ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರು ನಂಬಿಕೆ ಬೆಳೆಸಿಕೊಳ್ಳಬೇಕು: ಚಲುವರಾಯಸ್ವಾಮಿ

KannadaprabhaNewsNetwork |  
Published : May 26, 2026, 01:45 AM IST
25ಕೆಎಂಎನ್ ಡಿ18,19 | Kannada Prabha

ಸಾರಾಂಶ

ಒಂದು ಸರ್ಕಾರದ ಅವಧಿಯಲ್ಲಿ ಮಂಜೂರಾದ ಯೋಜನೆಗಳನ್ನು ಮುಂದೆ ಬಂದ ಮತ್ತೊಂದು ಸರ್ಕಾರ ಮುಂದುವರಿಸುತ್ತದೆ. ಅದರಂತೆ ಆಸ್ಪತ್ರೆ ಮುಂದುವರಿದ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಮತ್ತು ಕ್ಷೇತ್ರದ ಶಾಸಕ ಎಚ್.ಟಿ.ಮಂಜು ನಮ್ಮ ನಮ್ಮ ಜವಾಬ್ದಾರಿ ಅರಿತು ಪೂರ್ಣಗೊಳಿಸಿ ಕ್ಷೇತ್ರದ ಜನರಿಗೆ ಸಮರ್ಪಿಸಿದ್ದೇವೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರು ನಂಬಿಕೆ ಬೆಳೆಸಿಕೊಳ್ಳಬೇಕು. ವೈದ್ಯರು ತಮ್ಮ ಬಳಿಗೆ ಬರುವ ರೋಗಿಗಳನ್ನು ತಾಳ್ಮೆಯಿಂದ ಪರೀಕ್ಷೆ ಮಾಡಿ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸುಮಾರು 28 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ 50 ಹಾಸಿಗೆಗಳ ದುಂಡುಶೆಟ್ಟಿ ಲಕ್ಷ್ಮಮ್ಮ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ತಂದಿದ್ದು ಎಂದು ಕೆಲವರು ಹೇಳುತ್ತಿದ್ದಾರೆ ಇದರ ಬಗ್ಗೆ ನನಗಾಗಲಿ ಆಥವಾ ಕ್ಷೇತ್ರದ ಶಾಸಕರಾದ ಎಚ್.ಟಿ.ಮಂಜುಗಾಗಲೀ ಯಾವುದೇ ಅಸೂಹೆಯಿಲ್ಲ ಎಂದರು.

ಒಂದು ಸರ್ಕಾರದ ಅವಧಿಯಲ್ಲಿ ಮಂಜೂರಾದ ಯೋಜನೆಗಳನ್ನು ಮುಂದೆ ಬಂದ ಮತ್ತೊಂದು ಸರ್ಕಾರ ಮುಂದುವರಿಸುತ್ತದೆ. ಅದರಂತೆ ಆಸ್ಪತ್ರೆ ಮುಂದುವರಿದ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಮತ್ತು ಕ್ಷೇತ್ರದ ಶಾಸಕ ಎಚ್.ಟಿ.ಮಂಜು ನಮ್ಮ ನಮ್ಮ ಜವಾಬ್ದಾರಿ ಅರಿತು ಪೂರ್ಣಗೊಳಿಸಿ ಕ್ಷೇತ್ರದ ಜನರಿಗೆ ಸಮರ್ಪಿಸಿದ್ದೇವೆ ಎಂದರು.

ತಾಯಿ ಮತ್ತು ಮಗುವಿನ ಮರಣ ಪ್ರಮಾಣ ತಪ್ಪಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ತಾಯಿ ಮಗು ಆಸ್ಪತ್ರೆ ನಿರ್ಮಿಸಿ ಅಗತ್ಯ ವೈದ್ಯರ ನೇಮಕ ಮಾಡಿದೆ. ಬೆಂಗಳೂರು ಮಹಾನಗರದಲ್ಲಿ ಒಂದು ಹೆರಿಗೆ ಮಾಡಿಸಿಕೊಳ್ಳಲು ಕನಿಷ್ಠ 5 ರಿಂದ 6 ಲಕ್ಷ ರು. ಹಣ ಬೇಕು. ಮೈಸೂರು, ಹಾಸನ ಮುಂತಾದ ನಗರ ಪ್ರದೇಶಗಳಲ್ಲಿ ಹೆರಿಗೆ ಮಾಡಿಸಿಕೊಂಡರೆ ಕನಿಷ್ಠ 1 ರಿಂದ 2 ಲಕ್ಷ ರು. ಬೇಕು. ಸರ್ಕಾರಿ ತಾಯಿ ಮಗು ಆಸ್ಪತ್ರೆಯಲ್ಲಿ ಒಂದೇ ನಯಾಪೈಸೆ ಖರ್ಚಿಲ್ಲದೆ ಹೆರಿಗೆ ಮಾಡಲಾಗುತ್ತದೆ. ಇದರ ಪ್ರಯೋಜನ ಪಡೆಯುವಂತೆ ಸಚಿವರು ಮನವಿ ಮಾಡಿದರು.

ಆಸ್ಪತ್ರೆಗೆ ಹೊಸಹೊಳಲಿನ ಶ್ರೀಮತಿ ದುಂಡುಶೆಟ್ಟಿ ಲಕ್ಷ್ಮಮ್ಮ ಕುಂಟುಂಬಸ್ಥರು 6 ಎಕರೆ ಭೂಮಿಯನ್ನು ದಾನವಾಗಿ ನೀಡಿದ್ದಾರೆ. ಆಸ್ಪತ್ರೆಗೆ ಮಾತ್ರವಲ್ಲದೆ ಶಾಲಾ ಕಾಲೇಜು ಮತ್ತಿತರ ಸಾರ್ವಜನಿಕ ಸಂಸ್ಥೆಗಳ ನಿರ್ಮಾಣಕ್ಕೂ ದುಂಡುಶೆಟ್ಟಿ ವಂಶಸ್ಥರು ಸುಮಾರು 50 ಎಕರೆಯಷ್ಟು ಭೂಮಿ ದಾನ ಮಾಡಿದ್ದಾರೆ. ಇಂತಹ ಮಹಾನ್ ದಾನಿಗಳ ಸೇವೆ ನಿತ್ಯ ಸ್ಮರಣೀಯ. ದಾನಿಗಳ ಕುಂಟುಂಬಕ್ಕೆ ಸೇರಿದ ವೆಂಕಟಕೃಷ್ಣ ಶೆಟ್ಟರನ್ನು ಸನ್ಮಾನಿಸಿದರು.

ಕೇಂದ್ರ ಸರ್ಕಾರ ರಾಜ್ಯದಲ್ಲೂ ಮತದಾರ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ. ತಾಲೂಕಿನಲ್ಲಿ ಈಗಾಗಲೇ ಶೇ.95 ರಷ್ಟು ಮ್ಯಾಪಿಂಗ್ ಕಾರ್ಯ ಆಗಿದೆ. ಉಳಿದ ರಷ್ಟು ಆಗಬೇಕಾಗಿದೆ. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ನಿಮಗೆ ಯಾವುದೇ ಸರ್ಕಾರದ ಸವಲತ್ತುಗಳು ದೊರಕುವುದಿಲ್ಲ. ಜನತೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಸ್ವಯಂ ಪರಿಶೀಲನೆ ಮಾಡಿಕೊಳ್ಳುವಂತೆ ಎಚ್ಚರಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಟಿ.ಮಂಜು ಮಾತನಾಡಿ, ದಾನಿಗಳ ಕುಟುಂಬಸ್ಥರನ್ನು ಶಾಶ್ವತವಾಗಿ ಆರೋಗ್ಯ ಸುರಕ್ಷಾ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡುವಂತೆ ಸರ್ಕರದ ಮಟ್ಟದಲ್ಲಿ ತೀರ್ಮಾನಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಹುಟ್ಟೂರಿನ ಜನರ ಕಲ್ಯಾಣಕ್ಕಾಗಿ ಆಸ್ಪತ್ರೆಗೆ ಮಂಜೂರಾತಿ ನೀಡಿದ್ದರು. ಅಂದು ಸಚಿವರಾಗಿದ್ದ ಕೆ.ಸಿ.ನಾರಾಯಣಗೌಡರು ಕಾಮಗಾರಿ ಆರಂಭಿಸಿದ್ದರು. ಅದನ್ನು ನನ್ನ ಅವಧಿಯಲ್ಲಿ ಪೂರ್ಣಗೊಳಿಸಲಾಗಿದೆ ಎಂದರು.

ನಮ್ಮ ಶಾಸ್ಪತ್ರೆಗೆ ಬರಬೇಕಾಗಿದ್ದ ಆರೋಗ್ಯ ಪರಿಕರಗಳು ಮತ್ತು ಯಂತ್ರೋಪಕರಣಗಳು ನೆರೆಯ ಕೆ.ಆರ್.ನಗರದ ಸರ್ಕಾರಿ ಆಸ್ಪತ್ರೆಗೆ ಹೋಗಿ ಅವು ಅಲ್ಲಿ ಬಳಕೆಯಾಗುತ್ತಿದ್ದವು. ಇದನ್ನು ಮಾಜಿ ಸಚಿವರೇ ನನಗೆ ತಿಳಿಸಿ ಅವುಗಳನ್ನು ನಮ್ಮ ಆಸ್ಪತ್ರೆಗೆ ತರಿಸಿಕೊಳ್ಳುವಂತೆ ತಿಳಿಸಿದ್ದರು. ಈಗ ಅಲ್ಲಿ ಬಳಕೆಯಾಗಿ ಹಾಳಾಗಿರುವ ಯಂತ್ರೋಪಕರಣಗಳನ್ನು ಅಲ್ಲಿಯೇ ಬಿಟ್ಟು ಉಳಿದವುಗಳನ್ನು ಇಲ್ಲಿಗೆ ತರಲಾಗಿದೆ ಎಂದರು.

ಅಗತ್ಯ ವೈದ್ಯಕೀಯ ಸಿಬ್ಬಂದಿ, ಯಂತ್ರೋಪಕರಣಗಳನ್ನು ತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಕೀಯ ಸಿಬ್ಬಂಧಿಗಳ ಕೊರತೆಯಿದೆ. ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರವಿದೆ. ಅದನ್ನು ಬಳಕೆ ಮಾಡುವ ರೆಡಿಯಾಲಿಜಿಸ್ಟ್ ಇಲ್ಲ. ಸರ್ಕಾರ ಅಗತ್ಯ ಮೂಲ ಸೌಲಭ್ಯ, ಸಿಬ್ಬಂದಿಗಳನ್ನು ಒದಗಿಸಿಕೊಟ್ಟಾಗ ಮಾತ್ರ ಸರ್ಕಾರದ ಆಶಯ ಈಡೇರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ರಾಜ್ಯ ಕೈಮಗ್ಗ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ಕಾಂಗ್ರೆಸ್ ಮುಖಂಡರಾದ ಬಿ.ಎಲ್.ದೇವರಾಜು, ಎಂ.ಡಿ.ಕೃಷ್ಣಮೂರ್ತಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ಟಿ.ಬಲದೇವ, ತಾಲೂಕು ಜೆಡಿಎಸ್ ಅಧ್ಯಕ್ಷ ಮಲ್ಲೇನಹಳ್ಳಿ ಮೋಹನ್, ಎಸಿ ಡಾ.ಕೆ.ಆರ್.ಶ್ರೀನಿವಾಸ್, ಜಿಲ್ಲಾ ಆರೋಗ್ಯಾಧಿಕಾರಿ ಕೆ.ಮೋಹನ್, ತಾಲೂಕು ವೈದ್ಯಾಧಿಕಾರಿ ಜೆ.ಅಜಿತ್, ಆರೋಗ್ಯ ಸುರಕ್ಷಾ ಸಮಿತಿ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ: ಮಧು
ಬಾಗೇಪಲ್ಲಿಯಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ