ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ :ಡಿಸಿ

KannadaprabhaNewsNetwork |  
Published : Dec 18, 2024, 12:47 AM IST

ಸಾರಾಂಶ

ಹಲವಾರು ವರ್ಷಗಳಿಂದ ಪೋಡಿ ದುರಸ್ತಿಗೊಳ್ಳದೆ ಬಾಕಿ ಉಳಿದುಕೊಂಡಿದ್ದ ಜಮೀನುಗಳನ್ನು ಕನಿಷ್ಠ ಮಂಜೂರಿ ದಾಖಲೆಗಳ ಪರಿಶೀಲನೆ ನಡೆಸಿ ಹೊಸ ಪಹಣಿ ಸೃಜಿಸುವ ಮೂಲಕ ರೈತರ ದರಖಾಸ್ತು ಮತ್ತು ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಲು ಕಂದಾಯ ಇಲಾಖೆಯು ದರಖಾಸ್ತು ದುರಸ್ತಿ ಪೋಡಿ ಮಾರ್ಗಸೂಚಿ ನಿಯಮಗಳನ್ನು ಸರಳೀಕರಣಗೊಳಿಸಿದ್ದು, ಜಿಲ್ಲೆಯ ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ, ತುಮಕೂರು

ಹಲವಾರು ವರ್ಷಗಳಿಂದ ಪೋಡಿ ದುರಸ್ತಿಗೊಳ್ಳದೆ ಬಾಕಿ ಉಳಿದುಕೊಂಡಿದ್ದ ಜಮೀನುಗಳನ್ನು ಕನಿಷ್ಠ ಮಂಜೂರಿ ದಾಖಲೆಗಳ ಪರಿಶೀಲನೆ ನಡೆಸಿ ಹೊಸ ಪಹಣಿ ಸೃಜಿಸುವ ಮೂಲಕ ರೈತರ ದರಖಾಸ್ತು ಮತ್ತು ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಲು ಕಂದಾಯ ಇಲಾಖೆಯು ದರಖಾಸ್ತು ದುರಸ್ತಿ ಪೋಡಿ ಮಾರ್ಗಸೂಚಿ ನಿಯಮಗಳನ್ನು ಸರಳೀಕರಣಗೊಳಿಸಿದ್ದು, ಜಿಲ್ಲೆಯ ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.

ಭೂ ಮಂಜೂರಿಯಂತೆ ಸರ್ಕಾರಿ ಸರ್ವೇ ನಂಬರುಗಳಿಂದ ಪ್ರತ್ಯೇಕಿಸಿ ಹಿಡುವಳಿ ಭೂಮಿಯನ್ನಾಗಿಸುವ ಪೋಡಿ ದುರಸ್ತಿಯ ಪ್ರಕ್ರಿಯೆಯಲ್ಲಿನ ಕಠಿಣ ನಿಯಮಗಳನ್ನು ಸರ್ಕಾರ ಸರಳೀಕರಣ ಮಾಡಿರುವ ಪರಿಣಾಮ ಸರ್ಕಾರಿ ನಂಬರುಗಳಲ್ಲಿನ ಮಂಜೂರಿ ರೈತಾಪಿ ವರ್ಗದವರಿಗೆ ಈ ನಿಯಮಗಳಿಂದ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ದರಖಾಸ್ತು ಮತ್ತು ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ದೃಷ್ಟಿಯಿಂದ ಸರ್ಕಾರವು ನಮೂನೆ 1-5ನ್ನು ತಯಾರಿಸುವ ಪ್ರಕ್ರಿಯೆಯನ್ನು ಸರಳೀಕರಿಸಿದ್ದು, ಕನಿಷ್ಠ 3 ಮಂಜೂರಿ ದಾಖಲೆಗಳು ಲಭ್ಯವಿದ್ದಲ್ಲಿ ತಹಶೀಲ್ದಾರ್‌ಗಳು ನೈಜತೆ ಪರಿಶೀಲಿಸಿ ಪೋಡಿಗೆ ಕ್ರಮವಹಿಸಲು ಆದೇಶ ನೀಡಲಿದ್ದಾರೆ. ನಮೂನೆ 1-5 ತಯಾರಿಸಲು ಹೊಸದಾಗಿ ತಂತ್ರಾಂಶವನ್ನೂ ಸಹ ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಒಂದು ಸರ್ವೆ ನಂಬರಿಗೆ ಸಂಬಂಧಿಸಿದ ಎಲ್ಲ ಮಂಜೂರಿ ದಾಖಲೆಗಳನ್ನು ಕ್ರೋಢೀಕರಿಸಿ ನಮೂನೆ 1-5ನ್ನು ತಂತ್ರಾಂಶದಲ್ಲಿ ದಾಖಲಿಸಿ, ಮಂಜೂರಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ತಂತ್ರಾಂಶದಲ್ಲಿ ಸಂರಕ್ಷಿಸಲಾಗುವುದು.

ದರಖಾಸ್ತು ಪೋಡಿಯನ್ನು ಆಂದೋಲನದ ರೂಪದಲ್ಲಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಕನಿಷ್ಠ 100 ಮಂಜೂರಿದಾರರು ಸೇರಿ ಒಟ್ಟು 1000 ಮಂಜೂರಿದಾರರಿಗೆ 2025ರ ಜನವರಿ 26ರೊಳಗಾಗಿ ನಮೂನೆ 1 ರಿಂದ 5ನ್ನು ಭರ್ತಿ ಮಾಡಿ ಪೋಡಿ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಬೇಕೆಂದು ಆಯಾ ತಾಲೂಕಿನ ತಹಶೀಲ್ದಾರ್ ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರುಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ಈಗಾಗಲೇ ತಂತ್ರಾಂಶದಲ್ಲಿ ಭೂ ಮಂಜೂರಿಯಾಗಿರುವ ಸರ್ಕಾರಿ ಸರ್ವೆ ನಂಬರ್ ಡಾಟಾ ಎಂಟ್ರಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಏಕ ಕಾಲದಲ್ಲಿ ಅಳತೆ ದುರಸ್ತಿ ಪ್ರಕ್ರಿಯೆಯನ್ನು ಸಹ ಕೈಗೊಂಡು ಮಂಜೂರಿದಾರರಿಗೆ ಹೊಸ ಪಹಣಿ ದಾಖಲೆ ಸೃಜಿಸುವ ಬಗ್ಗೆ ಕಾರ್ಯ ಯೋಜನೆಯನ್ನು ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ