ಪೇರೂರಿಯನ್ಸ್ ಕ್ಲಬ್ ವತಿಯಿಂದ ಸಮೀಪದ ಪೇರೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಬೇಸಿಗೆ ಶಿಬಿರಗಳ ಆಯೋಜನೆಯಿಂದ ಮಕ್ಕಳ ಮನಸು ಬದಲಾಯಿಸಬಹುದು ಎಂದು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದ್ದಾರೆ.
ಪೇರೂರಿಯನ್ಸ್ ಕ್ಲಬ್ ವತಿಯಿಂದ ಸಮೀಪದ ಪೇರೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿ ಮಕ್ಕಳು ಮೊಬೈಲ್ ಮೊರೆ ಹೋಗುತ್ತಿದ್ದಾರೆ. ಪೋಷಕರು ಇದಕ್ಕೆ ಪ್ರೋತ್ಸಾಹ ಕೊಡುತ್ತಿದ್ದಾರೆ. ತಂಟೆ ಮಾಡುವ ಮಕ್ಕಳನ್ನು ಸುಮ್ಮನಾಗಿರಿಸಲು, ಅಳುವ ಮಗುವನ್ನು ಸಮಾಧಾನಗೊಳಿಸಲು ಪೋಷಕರೇ ಇಂದು ಮಕ್ಕಳ ಕೈಗೆ ಮೊಬೈಲ್ ಕೊಡುವ ವ್ಯವಸ್ಥೆಗೆ ತಲುಪಿದೆ. ಪರೀಕ್ಷೆಗಳು ಕಳೆದ ನಂತರ ಮಕ್ಕಳು ಸಮಯವನ್ನು ವ್ಯರ್ಥ ಮಾಡುವ ಬದಲು ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಹವ್ಯಾಸಗಳನ್ನು ವೃದ್ಧಿಸಿಕೊಳ್ಳಬಹುದು ಎಂದರು.
ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ನಂತರ ಬೇಸಿಗೆ ಶಿಬಿರಗಳನ್ನು ಆಯೋಜಿಸುವ ಪರಿಪಾಠ ವಿವಿಧಡೆ ನಡೆಯುತ್ತಾ ಬಂದಿದೆ. ಹಾಕಿ , ಕ್ರಿಕೆಟ್ ಸೇರಿದಂತೆ ಕ್ರೀಡಾ ಹಾಗೂ ವೃತ್ತಿಪರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವುದು ಮಾತ್ರ ಮುಖ್ಯ ಅಲ್ಲ. ಅದಕ್ಕಿಂತಲೂ ಮಿಗಿಲಾಗಿ ಮಕ್ಕಳಿಂದ ಬದಲಾವಣೆಗಳನ್ನು ನಿರೀಕ್ಷಿಸಬಹುದು ಎಂದರು.
ಪುಟ್ಟ ಮಕ್ಕಳ ಭವಿಷ್ಯವನ್ನು ರೂಪಿಸಲು ಶಿಬಿರಗಳು ಅಗತ್ಯ. ಸ್ವತಂತ್ರವಾಗಿ ಬದುಕುವ ವ್ಯವಸ್ಥೆಯನ್ನು ಇಂತಹ ಶಿಬಿರದಲ್ಲಿ ಕಲಿಸಿಕೊಡಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆಶಯದೊಂದಿಗೆ ಮಕ್ಕಳ ಭವಿಷ್ಯ ನಿರ್ಮಿಸುವ ಕಾರ್ಯಕ್ಕೆ ಮುಂದಾಗಿರುವ ಪೇರೂರಿಯನ್ ಕ್ಲಬ್ ಸದಸ್ಯರ ಕಾರ್ಯ ಶ್ಲಾಘನೀಯ ಎಂದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ರವಿಕುಮಾರ್ ಉದ್ಯಮಿ ಬೆಂಗಳೂರು ಶುಭ ಹಾರೈಸಿದರು.
ಹಾಕಿ ಶಿಬಿರದ ಸಂಚಾಲಕ ತಾಪಂಡ ಅಪ್ಪಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಲ್ಲಮಾವಟಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಮಣವಟ್ಟಿರ ಹರೀಶ್ ಕುಶಾಲಪ್ಪ, ಬಲ್ಲಮಾವಟಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಚೋಕಿರ ಬಾಬಿ ಭೀಮಯ್ಯ, ನೆಲಜಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಜು ಅಪ್ಪಚ್ಚ, ಬಲ್ಲಮಾವಟಿ ಗ್ರಾಮ ಪಂಚಾಯತಿ ಸದಸ್ಯ ಮಚ್ಚುರ ರವೀಂದ್ರ, ಮಾಜಿ ಮಂಡಲ ಪ್ರಧಾನ ಮೂವೆರ ನಾನಪ್ಪ, ಶಿಬಿರದ ಮುಖ್ಯ ತರಬೇತಿದಾರರಾದ ಅಪ್ಪಚೆಟ್ಟೋಳಂಡ ಹರ್ಷಿತ್ ಅಯ್ಯಪ್ಪ, ಮುಕ್ಕಟ್ಟಿರ
ಶಿಶಿರ್ ಮುತ್ತಪ್ಪ, ಶಿಬಿರಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಇದ್ದರು.
ಈ ಸಂದರ್ಭ ಶಿಬಿರಾರ್ಥಿಗಳಿಗೆ ವೇದಿಕೆಯಲ್ಲಿದ್ದ ಗಣ್ಯರು ಅರ್ಹತಾ ಪತ್ರ ವಿತರಿಸಿ ಶುಭ ಹಾರೈಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.