ಪಿಂಚಣಿ ಸ್ಥಗಿತ, ವಿದ್ಯುತ್ ಕೊರತೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ಆಕ್ರೋಶ

KannadaprabhaNewsNetwork |  
Published : Sep 13, 2026, 01:15 AM IST
ಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಪಿಂಚಣಿ ಸ್ಥಗಿತ, ವಿದ್ಯುತ್ ಕೊರತೆ, ಬೆಲೆ ಏರಿಕೆ ಸೇರಿದಂತೆ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಶನಿವಾರ ತಾಲೂಕಿನ ಕಳಸಾಪುರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.

ತಾಲೂಕಿನ ಕಳಸಾಪುರ ಗ್ರಾಮದಲ್ಲಿ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಪಿಂಚಣಿ ಸ್ಥಗಿತ, ವಿದ್ಯುತ್ ಕೊರತೆ, ಬೆಲೆ ಏರಿಕೆ ಸೇರಿದಂತೆ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಶನಿವಾರ ತಾಲೂಕಿನ ಕಳಸಾಪುರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಜನರ ಪರವಾಗಿ ಧ್ವನಿ ಎತ್ತಲು ಹಾಗೂ ಅನ್ಯಾಯದ ವಿರುದ್ಧ ಹೋರಾಡಲು ಬಿಜೆಪಿ ಮುಂದಾಗಿದೆ. ಕಳೆದ ಚುನಾವಣೆಯಲ್ಲಿ ತಾವು ಸೋತಿರಬಹುದು. ಆದರೆ, ಜನರ ಹೋರಾಟ ಸೋತಿಲ್ಲ. ಸಮಸ್ಯೆಗಳಿಗೆ ಪರಿಹಾರ ದೊರೆವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.

ಅಂಗವಿಕಲರು, ವಿಧವೆಯರು ಹಾಗೂ ವೃದ್ಧರಿಗೆ ನೀಡುತ್ತಿದ್ದ ಪಿಂಚಣಿ ಯೋಜನೆಯನ್ನು ಆದಾಯದ ಮಿತಿ ನೆಪದಲ್ಲಿ ಸ್ಥಗಿತಗೊಳಿಸಿರುವುದು ಅನ್ಯಾಯ. ಕೆಲವರಿಗೆ ಆರೇಳು ತಿಂಗಳು, ಮತ್ತೆ ಕೆಲವರಿಗೆ ವರ್ಷದಿಂದ ಪಿಂಚಣಿ ಬಂದಿಲ್ಲ ಎಂಬ ದೂರುಗಳಿವೆ. ಸರ್ಕಾರ ಕೂಡಲೇ ಪಿಂಚಣಿ ಮರುಜಾರಿಗೊಳಿಸಿ, ಹಳೆ ಬಾಕಿ ಪಾವತಿಸಬೇಕು ಎಂದು ಒತ್ತಾಯಿಸಿದರು.

ವಿದ್ಯುತ್ ಕೊರತೆ: ಒಣಗುತ್ತವೆ ತೋಟಗಳು

ಶ್ರಾವಣ ಮಾಸದಲ್ಲಿಯೇ ಸಮರ್ಪಕ ವಿದ್ಯುತ್ ಪೂರೈಕೆಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನಕ್ಕೆ ಕೆಲವೇ ಗಂಟೆ ವಿದ್ಯುತ್ ನೀಡಲಾಗುತ್ತಿದ್ದು, ತೋಟಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳಸಾಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಉಪಕೇಂದ್ರಗಳ ಕಾಮಗಾರಿ ಪೂರ್ಣಗೊಂಡಿದ್ದರೂ ಅವುಗಳಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಿಲ್ಲ ಎಂದು ಆರೋಪಿಸಿದರು.

ಬರ ಘೋಷಣೆಗೆ ಆಗ್ರಹ

ಮಳೆ ಕೊರತೆಯಿಂದ ಚಿಕ್ಕಮಗಳೂರು ತಾಲೂಕು ಸೇರಿದಂತೆ ಹಲವು ಪ್ರದೇಶಗಳಲ್ಲಿ ಜೋಳ, ರಾಗಿ ಮತ್ತಿತರ ಬೆಳೆಗಳು ಒಣಗುತ್ತಿವೆ. ಬಿತ್ತನೆಗೆ ಖರ್ಚು ಮಾಡಿದ ಹಣ ಮರಳದ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ತಾಲೂಕನ್ನು ಬರಪೀಡಿತವೆಂದು ಘೋಷಿಸಿ, ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.

ಗುಟ್ಕಾ ನಿಷೇಧದ ಕುರಿತು ಸಚಿವರ ಹೇಳಿಕೆ ಪರಿಣಾಮ ಅಡಕೆ ಬೆಲೆ ಕುಸಿದಿದ್ದು, ಬೆಳೆಗಾರರು ನಷ್ಟ ಅನುಭವಿಸು ವಂತಾಗಿದೆ. ಆರೋಗ್ಯಕ್ಕೆ ಹಾನಿಕರವೆಂದು ಹೇಳುವ ಇತರ ಉತ್ಪನ್ನಗಳ ಬಗ್ಗೆಯೂ ಸರ್ಕಾರ ಇದೇ ರೀತಿಯ ಕ್ರಮ ಕೈ ಗೊಳ್ಳಲಿ ಎಂದು ಸವಾಲು ಹಾಕಿದರು.

ಬಿಪಿಎಲ್ ಕಾರ್ಡ್ ರದ್ದು, ಹೊಸ ಕಾರ್ಡ್ ವಿತರಣೆಯಲ್ಲಿ ವಿಳಂಬ, ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಗತ್ಯ ವಸ್ತುಗಳು ಮತ್ತು ವಿವಿಧ ಸೇವೆಗಳ ದರ ಹೆಚ್ಚಾಗಿದೆ ಎಂದು ದೂರಿದರು.ಅಭಿವೃದ್ಧಿ ಕಾಮಗಾರಿಗಳಿಗೆ ಬಿಜೆಪಿ ಮಂಜೂರಾತಿ

ತಮ್ಮ ಅಧಿಕಾರಾವಧಿಯಲ್ಲಿ ಭದ್ರಾ ನದಿಯಿಂದ ನೀರು ತರುವ ಯೋಜನೆ, ರಸ್ತೆ ಅಭಿವೃದ್ಧಿ ಹಾಗೂ ಕೆರೆಗಳಿಗೆ ನೀರು ತುಂಬಿ ಸುವ ಯೋಜನೆ ಸೇರಿದಂತೆ ಹಲವು ಕಾಮಗಾರಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾತಿ ದೊರೆತಿದೆ. ನೀರಾವರಿ ಯೋಜನೆಗಳ ಹೆಸರಿನಲ್ಲಿ ರಾಜಕೀಯ ಮಾಡದೆ, ಒಣಗುತ್ತಿರುವ ಕೆರೆಗಳಿಗೆ ನೀರು ಹರಿಸಬೇಕು ಎಂದು ಸಿ.ಟಿ.ರವಿ ಹೇಳಿದರು.

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಮಾತನಾಡಿ ಮಳೆ ಕೊರತೆಯಿಂದ ಲಕ್ಕವಳ್ಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜೋಳ, ರಾಗಿ ಹಾಗೂ ಇತರ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು, ನೀರಿನ ಕೊರತೆ ಎದುರಾಗಿದೆ. ಚಿಕ್ಕಮಗಳೂರು ತಾಲೂಕನ್ನು ಕೂಡಲೇ ಬರಪೀಡಿತವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ಬರ ಘೋಷಣೆಯಾದರೆ ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಿ ಜಾನುವಾರುಗಳಿಗೆ ಮೇವು ಒದಗಿಸಲು ಸಾಧ್ಯ. ಇನ್ನೊಂದು ತಿಂಗಳಲ್ಲಿ ರೈತರ ಬಳಿಯಿರುವ ಮೇವು ಸಹ ಮುಗಿಯುವ ಸಾಧ್ಯತೆಯಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ರೈತರನ್ನು ಸಂಘಟಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ದೇವರಾಜ್, ರವೀಂದ್ರ ಬೆಳವಾಡಿ, ಈಶ್ವರಹಳ್ಳಿ ಮಹೇಶ್ ಮತ್ತಿತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೋಲಕಪಳ್ಳಿ ತಾಂಡಾದಲ್ಲಿ ಶ್ರಾವಣ ಮಾಸದ ಪೂಜೆ
ಕೋಡಿಮಠದಲ್ಲಿ ಶ್ರಾವಣ ಮಾಸದ ವಿಶೇಷ ಕಾರ್ಯಕ್ರಮಗಳಿಗೆ ತೆರೆ