- ತೆಲಂಗಾಣ ಪ್ರದೇಶ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರ ಪ್ರಮಾಣ ವಚನ ಸಮಾರಂಭ- - - ಕನ್ನಡಪ್ರಭ ವಾರ್ತೆ ದಾವಣಗೆರೆ
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೋರುತ್ತಿರುವ ಮಲತಾಯಿ ಧೋರಣೆ ದೇಶದ ಜನರಿಗೆ ಗೊತ್ತಾಗಬೇಕು ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದರು.ಹೈದರಾಬಾದ್ನ ಗಾಂಧಿನಗರದಲ್ಲಿ ನಡೆದ ತೆಲಂಗಾಣ ಪ್ರದೇಶ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಜಕ್ಕಿಡಿ ಶಿವ ಚರಣ್ ರೆಡ್ಡಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಅವರು ಮಾತನಾಡಿದರು.
ಕೇಂದ್ರ ಬಜೆಟ್ನಲ್ಲಿ ಕರ್ನಾಟಕ, ಕೇರಳ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ಪ್ರಾಮುಖ್ಯತೆ ನೀಡಿಲ್ಲ. ಕೇವಲ ಬಿಹಾರ, ದೆಹಲಿ ಸೇರಿದಂತೆ ಚುನಾವಣೆ ನಡೆಯುವ ರಾಜ್ಯಗಳನ್ನು ಗಮನದಲ್ಲಿಟ್ಟುಕೊಂಡು ಆಯವ್ಯಯ ಮಂಡನೆ ಮಾಡುವ ಹೊಸ ಸಂಪ್ರದಾಯ ಹುಟ್ಟುಹಾಕಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಪಡಿಸಲು ಹಾಗೂ ಯುವ ಸಮುದಾಯವು ಕಾಂಗ್ರೆಸ್ ನತ್ತ ಆಕರ್ಷಿತರಾಗಲು ಹೆಚ್ಚಿನ ಕಾರ್ಯಕ್ರಮಗಳನ್ನು ಆಯೋಜಿಸಲಿ ಎಂದು ಸಲಹೆ ನೀಡಿದರು.ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮಾತನಾಡಿ, ತೆಲಂಗಾಣವನ್ನು ದುಷ್ಟಶಕ್ತಿಗಳಿಂದ ತೊಡೆದು ಹಾಕಿದ ರಾಜ್ಯದ ಜನರಿಗೆ ಧನ್ಯವಾದಗಳು. ಈ ಹಿಂದೆ ಅಧಿಕಾರ ನಡೆಸಿದವರು ಜನವಿರೋಧಿ ನೀತಿ ಅನುಸರಿಸಿದರು. ಇದರ ಪರಿಣಾಮ ಕಾಂಗ್ರೆಸ್ಗೆ ಅಧಿಕಾರ ಸಿಕ್ಕಿದೆ. ಯುವಕರ ಮನಸ್ಸಿನಲ್ಲಿ ವಿಷಬೀಜ ಬಿತ್ತುತ್ತಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಲು ನಿರ್ಧರಿಸಿ. ಯುವಕರು ಎಚ್ಚೆತ್ತುಕೊಳ್ಳಬೇಕಿದೆ. ಸತ್ಯ ಅರಿತು ನಡೆಯಿರಿ. ಧರ್ಮದ ಅಮಲಿಗೆ ಬಿದ್ದು ಭವಿಷ್ಯ ಹಾಳುಮಾಡಿಕೊಳ್ಳಬೇಡಿ ಎಂದು ಸಲಹೆ ನೀಡಿದರು.
ಈ ವೇಳೆ ಟಿಪಿಸಿಸಿ ಅಧ್ಯಕ್ಷ ಮಹೇಶ್ ಕುಮಾರ್ ಗೌಡ್, ಐವೈಸಿ ಕಾರ್ಯದರ್ಶಿ ಸುರಭಿ ದ್ವಿವೇದಿ ಮತ್ತು ಸಚಿವರು ಮತ್ತಿತರರು ಹಾಜರಿದ್ದರು.- - - -15ಕೆಡಿವಿಜಿ31:
ಹೈದರಾಬಾದ್ ನಲ್ಲಿ ನಡೆದ ತೆಲಂಗಾಣ ಪ್ರದೇಶ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಜಕ್ಕಿಡಿ ಶಿವ ಚರಣ್ ರೆಡ್ಡಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಪಾಲ್ಗೊಂಡು ಮಾತನಾಡಿದರು.