ಕೇಂದ್ರದ ಬೆಲೆ ಏರಿಕೆಯಿಂದ ಜನ ಹೈರಾಣ

KannadaprabhaNewsNetwork |  
Published : Jun 12, 2026, 02:15 AM IST
11ಕೆಪಿಎಲ್5:ಕೊಪ್ಪಳ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ಸಿನವರು ಒಲೆ ಹೂಡಿ ಸೌದೆಯಿಂದ ಅಡುಗೆ ತಯಾರಿಸಿ ಕೇಂದ್ರದ ಬೆಲೆ ಏರಿಕೆ ಖಂಡಿಸಿದರು.  | Kannada Prabha

ಸಾರಾಂಶ

ಕೇಂದ್ರ ಸರ್ಕಾರ ಜನಸಾಮಾನ್ಯರ ಸಮಸ್ಯೆ ನಿರ್ಲಕ್ಷ್ಯ ಮಾಡುತ್ತಿದೆ. ಪೆಟ್ರೋಲ್,ಗ್ಯಾಸ್, ಡೀಸೆಲ್ ಬೆಲೆ ಏರಿಕೆಯಿಂದ ಜನ ಹೈರಾಣಾಗಿದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆ ರೋಸಿ ಹೋಗಿದ್ದಾರೆ

ಕೊಪ್ಪಳ: ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಜನ ಹೈರಾಣಾಗಿದ್ದಾರೆ ಎಂದು ಕಾಂಗ್ರೆಸ್‌ ವತಿಯಿಂದ ನಗರದಲ್ಲಿ ಪ್ರತಿಭಟನೆ ಜರುಗಿತು.

ನಗರದ ಪ್ರವಾಸಿ ಮಂದಿರದಿಂದ ಕೇಂದ್ರದ ಬೆಲೆಯೇರಿಕೆ ವಿರುದ್ಧ ಆರಂಭವಾದ ಕಾಂಗ್ರೆಸ್ ಪ್ರತಿಭಟನೆಯುದ್ದಕ್ಕೂ ಕಾಂಗ್ರೆಸ್ ಕಾರ್ಯಕರ್ತರು ಸಿಲಿಂಡರ್ ಹೊತ್ತು ಬೆಲೆ ಏರಿಕೆ ವಿರುದ್ಧ ಘೋಷಣೆ ಕೂಗಿದರು.

ನಗರದ ಅಶೋಕ ವೃತ್ತದಿಂದ ಬಸವೇಶ್ವರ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ಜರುಗಿತು. ನಗರದ ಬಸವೇಶ್ವರ ವೃತ್ತದಲ್ಲಿ ಒಲೆ ಹೂಡಿ ಸೌದೆಯಿಂದ ಅಡುಗೆ ತಯಾರಿಸಿ ಬೆಲೆ ಏರಿಕೆ ಖಂಡಿಸಿದರು. ಬಸವೇಶ್ವರ ವೃತ್ತದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟನೆ ಕಾವು ಹೆಚ್ಚಿದ್ದರಿಂದ ಕೆಲಕಾಲ ಸಂಚಾರ ವ್ಯಥೆಯ ಉಂಟಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಸದ ರಾಜಶೇಖರ್ ಹಿಟ್ನಾಳ್, ಕೇಂದ್ರ ಸರ್ಕಾರ ಜನಸಾಮಾನ್ಯರ ಸಮಸ್ಯೆ ನಿರ್ಲಕ್ಷ್ಯ ಮಾಡುತ್ತಿದೆ. ಪೆಟ್ರೋಲ್,ಗ್ಯಾಸ್, ಡೀಸೆಲ್ ಬೆಲೆ ಏರಿಕೆಯಿಂದ ಜನ ಹೈರಾಣಾಗಿದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆ ರೋಸಿ ಹೋಗಿದ್ದಾರೆ ಎಂದರು.

ಶಾಸಕ ರಾಘವೇಂದ್ರ ಹಿಟ್ನಾಳ್ ಮಾತನಾಡಿ, ಕೇಂದ್ರ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲ. ಹೀಗಾಗಿ ಪದೇ ಪದೆ ಬೆಲೆ ಹೆಚ್ಚಳ ಮಾಡುತ್ತಿದೆ. ಸಾಮಾನ್ಯ ಜನರು ಬದುಕುವುದು ದುಸ್ತರವಾದ ಇಂತಹ ಸ್ಥಿತಿಯಲ್ಲಿ ಕಳೆದ ಒಂದು ತಿಂಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಇದರ ಬಗ್ಗೆ ರಾಜ್ಯದಲ್ಲಿರುವ ಬಿಜೆಪಿ ನಾಯಕರು ಮಾತನಾಡುತ್ತಿಲ್ಲ. ಅಲ್ಲದೆ ಇತ್ತೀಚಿಗೆ ನೀಟ್ ಪರೀಕ್ಷೆಯಲ್ಲಿ ಉಂಟಾದ ಸಮಸ್ಯೆಯಿಂದ ಹಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೆಲ್ಲದಕ್ಕೂ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡದೇ ಇದ್ದಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಮಾತನಾಡಿ, ಬಡವರಿಗಾಗಿ ಅಚ್ಚೆ ದಿನ ಬರುತ್ತದೆ ಎಂದು ಹೇಳಿದ ಮೋದಿ ಈಗ ಬಡವರ ಮೇಲೆ ಗಧಾ ಪ್ರಹಾರ ಮಾಡುತ್ತಿದ್ದಾರೆ. ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆಯಿಂದ ಪ್ರತಿಯೊಂದು ದಿನ ಬಳಕೆ ವಸ್ತುಗಳ ಬೆಲೆಯಾಗುತ್ತದೆ. ಇದರಿಂದ ಬಡವರು ಬದುಕುವುದೇ ಕಷ್ಟಕರ. ಹೀಗಾಗಿ ಕೂಡಲೇ ಕೇಂದ್ರ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕು. ಕೇವಲ ಚುನಾವಣಾ ಪ್ರಚಾರಕ್ಕಾಗಿ ಮಾಡುವ ಗಿಮಿಕ್‌ ನಿಲ್ಲಿಸಿ,ಸಾಮಾನ್ಯರ ಬದುಕಲು ಬೇಕಾಗುವ ಅನುಕೂಲ ಕಲ್ಪಿಸಿ ಕೊಡಬೇಕೆಂದು ಒತ್ತಾಯಿಸಿದರು.

ಮಾಜಿ ಶಾಸಕ ಕೆ.ಬಸವರಾಜ ಹಿಟ್ನಾಳ, ಕಾಡಾ ಅಧ್ಯಕ್ಷ ಹಸನ್‌ಸಾಬ್ ಡೂಟಿಹಾಳ, ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ. ನಾಗರಹಳ್ಳಿ, ನಗರಸಭೆ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಕೃಷ್ಣಾ ಇಟ್ಟಂಗಿ, ಗೂಳಪ್ಪ ಹಲಗೇರಿ, ಗಾಳೆಪ್ಪ ಪೂಜಾರ್, ಶ್ರೀನಿವಾಸ ಗುಪ್ತ, ಮಂಜುನಾಥ್ ಗೊಂಡಬಾಳ, ಗಂಗಮ್ಮ, ಸೌಮ್ಯ ಕಂದಗಲ್, ಮಲ್ಲಿಕಾರ್ಜುನ, ಸುರೇಶ್ ದಾಸರೆಡ್ಡಿ, ಲಿಂಗೇಶ್ ಕಲ್ಗುಡಿ, ಗವಿಸಿದ್ದಪ್ಪ ಕರಡಿ, ಗವಿಸಿದ್ದನಗೌಡ ಪಾಟೀಲ್, ಶೈಲಜಾ ಹಿರೇಮಠ್, ಜ್ಯೋತಿ ಗೊಂಡಬಾಳ, ರೇಷ್ಮಾ ಖಾಜಾವಲಿ, ಸಾವಿತ್ರಿ ಮುಜುಮ್ದಾರ್, ಚಾಂದ್ ಪಾಷಾ ಕಿಲ್ಲೆದಾರ್, ಅಕ್ಬರ್ ಪಾಷಾ ಪಲ್ಟನ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜ ಸೇವೆ ಮಾನವೀಯತೆ ಮತ್ತು ರಾಷ್ಟ್ರೀಯತೆ ಗುಣಗಳ ಮೈಗೂಡಿಸಿಕೊಳ್ಳಿ
ರಸ್ತೆ ಇಲ್ಲದೆ ಪರದಾಟ: ಕದರಮಂಡಲಗಿ ಗ್ರಾಮಸ್ಥರ ಪ್ರತಿಭಟನೆ