ಲೋಕಸಭಾ ಚುನಾವಣೆ: ಅಭ್ಯರ್ಥಿಗಳು ಹಾಗೂ ಏಜೆಂಟರೊಂದಿಗೆ ಸಭೆಕನ್ನಡಪ್ರಭ ವಾರ್ತೆ ಕೊಪ್ಪಳ
ಲೋಕಸಭಾ ಚುನಾವಣೆ ಹಿನ್ನೆಲೆ ಕೊಪ್ಪಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಹಾಗೂ ಏಜೆಂಟರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರಗಳ ಸಲ್ಲಿಕೆ ಈಗಾಗಲೇ ಪೂರ್ಣಗೊಂಡು ಅಂತಿಮವಾಗಿ ಚುನಾವಣಾ ಕಣದಲ್ಲಿರುವ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರ ಅಭ್ಯರ್ಥಿಗಳು ಚುನಾವಣಾ ವೆಚ್ಚದ ಸಂಪೂರ್ಣ ವಿವರಣೆಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕಾಗಿದೆ. ಈ ಹಿನ್ನೆಲೆ ಅಭ್ಯರ್ಥಿಗಳು ರ್ಯಾಲಿ, ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಆಯಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳಿಂದ ಹಾಗೂ ಜಿಲ್ಲಾಮಟ್ಟದ ಕೆಲವು ಅನುಮತಿಗಳಿಗೆ ಜಿಲ್ಲಾ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಅಭ್ಯರ್ಥಿಗಳು ಚುನಾವಣಾ ವೆಚ್ಚ ನಿರ್ವಹಣೆಗಾಗಿಯೇ ಬ್ಯಾಂಕ್ನಲ್ಲಿ ಪ್ರತ್ಯೇಕವಾಗಿ ಹೊಸ ಖಾತೆ ತೆರೆಯುವುದು ಕಡ್ಡಾಯವಾಗಿದೆ. ಚುನಾವಣಾ ವೆಚ್ಚದ ಸಂಪೂರ್ಣ ವಿವರಣೆಯನ್ನು ರಿಜಿಸ್ಟರ್ನಲ್ಲಿ ನಮೂದಿಸಬೇಕು. ಇದರ ಜೊತೆಗೆ ಪ್ರತಿ ಅಭ್ಯರ್ಥಿವಾರು ಶ್ಯಾಡೋ ವೆಚ್ಚ ರಿಜಿಸ್ಟರ್ ಅನ್ನು ನಿರ್ವಹಿಸಲಾಗುವುದು. ಅಭ್ಯರ್ಥಿಗಳು ವಾಸ್ತವವಾಗಿ ಚುನಾವಣಾ ವೆಚ್ಚ ಕೈಗೊಂಡಿದ್ದು, ಅಭ್ಯರ್ಥಿ ನೀಡುವ ವಿವರದಲ್ಲಿ ನಮೂದಾಗದೇ ಇರುವ ವೆಚ್ಚದ ವಿವರಗಳನ್ನು ಚುನಾವಣಾ ಅಧಿಕಾರಿಗಳು ಶ್ಯಾಡೋ ವೆಚ್ಚ ರಿಜಿಸ್ಟರ್ನಲ್ಲಿ ನಮೂದಿಸಿಟ್ಟುಕೊಳ್ಳುತ್ತಾರೆ. ಅಭ್ಯರ್ಥಿಗಳು ತಪ್ಪು ಮಾಹಿತಿ ನೀಡಲು ಯತ್ನಿಸಿದಲ್ಲಿ, ಶ್ಯಾಡೋ ರಿಜಿಸ್ಟರ್ನಲ್ಲಿನ ಮಾಹಿತಿಯೊಂದಿಗೆ ತಾಳೆ ಹಾಕಲಾಗುವುದು. ಚುನಾವಣಾ ಸಂದರ್ಭದಲ್ಲಿ ಪ್ರತಿ ಅಭ್ಯರ್ಥಿ ಮೂರು ಬಾರಿ ವೆಚ್ಚದ ವಿವರವನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಸಾಮಾನ್ಯ ವೀಕ್ಷಕರು ಸೂಚನೆ ನೀಡಿದರು.
ಸಭೆಯಲ್ಲಿ ಪೊಲೀಸ್ ವೀಕ್ಷಕ ಡಾ. ಸತೀಶ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಿಗೋಡಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಅಭ್ಯರ್ಥಿಗಳು ಮತ್ತು ಏಜೆಂಟರು ಉಪಸ್ಥಿತರಿದ್ದರು.
ವೀಕ್ಷಕರ ಆಗಮನ; ಸಾರ್ವಜನಿಕರ ಭೇಟಿಗೆ ಅವಕಾಶ:ಭಾರತ ಚುನಾವಣಾ ಆಯೋಗವು ಮಾ.16ರಂದು ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಪೊಲೀಸ್ ವೀಕ್ಷಕರನ್ನಾಗಿ ಡಾ. ಸತೀಶ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ಪೊಲೀಸ್ ವೀಕ್ಷಕ ಡಾ. ಸತೀಶ್ ಕುಮಾರ್ ಜಿಲ್ಲೆಗೆ ಆಗಮಿಸಿದ್ದು, ಜಿಲ್ಲಾ ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರಿಗೆ ಲಭ್ಯವಿರುತ್ತಾರೆ. ಇವರನ್ನು ಜಿಲ್ಲಾಡಳಿತ ಭವನದಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರು ಭೇಟಿ ಮಾಡಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಅಹವಾಲು, ಮಾಹಿತಿಯನ್ನು ಸಲ್ಲಿಸಬಹುದಾಗಿದೆ. ಅಥವಾ ಪೊಲೀಸ್ ವೀಕ್ಷಕರ ಮೊ.ಸಂ: 9019710952 ಗೆ ಕರೆ ಮಾಡಿಯೂ ಅಹವಾಲು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.