ಮಂಗಳೂರು: ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯ ಎಂದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ನಿಗದಿತ ಮೊತ್ತವನ್ನು ಪಾವತಿಸಿ ಸೂಕ್ತ ಕ್ರಮ ಕೈಗೊಂಡಿದ್ದರೆ ರೋಗಿಗಳು ಇಂದು ಪರದಾಡುವ ಸ್ಥಿತಿ ಬರುತ್ತಿರಲಿಲ್ಲ. ಇದೇ ವೇಳೆ ಕೇಂದ್ರ ಸರ್ಕಾರದಿಂದ ನೀಡಲ್ಪಡುವ ವೈದ್ಯಕೀಯ ಚಿಕಿತ್ಸೆ ಸೌಲಭ್ಯಗಳು ಮುಂದುವರಿದಿದೆ. ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಚಿಕಿತ್ಸೆಗಳು ಮಾತ್ರ ಸಿಗದೇ ರೋಗಿಗಳಿಗೆ ತೊಂದರೆಯಾಗಿದೆ. ಆ ಮೂಲಕ ಲಕ್ಷಾಂತರ ಕಾರ್ಮಿಕರ ಆರೋಗ್ಯದ ವಿಷಯದಲ್ಲಿ ಚೆಲ್ಲಾಟವಾಡುತ್ತಿರುವುದನ್ನು ಬಿಟ್ಟು, ಇಎಸ್ಐ ಎಂಬುದು ಕಾರ್ಮಿಕರ ಹಕ್ಕು ಹಾಗೂ ಸಾಮಾಜಿಕ ಭದ್ರತೆಯ ಅಂಶವೆಂಬುದನ್ನು ಮನಗಂಡು ಈ ಕೂಡಲೇ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಶಾಸಕರು ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.