ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಹಬ್ಬದ ಅಂಗವಾಗಿ ಶಿವಮೊಗ್ಗದ ಶಿವನ ದೇವಾಲಯಗಳಲ್ಲಿ ಭಕ್ತಸಾಗರವೇ ನೆರೆದಿತ್ತು. ಬೆಳಗಿನ ಜಾವದಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ನಡೆದವು. ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ ಮಿಂದೆದ್ದರು.
ಹರಕೆರೆಯ ಶಿವನ ದೇವಸ್ಥಾನದಲ್ಲಿ ಮುಂಜಾನೆ ಶಿವನಿಗೆ ಅಭಿಷೇಕ ಹಾಗೂ ವಿಶೇಷ ಪೂಜೆಗಳ ವೈಭವ ನಡೆಯಿತು. ವಿಶೇಷ ಪೂಜೆ, ಪುನಸ್ಕಾರ ಮತ್ತು ಬಿಲ್ವ ಪತ್ರೆ, ತುಂಬೆ ಅರ್ಪಣೆ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ವಿಧಿ–ವಿಧಾನಗಳು ನಡೆದವು. ಭಕ್ತರಿಗೆ ವಿಶೇಷ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು.ಇಲ್ಲಿ ತುಂಗಾ ನದಿಯಲ್ಲಿ ಸ್ನಾನ ಮಾಡಿ ನಂತರ ಶಿವನ ದರ್ಶನ ಮಾಡಲಾಗುತ್ತದೆ. ಹಬ್ಬದ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಇಲ್ಲಿ ಸೇರುತ್ತಾರೆ. ಅರಕೆರೆ ಶಿವನ ದೇವಾಲಯದ ಶಿವರಾತ್ರಿ ಐತಿಹಾಸಿಕ ಮಹತ್ವ ಪಡೆದಿದೆ. ಭಕ್ತರು ಬಿಸಿಲನ್ನು ಲೆಕ್ಕಿಸದೆ ಉದ್ದದ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ನಗರದ ಎಲ್ಲ ದೇವಾಲಯಗಳಲ್ಲಿ ಭಕ್ತರ ಜಂಗುಳಿ ಕಂಡು ಬಂದಿತು. ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಶಿವನ ದೇಗುಲಗಳಲ್ಲದೆ ಎಲ್ಲ ದೇವಾಲಯಗಳಲ್ಲಿ ಬೆಳಿಗಿನಿಂದಲೇ ವಿಶೇಷ ಪೂಜೆ ಅಭಿಷೇಕ ನಡೆಯಿತು.
ಅಬ್ಬಲಗೆರೆ ಸಮೀಪದ ಈಶ್ವರವನದಲ್ಲಿ ರುದ್ರಾಭಿಷೇಕ, ಭಜನೆ, ಪ್ರವಚನ, ಶಿವಸ್ತುತಿ ಮುಂತಾದ ಕಾರ್ಯಕ್ರಮಗಳು ನಡೆದವು. ಕೋಟೆ ಭೀಮೇಶ್ವರ ದೇವಾಲಯದಲ್ಲಿ ವಿಶೇಷವಾಗಿ ಶಿವನ ಪೂಜೆ ನಡೆಯಿತು. ಬೆಳಿಗ್ಗೆಯಿಂದಲೇ ಭಕ್ತರು ನೂರಾರು ಸಂಖ್ಯೆಯಲ್ಲಿ ಸೇರಿ ಈಶ್ವರನ ದರ್ಶನ ಪಡೆದು ಪುನೀತರಾದರು. ಭಕ್ತರಿಗೆ ಪಾನಕ ಮತ್ತು ಕೋಸಂಬರಿ ಹಂಚಲಾಯಿತು.
ಬಸವನಗುಡಿ ಶೈಲಮಲ್ಲಿಕಾರ್ಜುನ ಸ್ವಾಮಿ ಮತ್ತು ಬಸವೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮೊದಲಾದ ಪೂಜಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಜಾಗರಣೆ ಅಂಗವಾಗಿ ದೇವಾಲಯಗಳಲ್ಲಿಭಕ್ತಿಗೀತೆ ಸೇರಿ ವಿವಿಧ ಕಾರ್ಯಕ್ರಮ ನಡೆದವು.