ಕಾಂಗ್ರೆಸ್ ಅಭ್ಯರ್ಥಿ ಬರೀ ಸುಳ್ಳು ಪ್ರಚಾರ ಮಾಡಿಕೊಂಡು ತಿರುಗುತ್ತಿದ್ದಾರೆ. ಜೆಡಿಎಸ್ ಪಕ್ಷದಿಂದ ಟಿಕೆಟ್ ಕೊಡಲು ಸಿದ್ಧ ಇದ್ದೆವು. ಕೊನೆಗೆ ಬಿಜೆಪಿ ಟಿಕೆಟ್ ಮೇಲೆ ನಿಲ್ಲುತ್ತೇನೆ ಎಂದು ಕ್ಯಾತೆ ತೆಗೆದರು.
ಕನ್ನಡಪ್ರಭ ವಾರ್ತೆ ಚನ್ನಪಟ್ಟಣ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನಿರಂತರವಾಗಿ ಭ್ರಷ್ಟಾಚಾರದಲ್ಲಿ ಮುಳುಗಿ ಜನರ ಹಿತವನ್ನು ಮರೆತಿದೆ. ಹೀಗಾಗಿ ಚನ್ನಪಟ್ಟಣ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದರು.
ಚನ್ನಪಟ್ಟಣ ಕ್ಷೇತ್ರ ವ್ಯಾಪ್ತಿಯ ಅಂಬಾಡಹಳ್ಳಿ ಮತ್ತು ಸೋಗಾಲ ಗ್ರಾಮಗಳಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಅತ್ಯಧಿಕ ಬಹುಮತದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಡಬೇಕು ಎಂದು ಜನರಲ್ಲಿ ಮನವಿ ಮಾಡಿದರು.
ಈ ಹಿಂದೆ ನಾನು ಮತ್ತು ಕುಮಾರಸ್ವಾಮಿ ಅವರು ಸೇರಿ ಸರ್ಕಾರ ಮಾಡಿ ಅತ್ಯುತ್ತಮ ಆಡಳಿತ ನೀಡಿದ್ದೆವು. ಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದು ಹೆಣ್ಣುಮಕ್ಕಳ ಕಲ್ಯಾಣಕ್ಕೆ ಉತ್ತಮ ಕಾರ್ಯಕ್ರಮ ಜಾರಿಗೆ ತಂದಿದ್ದೆವು. ನಿಮ್ಮ ಮನೆಯಲ್ಲಿ ಹುಟ್ಟುವ ಹೆಣ್ಣು ಮಗಳು ಹದಿನೆಂಟು ವರ್ಷ ವಯಸ್ಸಿಗೆ ಬರುವ ಹೊತ್ತಿಗೆ ಹತ್ತಾರು ಲಕ್ಷ ರುಪಾಯಿ ಹಣ ಸಿಗುತ್ತಿತ್ತು. ಆ ಮಕ್ಕಳು ಗೌರವ, ಸ್ವಾಭಿಮಾನದಿಂದ ಬಾಳಿ ಬದುಕುವಂತಹ ಕಾರ್ಯಕ್ರಮ ಮಾಡಿದ್ದೆವು ಎಂದು ಹೇಳಿದರು.
ಶಾಲೆಗೆ ತೆರಳುವ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಾನು, ಕುಮಾರಸ್ವಾಮಿ ಸೇರಿ ಉಚಿತ ಬೈಸಿಕಲ್ ಯೋಜನೆ ಜಾರಿ ಮಾಡಿದ್ದೆವು. ಅಷ್ಟೇ ಅಲ್ಲ, ಸಂಧ್ಯಾ ಸುರಕ್ಷಾ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ನಾವಿಬ್ಬರೂ ಜಾರಿ ಮಾಡಿದ್ದೆವು. ಸಮಾಜಕ್ಕೆ ಅವೆಲ್ಲ ಉಪಯೋಗ ಆಗಿವೆ.
ಕೇಂದ್ರ ಸರ್ಕಾರ ರೈತ ಕುಟುಂಬಕ್ಕೆ ಹತ್ತು ಸಾವಿರ ರುಪಾಯಿ ಕೊಟ್ಟರೆ, ಅದಕ್ಕೆ ಆರು ಸಾವಿರ ರುಪಾಯಿ ಸೇರಿಸಿ ಹದಿನಾರು ಸಾವಿರ ರುಪಾಯಿ ಕೊಡುತ್ತಿದ್ದೆವು. ನಿಮ್ಮೆಲ್ಲರ ಅಭಿವೃದ್ಧಿಗಾಗಿ ನಾನು, ಕುಮಾರಸ್ವಾಮಿ ಶಕ್ತಿಮೀರಿ ಕೆಲಸ ಮಾಡಿದ್ದೇವೆ. ಇದನ್ನೆಲ್ಲ ಜನತೆ ಮರೆಯಬಾರದು ಎಂದು ಯಡಿಯೂರಪ್ಪ ಮನವಿ ಮಾಡಿದರು.
ಕೇಂದ್ರ ಸಚಿವ ಕುಮಾರಸ್ವಾಮಿ ಮಾತನಾಡಿ, ನಾವು ಅಭಿವೃದ್ಧಿ ವಿಷಯ ಇಟ್ಟುಕೊಂಡು ಪ್ರಚಾರ ಮಾಡುತ್ತಿದ್ದೇವೆ. ಅಭಿವೃದ್ಧಿಯ ಮೇಲೆ ಮತ ಕೇಳುತ್ತಿದ್ದೇವೆ. ಆದರೆ, ಕಾಂಗ್ರೆಸ್ ಪಕ್ಷ ಸಮಾಜ ಒಡೆಯುವ ದಿಕ್ಕಿನಲ್ಲಿ ಚುನಾವಣಾ ಕಣವನ್ನು ಕಲುಷಿತಗೊಳಿಸಿದೆ ಎಂದು ಆರೋಪ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಬರೀ ಸುಳ್ಳು ಪ್ರಚಾರ ಮಾಡಿಕೊಂಡು ತಿರುಗುತ್ತಿದ್ದಾರೆ. ಜೆಡಿಎಸ್ ಪಕ್ಷದಿಂದ ಟಿಕೆಟ್ ಕೊಡಲು ಸಿದ್ಧ ಇದ್ದೆವು. ಕೊನೆಗೆ ಬಿಜೆಪಿ ಟಿಕೆಟ್ ಮೇಲೆ ನಿಲ್ಲುತ್ತೇನೆ ಎಂದು ಕ್ಯಾತೆ ತೆಗೆದರು. ಕೊನೆಗೆ ಬಿಜೆಪಿ ಟಿಕೆಟ್ ಕೊಡಲಿಕ್ಕೆ ಕೂಡ ನಾನು ಸಮ್ಮತಿಸಿದೆ. ಆದರೆ, ಲೋಕಸಭೆ ಚುನಾವಣೆ ವೇಳೆಯಲ್ಲೇ ಕಾಂಗ್ರೆಸ್ ನಾಯಕರ ಜತೆ, ಅದರಲ್ಲಿಯೂ ಡಿಕೆ ಬ್ರದರ್ ಗಳ ಜತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದ ಅವರು, ಅಭ್ಯರ್ಥಿ ಆಯ್ಕೆ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಿಗಿದರು. ನಾವು ಸಮರ್ಥ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಉದ್ದೇಶದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಎನ್ ಡಿಎ ಅಭ್ಯರ್ಥಿಯನ್ನಾಗಿಸಿ ಒಮ್ಮತವಾಗಿ ಕಣಕ್ಕೆ ಇಳಿಸಿದೆವು ಎಂದು ಕುಮಾರಸ್ವಾಮಿ ಹೇಳಿದರು.
ಪ್ರಚಾರ ಸಭೆಯಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ರಮೇಶ್, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್, ಸಂಸದ ಮಲ್ಲೇಶ್ ಬಾಬು ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.