ಸಮರ್ಪಕ ಬಸ್‌ ಸಂಚಾರಕ್ಕೆ ಆಗ್ರಹಿಸಿ ಪ್ರಯಾಣಿಕರಿಂದ ಪ್ರತಿಭಟನೆ

KannadaprabhaNewsNetwork |  
Published : Jan 10, 2026, 02:15 AM IST
ಹಾವೇರಿ ನಗರದ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದಲ್ಲಿ ಹಾನಗಲ್ಲ ಮಾರ್ಗದಲ್ಲಿನ ಬಸ್‌ಗಳ ಕೊರತೆ ಖಂಡಿಸಿ ಪ್ರಯಾಣಿಕರು,ಸಾರ್ವಜನಿಕರು ದಿಢೀರ್ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಹಾನಗಲ್ಲ ಮಾರ್ಗದಲ್ಲಿ ಸಮರ್ಪಕ ಬಸ್ ಸಂಚಾರಕ್ಕೆ ಆಗ್ರಹಿಸಿ ಪ್ರಯಾಣಿಕರು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು. ಒಂದು ತಾಸಿಗೂ ಹೆಚ್ಚು ಕಾಲ ಬಸ್‌ ತಡೆದು ಸಾರಿಗೆ ಸಂಸ್ಥೆಯ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಹಾವೇರಿ: ಹಾನಗಲ್ಲ ಮಾರ್ಗದಲ್ಲಿ ಸಮರ್ಪಕ ಬಸ್ ಸಂಚಾರಕ್ಕೆ ಆಗ್ರಹಿಸಿ ಪ್ರಯಾಣಿಕರು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು. ಒಂದು ತಾಸಿಗೂ ಹೆಚ್ಚು ಕಾಲ ಬಸ್‌ ತಡೆದು ಸಾರಿಗೆ ಸಂಸ್ಥೆಯ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಹಾನಗಲ್ಲ, ಶಿರಸಿ ಮಾರ್ಗದಲ್ಲಿ ಸಮರ್ಪಕವಾಗಿ ಬಸ್‌ಗಳು ಸಂಚರಿಸುತ್ತಿಲ್ಲ. ಬೆಳಗ್ಗೆ 7 ಗಂಟೆಯಿಂದ ಕಾಯುತ್ತ 2 ಗಂಟೆಯಾದರೂ ಬಸ್‌ ಇಲ್ಲ. ಹಾನಗಲ್ಲ ಸೇರಿದಂತೆ ಅನೇಕ ಕಡೆ ಕೆಲಸ ಮಾಡುವವರು ಸಮಯಕ್ಕೆ ಸರಿಯಾಗಿ ಕಚೇರಿಗೆ ತಲುಪಲು ಆಗುತ್ತಿಲ್ಲ. ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ನಿತ್ಯವೂ ಇದೇ ಗೋಳಾಗಿದ್ದು, ಈ ಬಗ್ಗೆ ಅನೇಕ ಬಾರಿ ಸಂಬಂಧಪಟ್ಟವರ ಗಮನಕ್ಕೆ ತಂದರೂ ಕ್ರಮವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಯಾಣಿಕರ ದಿಢೀರ್ ಪ್ರತಿಭಟನೆಯಿಂದಾಗಿ ಬಸ್ ನಿಲ್ದಾಣದ ಸುತ್ತ ಟ್ರಾಫಿಕ್ ಜಾಮ್ ಉಂಟಾಗಿ ಹಲವೆಡೆ ತೆರಳಬೇಕಾಗಿದ್ದ ಬಸ್‌ಗಳು ಬಸ್ ನಿಲ್ದಾಣದಲ್ಲೇ ಕೆಲಕಾಲ ನಿಲ್ಲುವಂತಾಯಿತು.ಈ ವೇಳೆ ಪ್ರಯಾಣಿಕರು ಸಕಾಲಕ್ಕೆ ಬಸ್ ಓಡಿಸದ ಸಾರಿಗೆ ಅಧಿಕಾರಿ, ಸಿಬ್ಬಂದಿ ವಿರುದ್ಧ ಅಸಮಾಧಾನ ಹೊರಹಾಕಿದರು. ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗದಿದ್ದಲ್ಲಿ ಅರ್ಧ ದಿನ ಇಲ್ಲವೇ ಪೂರ್ತಿ ದಿನದ ರಜೆ ಹಾಕುತ್ತಾರೆ. ಇದರಿಂದ ತೀವ್ರ ಸಮಸ್ಯೆ ಎದುರಿಸುವಂತಾಗಿದೆ ಎಂದು ನೌಕರರು ದೂರಿದರು.

ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದ ಡಿಪೋ ಮ್ಯಾನೇಜರ್ ಪ್ರಶಾಂತ್ ಮಾತನಾಡಿ, ಹಾವೇರಿ - ಶಿರಸಿ ರಸ್ತೆ ಕಾಮಗಾರಿ ನಡೆದಿದ್ದು ಬಸ್ ಸಂಚಾರ ವಿಳಂಬವಾಗುತ್ತಿದೆ. ಎರಡು ದಿನ ಕಾಲಾವಕಾಶ ನೀಡಿ, ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಎರಡು ಹೆಚ್ಚುವರಿ ಬಸ್ ಓಡಿಸಲಾಗುವುದು ಎಂದರು. ಇದಕ್ಕೆ ಆಕ್ಷೇಪಿಸಿದ ಪ್ರಯಾಣಿಕರು, ಕಳೆದ ಆರು ತಿಂಗಳಿಂದ ಪೋನ್ ಮಾಡಿ ಹೇಳುತ್ತಿದ್ದೇವೆ, ಸಾಕಷ್ಟು ಬಾರಿ ಮೌಖಿಕವಾಗಿ ತಿಳಿಸಿದರೂ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ತರಾಟೆಗೆ ತೆಗೆದುಕೊಂಡು, ವಿಭಾಗೀಯ ನಿಯಂತ್ರಣಾಧಿಕಾರಿ ಸ್ಥಳಕ್ಕೆ ಬರಲೇಬೇಕೆಂದು ಪಟ್ಟು ಹಿಡಿದರು.

ಈ ವೇಳೆಗೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಕೆಗೆ ಮುಂದಾದರೂ ಸಾರಿಗೆ ಸಿಬ್ಬಂದಿ ಬಸ್ ವ್ಯವಸ್ಥೆ ಮಾಡದ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್ ಬಿಟ್ಟರೆ ಮಾತ್ರ ಪ್ರತಿಭಟನೆ ಹಿಂಪಡೆಯುವುದಾಗಿ ಪಟ್ಟು ಹಿಡಿದರು. ಹಾನಗಲ್ಲ ಮಾರ್ಗಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದ ನಂತರ ಹಾಗೂ ಹೆಚ್ಚುವರಿ ಬಸ್ ಮತ್ತು ಸಕಾಲಕ್ಕೆ ಬಸ್ ಓಡಿಸಲು ಮನವಿ ಪತ್ರ ಬರೆದು ಸಲ್ಲಿಸಿ ಎರಡು ದಿನಗಳಲ್ಲಿ ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಿಂಪಡೆದರು.ಪ್ರತಿಭಟನೆಯಲ್ಲಿ ಪ್ರಯಾಣಿಕರಾದ ಸುಮಂಗಲಾ, ಮಂಜುಳಾ, ರಾಜೇಶ್ವರಿ, ರಜತ್, ನೂರ್ ಅಹ್ಮದ, ಚಿರಾಗ್, ನವೀನ್, ಚಲುವರಾಯ, ಹನುಮಂತ, ಬಸವರಾಜ ಸೇರಿದಂತೆ ಹಲವಾರು ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ