ಕನ್ನಡಪ್ರಭ ವಾರ್ತೆ ಬೆಂಗಳೂರು
ಸಮೀಕ್ಷೆ ನಡೆಸಲು ಆಯೋಗಕ್ಕೆ ನಿರ್ದೇಶಿಸಿ ಸೆ.12ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದು ಕೋರಿ ರಾಜ್ಯ ಒಕ್ಕಲಿಗರ ಸಂಘ, ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರಘುನಾಥ್ ಮತ್ತು ಹಿರಿಯ ವಕೀಲ ಕೆ.ಎನ್. ಸುಬ್ಬಾರೆಡ್ಡಿ ಮತ್ತಿತರರು ಐದು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು (ಪಿಐಎಲ್) ಸಲ್ಲಿಸಿದ್ದರು.
ಸಮೀಕ್ಷೆಗೆ ತಡೆಯಾಜ್ಞೆ ನೀಡಬೇಕೆಂಬ ಅರ್ಜಿದಾರರ ಮಧ್ಯಂತರ ಮನವಿ ಕುರಿತು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ಎರಡು ಗಂಟೆಗಳ ಕಾಲ ಸುಧೀರ್ಘ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನ್ಯಾಯಪೀಠ ಬುಧವಾರಕ್ಕೆ ವಿಚಾರಣೆ ಮುಂದೂಡಿದೆ.ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸರ್ಕಾರ ಜಾತಿ ಗಣತಿ ನಡೆಸಲು ಮುಂದಾಗಿದೆ ಎಂದು ಅರ್ಜಿದಾರರು ವ್ಯಾಖ್ಯಾನಿಸುತ್ತಿದ್ದಾರೆ. ಆದರೆ, ಇದು ಜಾತಿ ಗಣತಿಯಲ್ಲ. ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂದು ಸ್ಪಷ್ಟಪಡಿಸಿದರು.
ಅದಕ್ಕೆ ಸಿಂಘ್ವಿ ಉತ್ತರಿಸಿ, ಸಂಸ್ಕೃತ ಪದ ಸಮೀಕ್ಷಾ ಎಂದರೆ ಸೆನ್ಸಸ್ (ಗಣತಿ) ಅಲ್ಲ. ಅರ್ಜಿದಾರರು ತಪ್ಪು ಪದ ಬಳಸಿ ಹಾದಿತಪ್ಪಿಸುತ್ತಿದ್ದಾರೆ. ದತ್ತಾಂಶವಿಲ್ಲದೆ ಕಲ್ಯಾಣ ಕಾರ್ಯಕ್ರಮ ರೂಪಿಸಲಾಗದು. ಸಾಮಾಜಿಕ ಕಲ್ಯಾಣ ಕಾರ್ಯಗಳಿಗೆ ಮತ್ತು ಸರ್ಕಾರದ ನೀತಿ ನಿರೂಪಣೆಗೆ ಪೂರಕವಾಗಿ ಸಮೀಕ್ಷೆ ನಡೆಸಲಾಗುತ್ತಿದೆ. ಸಂವಿಧಾನಕ್ಕೆ 105ನೇ ತಿದ್ದುಪಡಿ ಬಳಿಕ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪಟ್ಟಿ ತಯಾರಿಸಲು ಸರ್ಕಾರಕ್ಕೆ ಅವಕಾಶ ಸಿಕ್ಕಿದೆ. ಯಾವ ಸಂದರ್ಭದಲ್ಲಿ ಸಮೀಕ್ಷೆ ನಡೆಸಬಹುದು ಎಂಬುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ. ಬಿಹಾರದಲ್ಲಿ ಕೂಡ ಜಾತಿ ಗಣತಿ ಮಾಡಲಾಗಿದೆ. ದತ್ತಾಂಶ ಸಂಗ್ರಹಿಸುವಾಗ ಖಾಸಗಿತನ ಉಲ್ಲಂಘನೆಯಾಗುವುದಿಲ್ಲ. ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವುದರಿಂದ ಸಮೀಕ್ಷೆ ನಡೆಸಲು ನ್ಯಾಯಾಲಯ ತಡೆ ನೀಡಬಾರದು ಎಂದು ವಿವರಿಸಿದರು.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಕಾಯ್ದೆ ಸೆಕ್ಷನ್ 9(1)(2) ಅಡಿ ಸಮೀಕ್ಷೆ ನಡೆಸಲು ಯಾವುದೇ ವಿಧಾನವಿಲ್ಲ. ಸಮೀಕ್ಷೆಯಲ್ಲಿ ಇಡೀ ರಾಜ್ಯದ ಜನತೆ ಒಳಗೊಳ್ಳುತ್ತಾರೆ. ಇದು ಗಣತಿಯಲ್ಲದೆ ಬೇರೇನೂ ಅಲ್ಲ. ಇದು ಸಂವಿಧಾನದ ಪರಿಚ್ಛೇದ 342Aನೇ ವಿಧಿಗೆ ವಿರುದ್ಧವಾಗಿದೆ. ಜಾತಿ ಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಇದು ಚುನಾವಣೆಗಾಗಿ ಪ್ರತಿ ಜಾತಿಯ ಸಂಖ್ಯೆಯನ್ನು ಪತ್ತೆ ಮಾಡುವ ಬಣ್ಣದ ತಂತ್ರವಾಗಿದೆ ಎಂದು ಆರೋಪಿಸಿದರು.
2015ರಲ್ಲಿ ರಾಜ್ಯ ಸರ್ಕಾರ ಮಾಡಿದ ಸಮೀಕ್ಷೆಯನ್ನೂ ಪ್ರಶ್ನಿಸಲಾಗಿತ್ತು. 2024ರಲ್ಲಿ ಸಲ್ಲಿಸಿದ ಆಯೋಗ ಸಲ್ಲಿಸಿದ ಸಮೀಕ್ಷೆಯ ವರದಿ ಸ್ಥಿತಿ-ಗತಿ ಏನಾಗಿದೆ ಎಂಬುದೇ ತಿಳಿದಿಲ್ಲ. ಹಿಂದೆ ನಡೆಸಿದ ಸಮೀಕ್ಷೆಗೆ 150 ಕೋಟಿ ರು. ವ್ಯಯಿಸಲಾಗಿತ್ತು. ಈಗ ಮತ್ತೆ 420 ಕೋಟಿ ವ್ಯಯಿಸಲಾಗುತ್ತಿದೆ. ಹೊಸ ಹೊಸ ಜಾತಿಗಳನ್ನು ಸರ್ಕಾರ ಸೃಷ್ಟಿಸಿದೆ. 1,561 ಜಾತಿಗಳನ್ನು ಸರ್ವೆ ಮಾಡಲು ಸರ್ಕಾರ ಮುಂದಾಗಿದೆ. ಹಲವು ಜಾತಿಗಳನ್ನು ಧರ್ಮದೊಂದಿಗೆ ತಳುಕು ಹಾಕಲಾಗಿದೆ. ಹೊಸ ಪಟ್ಟಿಯಲ್ಲಿ ಅವೈಜ್ಞಾನಿಕ ಗುಂಪು ಸೃಷ್ಟಿಸಲಾಗಿದೆ. ಕೃತಕವಾಗಿ ಜಾತಿಗಳನ್ನು ಸೃಷ್ಟಿ ಮಾಡಲಾಗಿದ್ದು, ಇದರಲ್ಲಿ ವಿವೇಚನೆ ಬಳಕೆ ಮಾಡಲಾಗಿಲ್ಲ. ಪ್ರಮುಖವಾಗಿ ದತ್ತಾಂಶವನ್ನು ಅಸ್ತ್ರವಾಗಿಸುವ ಉದ್ದೇಶ ಹೊಂದಲಾಗಿದೆ ಎಂದು ಅರ್ಜಿದಾರ ಪರ ವಕೀಲರು ಆರೋಪಿಸಿದರು.