ಶಾಲೆಯಲ್ಲಿ ಯಕ್ಷ ಶಿಕ್ಷಣ ನೀಡಿ: ಶಾಸಕ ಕೋಟ್ಯಾನ್

KannadaprabhaNewsNetwork |  
Published : Feb 07, 2024, 01:51 AM IST
11 | Kannada Prabha

ಸಾರಾಂಶ

ಕಾರ್ಯಕ್ರಮದ ಅಂಗವಾಗಿ ಯಕ್ಷರೂಪಕ ಸ್ಪರ್ಧೆ, ಯಕ್ಷ ಲೇಖನ ಸ್ಪರ್ಧೆ, ಯಕ್ಷಜ್ಞಾನ ಪರೀಕ್ಷಾ ಪಂಥ, ಯಕ್ಷ ರಂಗು ಮುಖವರ್ಣಿಕೆ, ಶ್ಲೋಕ ಕಂಠಪಾಠ, ಯಕ್ಷ ರಸ ಪ್ರಶ್ನೆ, ಯಕ್ಷ ಸ್ವಗತ ಸ್ಪರ್ಧೆಗಳು ವಿವಿಧ ವೇದಿಕೆಗಳಲ್ಲಿ ನಡೆದವು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಪ್ರತಿಭಾವಂತ ಮತ್ತು ಆಸಕ್ತಿ ಹೊಂದಿದ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಯಕ್ಷ ಶಿಕ್ಷಣವನ್ನು ನೀಡಬೇಕು. ನಮ್ಮ ಜೀವನಕ್ಕೆ ಬೇಕಾದ ಅಮೂಲ್ಯ ವಿಷಯಗಳನ್ನು ಅರಿತುಕೊಳ್ಳಲು ಯಕ್ಷಗಾನ ಒಳ್ಳೆಯ ಮಾಧ್ಯಮ. ಸದುದ್ದೇಶದಿಂದ ಪಟ್ಲ ಫೌಂಡೇಶನ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ ಎಂದು ಶಾಸಕ ಉಮಾನಾಥ್ ಎ. ಕೋಟ್ಯಾನ್ ಹೇಳಿದರು.

ವಿದ್ಯಾಗಿರಿಯ ಮುಂಡ್ರೆದಗುತ್ತು ಅಮರನಾಥ ಶೆಟ್ಟಿ (ಕೃಷಿ ಸಿರಿ)ಸಭಾಂಗಣದಲ್ಲಿ ಮಂಗಳವಾರ ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ಕಲೆಯಾಧಾರಿತ ರಾಜ್ಯಮಟ್ಟದ ಸ್ಪರ್ಧೆ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ- ೨೦೨೩-೨೪’ದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ನಮ್ಮ ಪೂರ್ವಜರು ಅನಕ್ಷರಸ್ಥರಾಗಿದ್ದರೂ, ರಾಮಾಯಣ ಹಾಗೂ ಮಹಾಭಾರತದ ಕಥೆಗಳನ್ನು ತಿಳಿದುಕೊಂಡು ಮಕ್ಕಳಿಗೆ ತಿಳಿಸುತ್ತಿದ್ದರು. ಏಕೆಂದರೆ ಅವರು ಯಕ್ಷಗಾನವನ್ನು ನೋಡಿ ಅದನ್ನು ಅನುಭವಿಸುತ್ತಿದ್ದರು. ಪೌರಾಣಿಕ ಕಥೆಗಳನ್ನು ಅರ್ಥ ಮಾಡಿಕೊಳ್ಳಲು ಯಕ್ಷಗಾನವು ಸಹಕಾರಿ ಎಂದು ಅವರು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ, ಯಕ್ಷಗಾನವನ್ನು ಒಂದು ಪರಿಪೂರ್ಣ ಕಲೆಯನ್ನಾಗಿ ಮಾಡುವ ಮಹತ್ಕಾರ್ಯವನ್ನು ಕಲಾವಿದರು, ಭಾಗವತರು, ವೇಷಧಾರಿಗಳು ಮಾಡುತ್ತಿದ್ದಾರೆ. ಇವರ ಕೊಡುಗೆಯಿಂದ ಯಕ್ಷಗಾನ ಅತ್ಯುನ್ನತ ಸ್ಥಾನಕ್ಕೆ ಏರಿದೆ ಎಂದು ವಿಶ್ಲೇಷಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾತನಾಡಿ, ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸುವುದು ಸರ್ವಶ್ರೇಷ್ಠ ಕೆಲಸ. ವಿದ್ಯಾರ್ಥಿಗಳಿಗೆ ವಿದ್ಯೆ -ಬುದ್ಧಿಯ ಜೊತೆಗೆ ಯಕ್ಷಗಾನದ ಪರಿಚಯ ಮಾಡಿಸುವುದು ನಮ್ಮ ಕರ್ತವ್ಯ. ಪಟ್ಲ ಸತೀಶ್ ಶೆಟ್ಟಿ ಅವರಂತಹ ಭಾಗವತ ಹಾಗೂ ಯಕ್ಷ ಕಲಾವಿದರು, ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವುದರ ಜೊತೆ ಅನೇಕ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ನೀಡಿ, ಸಮಾಜಕ್ಕೆ ಕೊಡುಗೆ ನೀಡುತ್ತಿದ್ದಾರೆ ಎಂದರು. ಯಕ್ಷಗಾನವನ್ನು ಕಲಿತ ವಿದ್ಯಾರ್ಥಿಗಳಲ್ಲಿ ಕನ್ನಡ ಪ್ರಬಲ ಹಾಗೂ ಅರ್ಥಪೂರ್ಣವಾಗಿ ಮೂಡಿಬಂದಿರುತ್ತದೆ. ಕನ್ನಡ ಭಾಷೆಯನ್ನು ಕಟ್ಟುವಲ್ಲಿ ಯಕ್ಷಗಾನ ಮಹತ್ಕಾರ್ಯವನ್ನು ಮಾಡುತ್ತಿದೆ ಎಂದರು.

ಬುಟ್ಟಿಕೆರೆ ಪುರುಷೋತ್ತಮ ಪೂಂಜಾ ಅವರ ಪತ್ನಿ ಶೋಭಾ ಪುರುಷೋತ್ತಮ ಪೂಂಜ ಅವರನ್ನು ಗೌರವಿಸಲಾಯಿತು.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಂಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ. ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ್ ಶೆಟ್ಟಿ ವಂದಿಸಿದರು.

ಮೂಡುಬಿದಿರೆಯ ಉದ್ಯಮಿ ಕೆ. ಶ್ರೀಪತಿ ಭಟ್, ಫೌಂಡೇಷನ್ ಟ್ರಸ್ಟ್‌ನ ಪದಾಧಿಕಾರಿಗಳಾದ ಪುರುಷೋತ್ತಮ ಕೆ. ಭಂಡಾರಿ, ದಿವಾಕರ್ ರಾವ್, ಡಾ. ಮನು ರಾವ್, ಸುದೇಶ್ ಕುಮಾರ್ ರೈ, ಭುಜಬಲಿ ಧರ್ಮಸ್ಥಳ, ಸರಪಾಡಿ ಅಶೋಕ ಶೆಟ್ಟಿ, ದೀವಿತ್ ಕೋಟ್ಯಾನ್, ಪಣಂಬೂರು ವಾಸುದೇವ ಐತಾಳ್, ಡಾ.ಎಂ. ಪ್ರಭಾಕರ ಜೋಶಿ, ಪ್ರೋ.ಎಂ.ಎಲ್‌. ಸಾಮಗ, ಕದ್ರಿ ಪ್ರದೀಪ್ ಆಳ್ವ ಇದ್ದರು.

ವಿವಿಧ ಸ್ಪರ್ಧೆಗಳು: ಕಾರ್ಯಕ್ರಮದ ಅಂಗವಾಗಿ ಯಕ್ಷರೂಪಕ ಸ್ಪರ್ಧೆ, ಯಕ್ಷ ಲೇಖನ ಸ್ಪರ್ಧೆ, ಯಕ್ಷಜ್ಞಾನ ಪರೀಕ್ಷಾ ಪಂಥ, ಯಕ್ಷ ರಂಗು ಮುಖವರ್ಣಿಕೆ, ಶ್ಲೋಕ ಕಂಠಪಾಠ, ಯಕ್ಷ ರಸ ಪ್ರಶ್ನೆ, ಯಕ್ಷ ಸ್ವಗತ ಸ್ಪರ್ಧೆಗಳು ವಿವಿಧ ವೇದಿಕೆಗಳಲ್ಲಿ ನಡೆದವು. ಒಂದೇ ಬಾರಿ ೧೬೫೦ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಯಕ್ಷರೂಪಕದ ಮೂಲಕ ರಂಗ ಪ್ರವೇಶ ಮಾಡಿದ್ದು ಎಲ್ಲರ ಗಮನ ಸೆಳೆಯಿತು. ಅವಿಭಜಿತ ದ.ಕ, ತುಮಕೂರು ಶಿವಮೊಗ್ಗ ಜಿಲ್ಲೆಗಳಿಂದ ಒಟ್ಟು ೨೦೭೪ ಕ್ಕೂ ಅಧಿಕ ವಿದ್ಯಾರ್ಥಿಗಳು ಏಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ