ಕನ್ನಡಪ್ರಭ ವಾರ್ತೆ ಕುಶಾಲನಗರ
ಅರಣ್ಯ ಇಲಾಖೆಯ ಕೊಡಗು ವೃತ್ತದ ಮಡಿಕೇರಿ ವನ್ಯಜೀವಿ ವಿಭಾಗದಿಂದ ಹಾರಂಗಿಯ ಸಾಕಾನೆ ಶಿಬಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ವಿಶ್ವ ಆನೆ ದಿನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆನೆ ಮಾನವ ಸಂಘರ್ಷದಲ್ಲಿ ಮನುಷ್ಯ ಹಾಗೂ ಆನೆಗಳ ಸಾವು ನಿರಂತರವಾಗಿ ನಡೆಯುತ್ತಲೇ ಇದೆ.
ಇಲಾಖೆಯ ಮಾಹಿತಿಯ ಪ್ರಕಾರ ಕಳೆದ ವರ್ಷಗಳಲ್ಲಿ 283 ಆನೆಗಳು ಸಹಜವಾದ ಸಾವನ್ನಪ್ಪಿವೆ.30 ಆನೆಗಳು ವಿದ್ಯುತ್ ಪ್ರವಹಿಸಿ ಸಾವಪ್ಪಿದರೆ, 6 ಆನೆಗಳು ಹತ್ಯೆಗೊಳಗಾಗಿವೆ. ಆದ್ದರಿಂದ ಅಮಾಯಕ ಆನೆಗಳ ಸಂರಕ್ಷಣೆಗೆ ವೈಜ್ಞಾನಿಕವಾದ ಕ್ರಮವಾಗಬೇಕಿದೆ ಎಂದು ಸಂಕೇತ್ ಪೂವಯ್ಯ ಹೇಳಿದರು.
ದುಬಾರೆ ಆನೆ ಶಿಬಿರದ ಪಶುವೈದ್ಯ ಡಾ.ಚೆಟ್ಟಿಯಪ್ಪ ಆನೆಗಳ ಕುಟುಂಬದ ಮಾದರಿ ಹಾಗೂ ಆವಾಸಸ್ಥಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಇದೇ ವೇಳೆ ಆನೆಗಳ ಬಗೆಗಿನ ವಿದ್ಯಾರ್ಥಿಗಳ ಕೆಲವು ಕೌತುಕ ಪ್ರಶ್ನೆಗಳಿಗೆ ಮಾಹಿತಿ ನೀಡಿದರು.ಮಡಿಕೇರಿ ಪ್ರಾದೇಶಿಕ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಮಾತನಾಡಿದರು. ಕೊಡಗು ಆನೆ ಕಾರ್ಯಪಡೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ಅನುಷಾ, ವಿರಾಜಪೇಟೆ ಉಪವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಚ್.ಜಗನ್ನಾಥ್, ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಯ್ಯದ್ ಅಹಮದ್ ಶಾ ಹುಸೇನ್, ಮಡಿಕೇರಿ ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ.ನೆಹರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್, ಅರಣ್ಯಾಧಿಕಾರಿ ಎನ್.ಸಿ.ಶಮನ್, ಮರಿಸ್ವಾಮಿ, ವಲಯ ಅರಣ್ಯಾಧಿಕಾರಿಗಳಾದ ರತನ್ ಕುಮಾರ್, ಕೊಟ್ರೇಶ್, ಅರವಿಂದ್, ರವೀಂದ್ರ ಸೇರಿದಂತೆ ಉಪವಲಯ ಅರಣ್ಯಾಧಿಕಾರಿ, ಸಿಬ್ಬಂದಿ ಇದ್ದರು.
ಆನೆ ದಿನದ ಅಂಗವಾಗಿ ಶಿಬಿರದ ಸಾಕಾನೆಗಳಾದ ಲಕ್ಷ್ಮಣ, ಈಶ್ವರ, ಏಕದಂತ, ವಿಕ್ರಮ, ರಾಮ ಹಾಗೂ ಕರ್ಣ ಎಂಬ ಆನೆಗಳಿಗೆ ಸ್ನಾನ ಮಾಡಿಸಿ ಹರಳೆಣ್ಣೆ ಹಚ್ಚಿ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.ಈ ವೇಳೆ ಆನೆಗಳ ಮಾವುತರಾದ ಪುಟ್ಟ, ವಿಶ್ವನಾಥ, ನಾಗರಾಜ, ಸಂಜು, ಮಂಜ ಹಾಗೂ ಮಂಜು ಅಲಂಕೃತ ಸಾಕಾನೆಗಳನ್ನು ಏರಿ ಕಾರ್ಯಕ್ರಮದ ಅತಿಥಿಗಳಿಗೆ ಸೊಂಡಿಲೆತ್ತಿ ನಮಸ್ಕರಿಸುತ್ತಿದ್ದುದು ಕಂಡು ಬಂತು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಆಗಮಿಸಿದ್ದ ಶಾಲೆಯ ಮುಖ್ಯ ಶಿಕ್ಷಕರೂ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕ್ರತ ಟಿ.ಜಿ.ಪ್ರೇಮಕುಮಾರ್ ಪರಿಸರ ಹಾಗೂ ವನ್ಯ ಜೀವಿಗಳ ಸಂರಕ್ಷಣೆಯ ಕುರಿತಾದ ಜಾಗೃತಿ ಮೂಡಿಸುವ ಫಲಕಗಳೊಂದಿಗೆ ಘೋಷಣೆ ಕೂಗಿದರು.ಇದೇ ವೇಳೆ ಸಾಕಾನೆಗಳಿಗೆ ಅತಿಥಿಗಳು ಹಾಗೂ ಅಧಿಕಾರಿಗಳು ವಿವಿಧ ಹಣ್ಣುಗಳನ್ನು ತಿನ್ನಿಸಿದರು.