ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಮುಂಬರುವ ತಿಂಗಳುಗಳಲ್ಲಿ ಸರಣಿ ಲೋಕ್ ಅದಾಲತ್ ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಆ. 21 ರಿಂದ 23 ರಂದು ಸಮಾಧಾನ ಸಮಾರೋಹ ಎಂಬ ವಿಶೇಷ ಲೋಕ್ ಅದಾಲತ್ ನಡೆಯಲಿದೆ ಎಂದರು.
ಜಿಲ್ಲೆಯಿಂದ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ, ಬಹುಕಾಲದಿಂದ ಬಾಕಿ ಇರುವ 47 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಗುರುತಿಸಲಾಗಿದೆ. ಹೀಗೆ ಸುಪ್ರೀಂ ಕೋರ್ಟ್ನಲ್ಲಿ ಬಹುಕಾಲದಿಂದ ಬಾಕಿ ಇದ್ದು, ರಾಜೀ ಸಂಧಾನಕ್ಕೆ ಸಿದ್ದವಿರುವವರು ಈಗಲೂ ಸಹ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಸಮಾಧಾನ ಸಮಾರೋಹಕ್ಕೆ ಗುರುತಿಸಲಾದ ಪ್ರಕರಣಗಳಲ್ಲಿ ಪಕ್ಷಗಾರರಿಗೆ ನೋಟಿಸ್ ಹೊರಡಿಸಲಾಗುತ್ತದೆ. ನಿಗದಿತ ದಿನಾಂಕದಂದು ನುರಿತ ಮಧ್ಯಸ್ಥಗಾರರ ವಿಚಾರಣೆ ನಡೆದು, ಸುಪ್ರೀಂ ಕೋರ್ಟ್ನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.ಈ ರೀತಿಯ ವಿಲೇವಾರಿಯಿಂದ ಪಕ್ಷಗಾರರಿಗೆ ಯಾವುದೇ ಹಣ ವ್ಯಯ ಆಗುವುದಿಲ್ಲ. ಹಾಗೂ ಸಮಾಧಾನದ ನ್ಯಾಯ ಒದಗುತ್ತದೆ, ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಸಾರ್ವಜನಿಕರು ತಮ್ಮ ಪ್ರಕರಣಗಳ ಸುಲಭ ವಿಲೇವಾರಿಗಾಗಿ samadhansamaroh@gmail.com ಗೆ ಇಮೇಲ್ ಮಾಡುವ ಮೂಲಕ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸುವ ಮೂಲಕ ಈ ಅವಕಾಶವನ್ನು ಬಳಸಿಕೊಳ್ಳಬಹುದು ಎಂದು ಹೇಳಿದರು.
ವೈವಾಹಿಕ ವಿವಾದಗಳು ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಅಪಘಾತ ಪರಿಹಾರ ಹಾಗೂ ವಿಮಾ ಪ್ರಕರಣಗಳು, ಸಿವಿಲ್ ವ್ಯಾಜ್ಯಗಳು, ಆಸ್ತಿ ವಿಭಾಗ ಹಾಗೂ ಭೂಸ್ವಾಧೀನ ಪ್ರಕರಣಗಳು, ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಹಾಗೂ ಗ್ರಾಹಕ ವೇದಿಕೆಯ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.
ಬಂಜಾರ ಸಮುದಾಯಕ್ಕೆ ವಿಶೇಷ ಶಿಬಿರ: ಶಿವಮೊಗ್ಗ ನಗರದ ಬಂಜಾರ ಸಮುದಾಯ ಭವನದಲ್ಲಿ ಮೇ 30 ರಂದು ಬಂಜಾರ ಸಮುದಾಯದವರಿಗಾಗಿ ವಿಶೇಷ ಕಾನೂನು ಅರಿವು ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದ್ದು, ಸಮುದಾಯಕ್ಕೆ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿಯನ್ನು ಸ್ಥಳದಲ್ಲಿಯೇ ನೀಡಲಾಗುತ್ತಿದ್ದು ಸಮುದಾಯದವರು ಇದರ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದರು.