ಹುಬ್ಬಳ್ಳಿ:
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ, ರಾಷ್ಟ್ರೀಯ ನಾಯಕರು ಏನು ಮಾತನಾಡಿದ್ದಾರೆ ಎಂಬ ಮಾಹಿತಿ ನನಗಿಲ್ಲ. ಆದಷ್ಟು ಬೇಗ ಈ ಸಮಸ್ಯೆಯನ್ನು ಪಕ್ಷದ ರಾಷ್ಟ್ರೀಯ ನಾಯಕರು ಪರಿಹರಿಸಲಿದ್ದಾರೆ ಎಂದರು.
ನಮ್ಮಿಂದ ಯಾವುದೇ ತಪ್ಪು ನಡೆದಿಲ್ಲ ಎಂದು ಹೇಳುವುದಿಲ್ಲ. ಆದರೆ, ನಡೆದಿರುವ ಸಣ್ಣಪುಟ್ಟ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದೆ ನಡೆಯುವುದಾಗಿ ದಿಂಗಾಲೇಶ್ವರ ಶ್ರೀಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ನಾಯಕರು ಮನವರಿಕೆ ಮಾಡಿಕೊಡುವರು. ಶ್ರೀಗಳು ರಾಜ್ಯದ ದೊಡ್ಡ ಮಠಾಧೀಶರಾಗಿರುವ ಕಾರಣ, ರಾಷ್ಟ್ರೀಯ ನಾಯಕರು ಚರ್ಚೆ ನಡೆಸಿ, ಅವರನ್ನು ಸಮಾಧಾನ ಪಡಿಸುವರು. ಈ ನಿಟ್ಟಿನಲ್ಲಿ ನಾನೂ ವೈಯಕ್ತಿಕವಾಗಿ ಪ್ರಯತ್ನಿಸುವೆ ಎಂದು ಹೇಳಿದರು.ವಚನಾನಂದ ಶ್ರೀಗಳ ಅಸಮಾಧಾನ ಕುರಿತ ಪ್ರಶ್ನೆಗೆ ಉತ್ತರಿಸಿದ ನಿರಾಣಿ, ಬಿಜೆಪಿ ಪಂಚಮಸಾಲಿಗಳಿಗೆ ನೀಡಿರುವ ಸ್ಥಾನಮಾನಗಳಿಗೆ ಸವಿವರವಾಗಿ ಏ. 14ರಂದು ಹರಿಹರದ ಪಂಚಮಸಾಲಿ ಪೀಠದಲ್ಲಿ ನಡೆಯಲಿರುವ ವಿಶೇಷ ಸಭೆಯಲ್ಲಿ ಮನವರಿಕೆ ಮಾಡಿಕೊಡಲಾಗುವುದು. ಈ ಸಭೆಯಲ್ಲಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಸಿ.ಸಿ. ಪಾಟೀಲ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಜನತೆ ಅರಿತಿದ್ದು, ಈ ಬಾರಿಯೂ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲವು ಸಾಧಿಸಲಿದ್ದಾರೆ ಎಂದು ಮುರಗೇಶ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು
ಮೋದಿ ಕಳೆದ 10 ವರ್ಷದಿಂದ ಇಡೀ ಜಗತ್ತನ್ನು ಭಾರತದೆಡೆಗೆ ನೋಡುವಂತೆ ಮಾಡಿದ್ದಾರೆ. ಪ್ರಧಾನಿಗಳು ಕೃಷಿ ಸೇರಿದಂತೆ ಎಲ್ಲ ವರ್ಗಕ್ಕೂ ಉತ್ತೇಜನ ನೀಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ವಿಮಾನ ನಿಲ್ದಾಣ, ಐಐಐಟಿ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ರಾಜ್ಯದಲ್ಲಿರುವ 28 ಲೋಕಸಭಾ ಸದಸ್ಯರಲ್ಲಿಯೇ ಜೋಶಿ ಕ್ಷೇತ್ರಕ್ಕೆ ಹೆಚ್ಚು ಅನುದಾನ ತಂದಿದ್ದಾರೆ. ನಾವು ಎಲ್ಲಿಯೇ ಪ್ರಚಾರಕ್ಕೆ ಹೋಗಲಿ ಅಲ್ಲಿನ ಜನ ಮೋದಿಗೆ ಮತ ಹಾಕುವುದಾಗಿ ಹೇಳುತ್ತಿದ್ದಾರೆ. ಈ ಬಾರಿಯೂ ಮೋದಿ ಪ್ರಧಾನಿಯಾಗಲಿದ್ದಾರೆ. ಅದರೊಂದಿಗೆ ಜೋಶಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಈ ವೇಳೆ ಬಿಜೆಪಿ ನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪಾಲಿಕೆ ಸದಸ್ಯ ವೀರಣ್ಣ ಸವಡಿ, ದತ್ತಮೂರ್ತಿ ಕುಲಕರ್ಣಿ ಸೇರಿದಂತೆ ಹಲವರಿದ್ದರು.