ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಹನುಮಂತನಗರದಲ್ಲಿ ಭೇಟಿ ಮಾಡಿ ಅಭಿನಂದಿಸಿ ಮನವಿ ಸಲ್ಲಿಸಿದ ವೇದಿಕೆ ಮುಖಂಡರು, ನಾಡಿನಲ್ಲಿ ದಿನೇ ದಿನೇ ಪದವೀಧರರ ಸಂಖ್ಯೆ ಹೆಚ್ಚಾದಂತೆ ನಿರುದ್ಯೋಗ ಸಮಸ್ಯೆ ಎದುರಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಅತಿಥಿ ಉಪನ್ಯಾಸಕರ ಹುದ್ದೆ ಕಾಯಂಗೊಳಿಸಬೇಕು. ವೇತನ ತಾರತಮ್ಯ ಸರಿಪಡಿಸಿ ಪದವಿ ಶಿಕ್ಷಣ ಕಾಲೇಜುಗಳನ್ನು ಉನ್ನತೀಕರಣಗೊಳಿಸಿ ವಿದ್ಯಾರ್ಥಿಗಳನ್ನು ಆಕರ್ಷಿಸಲು ಸಹಕರಿಸಬೇಕು. ಈ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು ಎಂದು ಆಗ್ರಹಿಸಿದರು.ಗ್ರಾಮಾಂತರ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಿರುವ ಭಾರತೀ ವಿದ್ಯಾಸಂಸ್ಥೆ ಅನೇಕ ಕುಟುಂಬಗಳು ಬದುಕು ಕಟ್ಟಿಕೊಳ್ಳಲು ನೆರವಾಗಿದೆ ಎಂದು ಶ್ಲಾಘಿಸಿದರು.
ಹಿರಿಯರಾದ ಜಿ.ಮಾದೇಗೌಡರು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾಗಿ ಮತ್ತು ರೈತ ಹೋರಾಟಗಾರರಾಗಿ ಗ್ರಾಮಾಂತರ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ, ವಿಶ್ವವಿದ್ಯಾನಿಲಯಗಳನ್ನು ಮೀರಿಸುವಂತಹ ಶೈಕ್ಷಣಿಕ ಸಾಧನೆ ಮಾಡಿದ್ದಾರೆ ಎಂದರು.ಭಾರತೀ ಶಿಕ್ಷಣ ಸಂಸ್ಥೆಗೆ ಕಲಿಕೆ ಮಾಡಲು ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಹಾಗೂ ವಿಶೇಷ ಅಧ್ಯಯನ ಮಾಡಿರುವ ಶಿಕ್ಷಕರು ಮತ್ತು ಬುದ್ಧಿಜೀವಿಗಳು ಆಗಮಿಸುತ್ತಿದ್ದಾರೆ. ಗುಣಾತ್ಮಕ ಶಿಕ್ಷಣ, ಶಿಕ್ಷಣ ಕ್ಷೇತ್ರದಲ್ಲಿ ಜ್ಞಾನ ದೀವಿಗೆ ನೀಡುತ್ತಿರುವುದು ಪ್ರಶಂಸನೀಯ ಸಂಗತಿ ಎಂದು ಜಿ.ಮಾದೇಗೌಡರ ಸಾಧನೆಯನ್ನು ಸ್ಮರಿಸಿದರು.
ಹೋರಾಟಗಾರರ ಮನವಿ ಸ್ವೀಕರಿಸಿದ ಭಾರತೀ ಶಿಕ್ಷಣ ಸಂಸ್ಥೆ ಚೇರ್ಮನ್ , ಎಂಎಲ್ಸಿ ಮಧು ಜಿ.ಮಾದೇಗೌಡರು ಮಾತನಾಡಿ, ನಿರುದ್ಯೋಗ ಸಮಸ್ಯೆ ನಿವಾರಣೆ, ಪದವೀಧರರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸದನದ ಒಳಗೆ, ಹೊರಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೋರಾಟ ಮಾಡುತ್ತಿದ್ದೇನೆ ಎಂದರು.ಸದನದಲ್ಲಿ ಸಿಎಂ ಸೇರಿದಂತೆ ಸಚಿವರ ಗಮನ ಸೆಳೆದು ನಿರುದ್ಯೋಗ ಪದವೀಧರರ ಸಮಸ್ಯೆಗಳ ಕುರಿತು ಮಾತನಾಡಿದ್ದೇನೆ. ಶಿಕ್ಷಕರ ಪರ ಧ್ವನಿ ಎತ್ತಿ ಅವರ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಿರುದ್ಯೋಗ ಪದವೀಧರಿಗೆ ಉದ್ಯೋಗ ಕಲ್ಪಿಸುವುದು, ಅತಿಥಿ ಉಪನ್ಯಾಸಕರ ಕಾಯಂ ಸೇರಿದಂತೆ ಹಲವು ಸಮಸ್ಯೆ ಇತ್ಯರ್ಥಕ್ಕೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ತಾಲೂಕು ಪ್ರಧಾನ ಕಾರ್ಯದರ್ಶಿ ಸೋಂಪುರ ಉಮೇಶ್, ಸಂಘಟನಾ ಕಾರ್ಯದರ್ಶಿ ಎಸ್.ಎಲ್.ಉಮೇಶ್, ಉಪನ್ಯಾಸಕ ಅಜ್ಜಹಳ್ಳಿ ಸಿದ್ದಾರ್ಥ ಭಾಗವಹಿಸಿದ್ದರು.