ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಪೇಟೆ ಬೀದಿ ಅಗಲೀಕರಣ ಸಂಬಂಧ ಸೆ.10 ರಂದು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.ಪಟ್ಟಣದ ಪೇಟೆ ಬೀದಿಯನ್ನು ಶಾಸಕ ಕೆ.ಎಂ.ಉದಯ್ ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಪಟ್ಟಣದ ಪೇಟೆಬೀದಿ ಕಿರಿದಾಗಿರುವ ಕಾರಣ ವಾಹನ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಎಂದರು.
ಈ ಸಂಬಂಧ ಶಾಸಕ ಕೆ.ಎಂ.ಉದಯ್ ಅವರು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ವರದಿ ನೀಡುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ರಸ್ತೆ ಪರಿಶೀಲನೆ ಮಾಡಲಾಗುತ್ತಿದೆ ಎಂದರು.ಪಟ್ಟಣದ ಪೇಟೆ ಬೀದಿ ಕೆಲವು ಕಡೆ 20, 40 ಹಾಗೂ 60 ಅಡಿಗಳು ಇದ್ದು, ಶಾಸಕ ಕೆ.ಎಂ.ಉದಯ್ ಅವರು 100 ಅಡಿಗೆ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ರಸ್ತೆ ವಿಸ್ತರಣೆ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಶಾಸಕ ಕೆ.ಎಂ.ಉದಯ್ ಮಾತನಾಡಿ, ಪೇಟೆ ಬೀದಿಯಲ್ಲಿ ವಾಹನ ಸಂಚಾರ ದುಸ್ತರವಾಗಿರುವ ಕಾರಣ 100 ಅಡಿಗೆ ವಿಸ್ತರಿಸಲು ಚಿಂತನೆ ನಡೆಸಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಗೊಂಡ ತಕ್ಷಣ ರಸ್ತೆ ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.ಈ ವೇಳೆ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಉಪ ವಿಭಾಗಾಧಿಕಾರಿ ಎಂ.ಶಿವಮೂರ್ತಿ, ಲೋಕೋಪಯೋಗಿ ಇಲಾಖೆ ಇಇ ಹರ್ಷ, ಎಇಇ ದೇವಾನಂದ್, ಅಭಿಯಂತರ ಹನುಮಂತು, ಪುರಸಭಾ ಮುಖ್ಯಾಧಿಕಾರಿ ಎಂ.ಮೀನಾಕ್ಷಿ, ಪುರಸಭಾ ಸದಸ್ಯ ಸಚಿನ್ ಮತ್ತಿತರರು ಇದ್ದರು.