ಹುಬ್ಬಳ್ಳಿ: ಪಶುಪಾಲಕರು ಮತ್ತು ಕುರಿಗಾರರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಪಶುಪಾಲಕರ ಮತ್ತು ಕುರಿಗಾರರ ಹಿತರಕ್ಷಣೆ ಕಾಯ್ದೆ ಜಾರಿಗೆ ಒತ್ತಾಯಿಸಿ ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಇಲ್ಲಿನ ತಹಸೀಲ್ದಾರ್ ಕಚೇರಿಗೆ ಕುರಿಗಳೊಂದಿಗೆ ಆಗಮಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಪಶುಪಾಲಕರು ಮತ್ತು ಕುರಿಗಾರರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದೆ. ಈ ಹಿಂದೆ ಕುಂದಗೋಳ ತಾಲೂಕಿನ ಕುರಿಗಾಹಿಯ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಯಿತು. ಕುರಿ ಕಳ್ಳತನ ಮಾಡುವ ಉದ್ದೇಶದಿಂದ ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಪ್ರಭು ಮೇತ್ರೆ ಅವರನ್ನು ಕೊಲೆ ಮಾಡಲಾಯಿತು.
ಇಂತಹ ನೂರಾರು ಪ್ರಕರಣಗಳು ರಾಜ್ಯದಲ್ಲಿ ನಡೆದಿದೆ. ಗುಡ್ಡಗಾಡಿನಲ್ಲಿ ಕುರಿ ಮೇಯಿಸಲು ಹೋದಾಗ ಅರಣ್ಯ ಇಲಾಖೆಯ ಅಧಿಕಾರಿಗಳಿಂದ ನಿರಂತರ ಕಿರುಕುಳ, ದೌರ್ಜನ್ಯಗಳು ನಡೆಯುತ್ತಿವೆ. ದೇಶಕ್ಕೆ ಸ್ವಾತಂತ್ರ ಸಿಗುವ ಪೂರ್ವದಲ್ಲಿ, ಪ್ರಾಚೀನ ಕಾಲದಿಂದಲೂ ಬೆಟ್ಟಗುಡ್ಡಗಳಲ್ಲಿ ಪಶು ಸಂಗೋಪನೆ ಮತ್ತು ಕುರಿಗಾರಿಕೆ ಮಾಡಿಕೊಂಡು ಬಂದಿರುವ ಜನರಿಗೆ ಆಯಾ ಪ್ರದೇಶದಲ್ಲಿ ಇಂದು ಅವರ ಬದುಕುವ ಹಕ್ಕನ್ನು ಕಸಿದುಕೊಳ್ಳಲಾಗಿದೆ.ರಾಜ್ಯದಲ್ಲಿ ನಿರಂತರವಾಗಿ ಕುರಿಗಳ ಕಳ್ಳತನ ನಡೆಯುತ್ತಿದೆ. ಅಲ್ಲದೇ ಕುರಿ ಮೇಯಿಸುತ್ತಿರುವಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಉಚಿತವಾಗಿ ಕುರಿಗಳನ್ನು ಕೊಡುವಂತೆ ಬೇಡಿಕೆ ಇಡುವುದು ಹಾಗೂ ಅವರು ನಿಗದಿ ಮಾಡಿದ ಲಂಚ ನೀಡಲು ಒತ್ತಾಯಿಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ.
ಈ ವೇಳೆ ರಾಜ್ಯ ಸಂಚಾಲಕ ರವಿರಾಜ ಕಂಬಳಿ, ಯಲ್ಲಪ್ಪ ಹೆಗಡೆ ಸೇರಿದಂತೆ ಹಲವು ಕುರಿಗಾರರು ಪಾಲ್ಗೊಂಡಿದ್ದರು.