿಯ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯುವ ಉದ್ಯಮಿ ಲಕ್ಷ್ಮೀಶ್ ಎಂ. ನಾಯ್ಕ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.ಚದುರಂಗ ಸ್ಪರ್ಧೆಯ ನಿರ್ಣಾಯಕ ಅಣ್ಣಪ್ಪ ದೇವಾಡಿಗ, ಉಪನಿರ್ಣಾಯಕ ಧನರಾಜ್ ಖಾರ್ವಿ, ರಾಷ್ಟ್ರೀಯ ಚೆಸ್ ತರಬೇತು ಗುರುರಾಜ್ ಶೆಟ್ಟಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಶ್ರೀನಾಥ್ ಪೈ ಸ್ವಾಗತಿಸಿದರು.
ವಾಣಿಜ್ಯ ವಿಭಾಗದ ಉಪ ಪ್ರಾಂಶುಪಾಲ ಪಿ.ಎಸ್. ಹೆಬ್ಬಾರ್ ಕಾಲೇಜಿನಲ್ಲಿ ಸಿದ್ದಪಡಿಸಿದ ಜಿಎಸ್ಟಿ ೨.೦ ಮಾದರಿಗಳಿಗಾಗಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿದರು. ಮಹಿಳೆಯರ ವಿಭಾಗದಲ್ಲಿ ಅಳ್ಳಂಕಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಂಜನಾ ನಾಯ್ಕ, ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ತನುಶ್ರೀ ಆರ್., ಅಳ್ಳಂಕಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಿಂಧು ಗೌಡ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದರು. ಪುರುಷರ ವಿಭಾಗದಲ್ಲಿ ಅಂಜುಮನ್ ಪದವಿ ಪೂರ್ವ ಕಾಲೇಜಿನ ಆಯಮನ್, ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ಅಂಕಿತ್, ಅಂಜುಮನ್ ಪದವಿ ಪೂರ್ವ ಕಾಲೇಜಿನ ಮುಸಾಹ್ಹಿಲ್ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದರು.ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ಸುರೇಶ ನಾಯಕ, ದೈಹಿಕ ಶಿಕ್ಷಣ ನಿರ್ದೇಶಕ ವಿನಾಯಕ ನಾಯ್ಕ ಉಪಸ್ಥಿತರಿದ್ದರು. ಕಾರ್ತಿಕ್ ಶಾನಭಾಗ್ ನಿರೂಪಿಸಿ ವಂದಿಸಿದರು.