ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶಾಂತಿಯುತ ಮತದಾನ

KannadaprabhaNewsNetwork | Published : Jun 4, 2024 12:30 AM

ಸಾರಾಂಶ

ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ, ಚಿಕ್ಕನಾಯಕನಹಳ್ಳಿ, ತಿಪಟೂರು, ಕುಣಿಗಲ್, ಗುಬ್ಬಿ, ಕೊರಟಗೆರೆ ಹಾಗೂ ಜಿಲ್ಲಾ ಕೇಂದ್ರ ತುಮಕೂರಿನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳ ಹೊರಾಂಗಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆಯಲ್ಲಿ ತೊಡಗಿದ್ದರು.

ಕನ್ನಡಪ್ರಭ ವಾರ್ತೆ ತುಮಕೂರುವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿ ಜಿಲ್ಲೆಯ 16 ಮತಗಟ್ಟೆಗಳಲ್ಲೂ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ.ಬೆಳಿಗ್ಗೆ 8 ಗಂಟೆಯಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ಬಿರುಸಿನಿಂದ ಸಾಗಿದ್ದು, ಶಿಕ್ಷಕ ಮತದಾರರು ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ನಡೆದಿರುವ ಚುನಾವಣೆಗೆ ಜಿಲ್ಲೆಯಲ್ಲಿ 7725 ಮತದಾರರಿದ್ದು, ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ 16 ಮತಗಟ್ಟೆಗಳಿಗೆ ಮತದಾರರು ಉತ್ಸಾಹದಿಂದ ತೆರಳಿ ಮತ ಹಾಕುತ್ತಿದ್ದ ದೃಶ್ಯ ಕಂಡು ಬಂತು.ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ, ಚಿಕ್ಕನಾಯಕನಹಳ್ಳಿ, ತಿಪಟೂರು, ಕುಣಿಗಲ್, ಗುಬ್ಬಿ, ಕೊರಟಗೆರೆ ಹಾಗೂ ಜಿಲ್ಲಾ ಕೇಂದ್ರ ತುಮಕೂರಿನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳ ಹೊರಾಂಗಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆಯಲ್ಲಿ ತೊಡಗಿದ್ದರು.ಕಾಂಗ್ರೆಸ್‌ನಿಂದ ಡಿ.ಟಿ. ಶ್ರೀನಿವಾಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹಾಲಿ ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಕಣದಲ್ಲಿದ್ದರೆ, ರೂಪ್ಸಾ ಸಂಘಟನೆಯ ಅಧ್ಯಕ್ಷೆ ಲೋಕೇಶ್ ತಾಳಿಕಟ್ಟೆ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ವಿನೋದ್ ಶಿವರಾಜ್ ಸ್ಪರ್ಧಿಸಿದ್ದಾರೆ. ಈ ಅಭ್ಯರ್ಥಿಗಳ ಭವಿಷ್ಯಕ್ಕೆ ಶಿಕ್ಷಕ ಮತದಾರರು ಮುದ್ರೆ ಒತ್ತುವ ಮೂಲಕ ರಾಜಕೀಯ ಹಣೆಬರಹ ಬರೆದಿದ್ದಾರೆ.ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಆವರಣಕ್ಕೆ ಬಿಜೆಪಿ ಅಭ್ಯರ್ಥಿ ವೈ.ಎನ್. ನಾರಾಯಣಸ್ವಾಮಿ, ಶಾಸಕ ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಬಿಜೆಪಿ ಮುಖಂಡರು ಭೇಟಿ ನೀಡಿ ಮತಯಾಚಿಸಿದರು.ತಾಲ್ಲೂಕು ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆ ಸಮೀಪ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಡಿ.ಸಿ. ಗೌರಿಶಂಕರ್ ಅವರು ತಮ್ಮ ಪಕ್ಷದ ಅಭ್ಯರ್ಥಿ ಪರ ಮತಯಾಚನೆಯಲ್ಲಿ ತೊಡಗಿದ್ದು ಕಂಡು ಬಂತು.

Share this article