ಸೆಪ್ಟೆಂಬರ್ ಸೆಕೆಗೆ ಜನ ಕಂಗಾಲು, ಹೊನ್ನಾವರ ತಾಲೂಕಿನಲ್ಲಿ ಹೆಚ್ಚಿದ ಬಿಸಿಲಿನ ತೀವ್ರತೆ

KannadaprabhaNewsNetwork |  
Published : Sep 19, 2026, 02:00 AM IST
ಎಐ ಚಿತ್ರ. | Kannada Prabha

ಸಾರಾಂಶ

ಬಿಸಿಲಿನ ತೀವ್ರತೆಯಿಂದಾಗಿ ಜನರು ರಸ್ತೆಗಳಲ್ಲಿ ಸಂಚರಿಸುವುದೇ ಬೇಡ ಎನ್ನುವ ಹಂತಕ್ಕೆ ತಲುಪಿದ್ದಾರೆ. ರೈತರು ಕೃಷಿ ಚಟುವಟಿಕೆಗಳ ಮೇಲೆ ಹವಾಮಾನ ಬದಲಾವಣೆಯ ಪರಿಣಾಮದ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಪ್ರಸಾದ್ ನಗರೆಹೊನ್ನಾವರ: ಸಾಮಾನ್ಯವಾಗಿ ಮಳೆಗಾಲದ ಅವಧಿಯೆಂದು ಪರಿಗಣಿಸಲಾಗುವ ಸೆಪ್ಟೆಂಬರ್ ತಿಂಗಳಲ್ಲಿಯೇ ತಾಲೂಕಿನಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಬೆಳಗ್ಗೆಯಿಂದಲೇ ಬಿಸಿಲಿನ ವಾತಾವರಣ ಕಾಣಿಸಿಕೊಳ್ಳುತ್ತಿದ್ದು, ಮಧ್ಯಾಹ್ನದ ವೇಳೆಗೆ ಉಷ್ಣತೆ ಹಾಗೂ ಸೆಕೆಯ ಅನುಭವ ಹೆಚ್ಚಾಗಿದೆ. ಬಿಸಿಲಿನ ಝಳಕ್ಕೆ ಜನ ಕಂಗಾಲಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ತಾಲೂಕಿನಲ್ಲಿ ವಾತಾವರಣದಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಬೆಳಗಿನ ವೇಳೆ ಮೋಡ ಕವಿದ ವಾತಾವರಣ ಕಂಡುಬಂದರೂ, ನಂತರ ಮೋಡ ಸರಿದು ಬಿಸಿಲು ಕಾಣಿಸಿಕೊಳ್ಳುತ್ತಿದೆ. ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪದಿಂದ ಜನರು ತಂಪು ವಾತಾವರಣವನ್ನು ಹುಡುಕುವಂತಾಗಿದೆ. ಮಳೆಗಾಲದಲ್ಲಿ ಸಾಮಾನ್ಯವಾಗಿ ಕಂಡುಬರುವ ತಂಪಾದ ವಾತಾವರಣದ ಬದಲಾಗಿ ಸೆಕೆ ಹೆಚ್ಚಾಗಿರುವುದು ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ.ರೈತಾಪಿ ವರ್ಗಕ್ಕೆ ಆಘಾತ: ಬಿಸಿಲಿನ ತೀವ್ರತೆಯಿಂದಾಗಿ ಜನರು ರಸ್ತೆಗಳಲ್ಲಿ ಸಂಚರಿಸುವುದೇ ಬೇಡ ಎನ್ನುವ ಹಂತಕ್ಕೆ ತಲುಪಿದ್ದಾರೆ. ರೈತರು ಕೃಷಿ ಚಟುವಟಿಕೆಗಳ ಮೇಲೆ ಹವಾಮಾನ ಬದಲಾವಣೆಯ ಪರಿಣಾಮದ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಮಳೆ ಅವಲಂಬಿತ ಕೃಷಿ ಚಟುವಟಿಕೆಗಳಿಗೆ ಸೆಪ್ಟೆಂಬರ್‌ನಲ್ಲಿಯೂ ಸಮರ್ಪಕ ಮಳೆಯ ಅಗತ್ಯವಿದೆ. ಮಳೆ ಕಡಿಮೆಯಾದರೆ ಭತ್ತ ಸೇರಿದಂತೆ ವಿವಿಧ ಬೆಳೆಗಳ ಬೆಳವಣಿಗೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ರೈತಾಪಿ ವರ್ಗಕ್ಕೆ ದೊಡ್ಡ ಆಘಾತ ಉಂಟಾಗಿದೆ.

ಮಳೆ ಸಲುವಾಗಿ ಉಪಯೋಗಿಸುತ್ತಿದ್ದ ಛತ್ರಿಯನ್ನು ಜನರು ಬಿಸಿಲಿಂದ ರಕ್ಷಣೆ ಪಡೆಯಲು ಬಳಸಲು ಪ್ರಾರಂಭಿಸಿದ್ದಾರೆ. ಮಳೆಗಾಲದಲ್ಲಿ ಯಾವ ಸಂದರ್ಭದಲ್ಲೂ ಮಳೆ ಸುರಿಯಬಹುದು ಎಂಬ ಕಾರಣಕ್ಕೆ ಕೊಡೆಯನ್ನು ಕೈಯಲ್ಲಿ ಹಿಡಿದು ಹೋಗುವುದು ಸಾಮಾನ್ಯವಾಗಿದೆ.

ಮಳೆ ಕೈಕೊಟ್ಟು ಒಣಹವೆ ಪ್ರಾರಂಭವಾಗಿರುವುದರಿಮದ ಜನರು ಸೆಕೆಯಿಂದ ಬಳಲುವಂತಾಗಿದೆ. ಮಾರ್ಚ್- ಏಪ್ರಿಲ್ ತಿಂಗಳಿನಲ್ಲಿ ಬೀಳುವಂತಹ ಸೆಕೆಯ ಅನುಭವ ಸೆಪ್ಟೆಂಬರ್ ತಿಂಗಳಿನಲ್ಲಿ ಆಗುತ್ತಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ನೀರಿಗೆ ಹಾಹಾಕಾರ ಏಳುವ ಸಾಧ್ಯತೆ ನಿಚ್ಚಳವಾಗಿದೆ. ಮಳೆಗಾಲದಲ್ಲೇ ಬಿಸಿಲ ಝಳ ಹೆಚ್ಚುತ್ತಿರುವುದರಿಂದ ಇನ್ನು ಮುಂದಿನ ದಿನಗಳಲ್ಲಿ ಬಿಸಿಲು ಇನ್ನಷ್ಟು ಹೆಚ್ಚಾದರೂ ಆಶ್ಚರ್ಯವಿಲ್ಲ.

ತಾಲೂಕು ಕರಾವಳಿ ಪ್ರದೇಶವಾಗಿರುವುದರಿಂದ ಆರ್ದ್ರತೆ ಹೆಚ್ಚಿರುವ ಸಂದರ್ಭದಲ್ಲಿ ಬಿಸಿಲಿನ ಅನುಭವ ಮತ್ತಷ್ಟು ಹೆಚ್ಚಾಗಿ ಕಂಡುಬರುತ್ತದೆ. ಹವಾಮಾನದಲ್ಲಿ ಆಗುತ್ತಿರುವ ಏರುಪೇರುಗಳಿಂದ ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೇಗಿರಲಿದೆ ಎಂಬುದರ ಬಗ್ಗೆ ಜನರಲ್ಲಿ ಕುತೂಹಲ ಮೂಡಿದೆ.

ಮಳೆಗಾಲದ ತಿಂಗಳಾಗಿರುವ ಸೆಪ್ಟೆಂಬರ್‌ನಲ್ಲಿಯೇ ತಾಲೂಕಿನಲ್ಲಿ ಕಂಡುಬರುತ್ತಿರುವ ಬಿಸಿಲಿನ ವಾತಾವರಣವು ಹವಾಮಾನ ವೈಪರೀತ್ಯದ ಬಗ್ಗೆ ಚರ್ಚೆಗೆ ಕಾರಣವಾಗಿದ್ದು, ಮಳೆಯ ನಿರೀಕ್ಷೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಕಾದು ನೋಡುತ್ತಿದ್ದಾರೆ.

ಬಿಸಿಲಿನ ವಾತಾವರಣ: ತಾಲೂಕಿನಲ್ಲಿ ಪ್ರತಿದಿನ ಸರಾಸರಿ 26 ಡಿಗ್ರಿಯಿಂದ 30 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಗರಿಷ್ಠ 32 ಡಿಗ್ರಿಯವರೆಗೂ ತಲುಪಿದೆ. ತಾಲೂಕಿನಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದೆ. ಅಕ್ಟೋಬರ್ ತಿಂಗಳಿನಲ್ಲಿ ಚೆನ್ನೈನಲ್ಲಿ ಮಳೆ ಪ್ರಾರಂಭವಾದರೆ ತಾಲೂಕಿನಲ್ಲಿಯೂ ಮಳೆ ಬೀಳಬಹುದು. ಮೋಡ ಸ್ವಲ್ಪ ಪ್ರಮಾಣದಲ್ಲಿ ಆಗುತ್ತಿದ್ದು, ಚದುರಿದಂತೆ ಮಳೆ ಆಗಾಗ ಬೀಳಬಹುದು. ನಿರೀಕ್ಷಿತ ರೀತಿಯಲ್ಲಿ ಮಳೆ ಬೀಳುವುದಿಲ್ಲ. ಹೀಗಾಗಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ ಎಂದು ತಾಲೂಕು ಹವಾಮಾನಾಧಿಕಾರಿ ರಮೇಶ್ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ದಸರಾ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಬಿ.ಬಿ. ಅಸೂಟಿ