ಕೊಟ್ಟೂರು: ರಾಜ್ಯದ ಜನತೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದೆವು ಎಂದು ಪಶ್ಚಾತ್ತಾಪ ಪಡುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಮತ್ತೆ ಈ ತಪ್ಪು ಪುನರಾವರ್ತನೆಯಾಗಬಾರದೆಂಬ ಕಾರಣಕ್ಕಾಗಿ ರಾಜ್ಯದ 28 ಸ್ಥಾನಗಳಲ್ಲಿ ಗೆಲುವು ತಂದುಕೊಡುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.
ಜನತೆಗೆ ಉಚಿತ ಕೊಡುಗೆ ನೀಡುತ್ತೇವೆ ಎಂದು ಜಾರಿಗೆ ತಂದ ಗ್ಯಾರಂಟಿಗಳು ಸಂಪೂರ್ಣವಾಗಿ ದಾರಿ ತಪ್ಪಿವೆ. ರೈತರಿಗೆ 7 ತಾಸು ಸತತ ವಿದ್ಯುತ್ ಪೂರೈಕೆ ಮಾಡುತ್ತೇವೆ ಎಂದು ಭರವಸೆ ಹುಟ್ಟಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ 4 ತಾಸು ಸತತ ವಿದ್ಯುತ್ ಪೂರೈಕೆ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.ಸಂಸದ ವೈ. ದೇವೇಂದ್ರಪ್ಪ ಮಾತನಾಡಿ, ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಯಾರನ್ನೇ ಅಭ್ಯರ್ಥಿಯಾಗಿ ವರಿಷ್ಠರು ಕಣಕ್ಕಿಳಿಸಿದರೂ ಅವರ ಪರ ಪ್ರತಿಯೊಬ್ಬರೂ ಪ್ರಚಾರ ಕೈಗೊಂಡು ಗೆಲ್ಲಿಸುವ ದೀಕ್ಷೆ ತೊಟ್ಟಿದ್ದೇವೆ ಎಂದರು.
ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಅನ್ನಭಾಗ್ಯ, ಶಕ್ತಿ ಯೋಜನೆ ಮತ್ತಿತರ ಯೋಜನೆಗಳ ಜಾರಿಯಿಂದಾಗಿ ಹಲವು ರೀತಿಯ ತೊಂದರೆಗಳನ್ನು ಜನತೆ ಎದುರಿಸುತ್ತಿದ್ದಾರೆ. ಈ ಕಾರಣಕ್ಕಾಗಿ ಜನತೆ ಬಿಜೆಪಿಯತ್ತ ಒಲವು ತೋರುತ್ತಿದ್ದಾರೆ ಎಂದರು.ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಬಂಗಾರು ಹನುಮಂತು, ಪಿ. ಚನ್ನಬಸವನಗೌಡ, ಬಲ್ಲಾಹುಣಸಿ ರಾಮಣ್ಣ, ಕೆ.ಎಸ್. ಈಶ್ವರಗೌಡ, ಬಿ.ಸಿ. ಮಹಾಬಲ್ಲೇಶ್ವರ ಮತ್ತಿತರರು ಮಾತನಾಡಿದರು.