ಪಕ್ಷದ ವರಿಷ್ಠರಿಂದ ದಿಂಗಾಲೇಶ್ವರ ಶ್ರೀಗಳ ಮನವೊಲಿಕೆ

KannadaprabhaNewsNetwork |  
Published : Apr 13, 2024, 01:05 AM IST
ಮುರುಗೇಶ ನಿರಾಣಿ. | Kannada Prabha

ಸಾರಾಂಶ

ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳ ಮುನಿಸು ಸ್ಥಳೀಯ ಮಟ್ಟದ ನಾಯಕರನ್ನು ಮೀರಿ ಹೋಗಿದೆ. ಹೀಗಾಗಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಈಗಾಗಲೇ ದಿಂಗಾಲೇಶ್ವರ ಶ್ರೀಗಳೊಂದಿಗೆ ಮಾತನಾಡಿದ್ದಾರೆ. ಅವರು ಏನು ಮಾತನಾಡಿದ್ದಾರೆ ಎಂಬ ಮಾಹಿತಿ ನನಗಿಲ್ಲ.

ಹುಬ್ಬಳ್ಳಿ:

ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳ ಮುನಿಸು ಸ್ಥಳೀಯ ಮಟ್ಟದ ನಾಯಕರನ್ನು ಮೀರಿ ಹೋಗಿದೆ. ಹೀಗಾಗಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಈಗಾಗಲೇ ಶ್ರೀಗಳೊಂದಿಗೆ ಮಾತನಾಡಿದ್ದಾರೆ. ಅವರ ಮನವೊಲಿಸಲಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ, ರಾಷ್ಟ್ರೀಯ ನಾಯಕರು ಏನು ಮಾತನಾಡಿದ್ದಾರೆ ಎಂಬ ಮಾಹಿತಿ ನನಗಿಲ್ಲ. ಆದಷ್ಟು ಬೇಗ ಈ ಸಮಸ್ಯೆಯನ್ನು ಪಕ್ಷದ ರಾಷ್ಟ್ರೀಯ ನಾಯಕರು ಪರಿಹರಿಸಲಿದ್ದಾರೆ ಎಂದರು.

ನಮ್ಮಿಂದ ಯಾವುದೇ ತಪ್ಪು ನಡೆದಿಲ್ಲ ಎಂದು ಹೇಳುವುದಿಲ್ಲ. ಆದರೆ, ನಡೆದಿರುವ ಸಣ್ಣಪುಟ್ಟ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದೆ ನಡೆಯುವುದಾಗಿ ದಿಂಗಾಲೇಶ್ವರ ಶ್ರೀಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ನಾಯಕರು ಮನವರಿಕೆ ಮಾಡಿಕೊಡುವರು. ಶ್ರೀಗಳು ರಾಜ್ಯದ ದೊಡ್ಡ ಮಠಾಧೀಶರಾಗಿರುವ ಕಾರಣ, ರಾಷ್ಟ್ರೀಯ ನಾಯಕರು ಚರ್ಚೆ ನಡೆಸಿ, ಅವರನ್ನು ಸಮಾಧಾನ ಪಡಿಸುವರು. ಈ ನಿಟ್ಟಿನಲ್ಲಿ ನಾನೂ ವೈಯಕ್ತಿಕವಾಗಿ ಪ್ರಯತ್ನಿಸುವೆ ಎಂದು ಹೇಳಿದರು.

ವಚನಾನಂದ ಶ್ರೀಗಳ ಅಸಮಾಧಾನ ಕುರಿತ ಪ್ರಶ್ನೆಗೆ ಉತ್ತರಿಸಿದ ನಿರಾಣಿ, ಬಿಜೆಪಿ ಪಂಚಮಸಾಲಿಗಳಿಗೆ ನೀಡಿರುವ ಸ್ಥಾನಮಾನಗಳಿಗೆ ಸವಿವರವಾಗಿ ಏ. 14ರಂದು ಹರಿಹರದ ಪಂಚಮಸಾಲಿ ಪೀಠದಲ್ಲಿ ನಡೆಯಲಿರುವ ವಿಶೇಷ ಸಭೆಯಲ್ಲಿ ಮನವರಿಕೆ ಮಾಡಿಕೊಡಲಾಗುವುದು. ಈ ಸಭೆಯಲ್ಲಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಸಿ.ಸಿ. ಪಾಟೀಲ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಫಕೀರ ದಿಂಗಾಲೇಶ್ವರ ಶ್ರೀಗಳಿಗೆ ಹಗುರವಾದ ಪದಬಳಕೆ ಕುರಿತು ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯತ್ನಾಳ ಏನು ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದರೆ, ಯಾವುದೇ ಶ್ರೀಗಳಿಗೆ ಹಗುರವಾದ, ಅಶ್ಲೀಲ ಪದ ಬಳಸಿ ಮಾತನಾಡುವುದು ಸರಿಯಲ್ಲ ಎಂದರು.28 ಕ್ಷೇತ್ರದಲ್ಲೂ ಗೆಲುವು

ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಜನತೆ ಅರಿತಿದ್ದು, ಈ ಬಾರಿಯೂ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲವು ಸಾಧಿಸಲಿದ್ದಾರೆ ಎಂದು ಮುರಗೇಶ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು

ಮೋದಿ ಕಳೆದ 10 ವರ್ಷದಿಂದ ಇಡೀ ಜಗತ್ತನ್ನು ಭಾರತದೆಡೆಗೆ ನೋಡುವಂತೆ ಮಾಡಿದ್ದಾರೆ. ಪ್ರಧಾನಿಗಳು ಕೃಷಿ ಸೇರಿದಂತೆ ಎಲ್ಲ ವರ್ಗಕ್ಕೂ ಉತ್ತೇಜನ ನೀಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ವಿಮಾನ ನಿಲ್ದಾಣ, ಐಐಐಟಿ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ರಾಜ್ಯದಲ್ಲಿರುವ 28 ಲೋಕಸಭಾ ಸದಸ್ಯರಲ್ಲಿಯೇ ಜೋಶಿ ಕ್ಷೇತ್ರಕ್ಕೆ ಹೆಚ್ಚು ಅನುದಾನ ತಂದಿದ್ದಾರೆ. ನಾವು ಎಲ್ಲಿಯೇ ಪ್ರಚಾರಕ್ಕೆ ಹೋಗಲಿ ಅಲ್ಲಿನ ಜನ ಮೋದಿಗೆ ಮತ ಹಾಕುವುದಾಗಿ ಹೇಳುತ್ತಿದ್ದಾರೆ. ಈ ಬಾರಿಯೂ ಮೋದಿ ಪ್ರಧಾನಿಯಾಗಲಿದ್ದಾರೆ. ಅದರೊಂದಿಗೆ ಜೋಶಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಬಿಜೆಪಿ ನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪಾಲಿಕೆ ಸದಸ್ಯ ವೀರಣ್ಣ ಸವಡಿ, ದತ್ತಮೂರ್ತಿ ಕುಲಕರ್ಣಿ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!