ಕನ್ನಡಪ್ರಭ ವಾರ್ತೆ ಮಂಗಳೂರುನಮ್ಮ ಮನೆ, ಪರಿಸರದಲ್ಲಿ ಶಾಂತಿ, ನೆಮ್ಮದಿಯು ಅಲ್ಲಿ ಜೀವಿಸುವ ಮನುಷ್ಯರ ಸಂಸ್ಕಾರದ ಮೇಲೆ ಅವಲಂಬಿತವಾಗಿರುತ್ತದೆ. ಸಂಸ್ಕಾರದಿಂದಲೇ ಸಂಸಾರ್ (ಜಗತ್ತು) ಎಂದು ದೇಶದ ಉನ್ನತ ನಾಗರಿಕ ಪ್ರಶಸ್ತಿ ‘ನಾರಿಶಕ್ತಿ’ ಪುರಸ್ಕೃತೆ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗ ಶಿಕ್ಷಕಿ, ವಿಶ್ವವಿಖ್ಯಾತ ಪ್ರವಚನಕಾರರಾದ ಬ್ರಹ್ಮಕುಮಾರಿ ಶಿವಾನಿ ಹೇಳಿದ್ದಾರೆ.
ಮನೆ, ಸುತ್ತಲಿನ ಪರಿಸರದಲ್ಲಿ ಪ್ರೀತಿ, ಶಾಂತಿ, ನೆಮ್ಮದಿ ಇದ್ದರೆ ಮಾತ್ರ ಅದು ಸ್ವರ್ಗ ಅನಿಸುತ್ತದೆ, ಇಲ್ಲದಿದ್ದರೆ ನರಕ. ಇದನ್ನು ಶ್ರೀಮಂತಿಕೆ, ಮನೆಯ ಗಾತ್ರ, ದುಬಾರಿ ವಸ್ತು, ಪೀಠೋಪಕರಣಗಳ ಮೂಲಕ ಅಳೆಯಲಾಗದು. ಮನೆಯೊಳಗೆ ಬದುಕುವ ಜನರ ಸಂಸ್ಕಾರದ ಮೇಲೆ ಅವಲಂಬಿತ. ಅದನ್ನು ಸಾಕಾರಗೊಳಿಸಬೇಕು ಎಂದು ಕರೆ ನೀಡಿದರು.
ಕೊಡುವ ಕೈಗಳಿಗೆ ಸಂತೋಷ: ನಾವೆಲ್ಲರೂ ಮನುಷ್ಯ ಜೀವಿ (ಹ್ಯೂಮನ್ ಬೀಯಿಂಗ್ಸ್)ಗಳೇ ಹೊರತು ‘ಹ್ಯೂಮನ್ ಡೂಯಿಂಗ್ಸ್’ ಅಲ್ಲ. ಆದರೆ ನಾವು ‘ಬೀಯಿಂಗ್’ನಂತೆ ಯೋಚಿಸದೆ ‘ಡೂಯಿಂಗ್’ನಲ್ಲೇ ನಿರತರಾಗಿರುತ್ತೇವೆ. ಏನೇ ಕೆಲಸ ಮಾಡಿದರೂ ಅನೇಕರಿಗೆ ಜೀವನದಲ್ಲಿ ಸಂತೋಷ, ಪ್ರೀತಿ ದೊರೆಯಲ್ಲ. ಜೀವನದ ಸಂತೋಷ, ನಿಷ್ಕಲ್ಮಶತೆ ಕೊಡುವ ಕೈಗಳಲ್ಲಿ ಅಡಗಿರುತ್ತದೆ. ಕೊಡುವ ಕೈಗಳು ಎಂದೂ ನಮ್ಮ ಶಕ್ತಿಯನ್ನು ಬಲಗೊಳಿಸುತ್ತದೆ ಎಂದು ಶಿವಾನಿ ಹೇಳಿದರು.ಭಾವನಾತ್ಮಕ ಅಂತರ: ತೂಫಾನ್ ಬಂದರೆ ಕಿಟಕಿ ಮುಚ್ಚುತ್ತೇವೆ. ಕೋವಿಡ್ ಬಂದಿದ್ದಾಗ ಪರಸ್ಪರ ಅಂತರ ಇಡುವುದನ್ನು ರೂಢಿಸಿಕೊಂಡೆವು. ಅದೇ ರೀತಿ ಸಮಾಜದ ಇತರರ, ಪ್ರೀತಿಪಾತ್ರರ ಋಣಾತ್ಮಕ ಪಲ್ಲಟಗಳಿಗೆ ಭಾವನಾತ್ಮಕ ಅಂತರ ಇರಿಸಿದರೆ ನಿಮ್ಮನ್ನು ನೀವು ಉಳಿಸಿಕೊಳ್ಳಬಹುದು. ಹೀಗೆ ಅಂತರ ಇರಿಸಿಕೊಳ್ಳುವಾಗ ಅವರ ಮೇಲಿನ ಕಾಳಜಿ ಮರೆಯಬೇಡಿ. ಆಗ ನಿಮ್ಮ ಶಕ್ತಿ ಹೆಚ್ಚಿ ನಿಮ್ಮ ಪ್ರೀತಿಪಾತ್ರರು ಋಣಾತ್ಮಕತೆಯಿಂದ ಧನಾತ್ಮಕತೆಯೆಡೆಗೆ ಸಾಗುವುದನ್ನು ನೋಡುತ್ತೀರಿ ಎಂದರು.
ಮಂಗಳೂರಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ವಿಶ್ವೇಶ್ವರಿ ಮತ್ತಿತರರು ಇದ್ದರು.