ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಡಿ.7 ಮತ್ತು 8 ರಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ತಪಾಸಣೆಗೆ ಅನುಕೂಲವಾಗುವಂತೆ ಹೆಚ್ಚುವರಿ ಪೊಲೀಸರನ್ನು ನೇಮಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಗೊಂದಲ ಹಾಗೂ ಅಕ್ರಮಗಳಿಗೆ ಎಡೆ ಮಾಡಿಕೊಡದಂತೆ ಪರೀಕ್ಷಾ ಕಾರ್ಯ ನಡೆಸಬೇಕು. ಪರೀಕ್ಷಾ ಸಂಬಂಧ ಕೆಪಿಎಸ್ಸಿ ನೀಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲನೆ ಮಾಡಬೇಕು ಎಂದು ತಾಕೀತು ಮಾಡಿದರು. ಮೊಬೈಲ್, ಬ್ಲೂಟೂತ್ ಮತ್ತು ಆಧುನಿಕ ಸಂವಹನದ ಉಪಕರಣ ಬಳಸಿ ಪರೀಕ್ಷಾ ಅಕ್ರಮ ಮಾಡುವುದನ್ನು ತಡೆಯಲು ಅಭ್ಯರ್ಥಿಗಳನ್ನು ಸಂಪೂರ್ಣವಾಗಿ ತಪಾಸಣೆ ನಡೆಸಬೇಕು. ಕೆಪಿಎಸ್ಸಿ ವತಿಯಿಂದ ತಪಾಸಣೆಗೆ ವ್ಯಕ್ತಿಗಳನ್ನು ನಿಯೋಜನೆ ಮಾಡುವುದಾಗಿ ತಿಳಿಸಿದ್ದಾರೆ. ಆದಾಗ್ಯೂ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ತಪಾಸಣೆಗಾಗಿ ಪ್ರತ್ಯೇಕ ತಂಡ ರಚಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಿಗೂ ಮಹಿಳಾ ಅಭ್ಯರ್ಥಿಗಳ ತಪಾಸಣೆಗೆ ಅನುಕೂಲವಾಗುವಂತೆ ಹೆಚ್ಚುವರಿ ಮಹಿಳಾ ಪೊಲೀಸರನ್ನು ತಪ್ಪದೇ ನೇಮಿಸಬೇಕು. ಅಕ್ರಮ ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಹಾಗೂ ಪರೀಕ್ಷಾ ನಡೆಯುವ ಕೊಠಡಿಗಳಲ್ಲಿ ಸಿಸಿಟಿವಿ ಈಗಾಗಲೇ ಅಳವಡಿಸಲು ಸೂಚನೆ ನೀಡಲಾಗಿದೆ ಎಂದರು. ಪರೀಕ್ಷಾ ಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಇದಕ್ಕೆ ಪೂರಕವಾಗಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗುವುದು. ಖಜಾನೆ ಅಧಿಕಾರಿ, ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕರು ಪ್ರಶ್ನೆಪತ್ರಿಕೆ ಹಾಗೂ ಓಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.
ಚಳ್ಳಕೆರೆ ತಹಸೀಲ್ದಾರ್ ರೆಹಮಾನ್ ಪಾಷ, ಡಿವೈಎಸ್ಪಿ ದಿನಕರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಜಿಲ್ಲಾ ಖಜನಾಧಿಕಾರಿ, ಅಂಚೆ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಸಬೆಯಲ್ಲಿ ಭಾಗವಹಿಸಿದ್ದರು.