ಬಿಎಸ್‌ವೈ ಬಂಧನ ಕೋರಿ ಹೈಕೋರ್ಟ್‌ಗೆ ಅರ್ಜಿ

KannadaprabhaNewsNetwork |  
Published : Jun 13, 2024, 12:46 AM IST

ಸಾರಾಂಶ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ಪ್ರಕರಣದ ದೂರುದಾರೆಯ ಪುತ್ರ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆ ನಡೆಸಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ಪ್ರಕರಣದ ದೂರುದಾರೆಯ ಪುತ್ರ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಈ ಕುರಿತು ದೂರುದಾರೆಯ ಪುತ್ರನಾದ ಬೆಂಗಳೂರಿನ ಬೇಗೂರು ನಿವಾಸಿ ಶಶಾಂಕ್‌ ಸಿಂಗ್‌ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿ, ನಗರ ಪೊಲೀಸ್‌ ಆಯುಕ್ತರು, ಸಿಐಡಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಮತ್ತು ಪ್ರಕರಣದಲ್ಲಿ ಆರೋಪಿಯೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಪ್ರತಿವಾದಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಅರ್ಜಿದಾರರ ಮನವಿ ಏನು?:

ಪ್ರಕರಣದಲ್ಲಿ 17 ವರ್ಷದ ಸಂತ್ರಸ್ತೆಯು ನನ್ನ ಸಹೋದರಿಯಾಗಿದ್ದು, ದೂರುದಾರೆ ತಾಯಿಯಾಗಿದ್ದಾರೆ. ಸಂತ್ರಸ್ತೆಯು ತಾಯಿ ಜೊತೆಗೆ 2024ರ ಫೆ.2ರಂದು ಸಹಾಯ ಕೇಳಿಕೊಂಡು ಬೆಂಗಳೂರಿನ ಆರ್‌ಎಂವಿ 2ನೇ ಹಂತದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೆ ಹೋಗಿದ್ದರು. ಈ ವೇಳೆ ಯಡಿಯೂರಪ್ಪ ಸಂತ್ರಸ್ತೆಯನ್ನು ಕೈ ಹಿಡಿದು ಕೊಠಡಿಯೊಂದಕ್ಕೆ ಕರೆದೊಯ್ದಿದ್ದರು. ವಿಚಾರಿಸುವ ನೆಪದಲ್ಲಿ ಸಂತ್ರಸ್ತೆಯ ಖಾಸಗಿ ಅಂಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ನಂತರ ಸಂತ್ರಸ್ತೆ ಯಡಿಯೂರಪ್ಪ ಅವರನ್ನು ದೂರಕ್ಕೆ ನೂಕಿ ಕೊಠಡಿ ಬಾಗಿಲು ತೆರೆದು ಕಿರುಚಾಡಿಕೊಂಡು ಹೊರ ಬಂದಿದ್ದಾರೆ. ಘಟನೆ ಕುರಿತು ತಾಯಿಗೆ ವಿವರಿಸಿದ್ದಾರೆ. ತಾಯಿ ಘಟನೆ ಕುರಿತು ಪ್ರಶ್ನಿಸಿದ್ದಕ್ಕೆ ಅವರಿಗೆ ಹಣ ನೀಡಲು ಯಡಿಯೂರಪ್ಪ ಮುಂದಾಗಿದ್ದರು. ಹಣ ಸ್ವೀಕರಿಸಲು ತಾಯಿ ನಿರಾಕರಿಸಿದ್ದಾರೆ. ಘಟನೆ ಕುರಿತು 2024ರ ಮಾ.14ರಂದು ಸದಾಶಿವನಗರ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ಗೆ ತಾಯಿ ದೂರು ನೀಡಿದ್ದರು. ಪೊಲೀಸರು ಪೋಕ್ಸೋ ಕಾಯ್ದೆ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್‌ 354(ಎ) ಅಡಿಯಲ್ಲಿ ಅಪ್ರಾಪ್ತೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಎಫ್‌ಐಆರ್‌ ದಾಖಲಿಸಿದ್ದರು ಎಂದು ಅರ್ಜಿದಾರರು ವಿವರಿಸಿದ್ದಾರೆ.

ಅಲ್ಲದೆ, ಪ್ರಕರಣವನ್ನು ಸಿಬಿಐಗೆ ವಹಿಸಲು ಕೋರಿ ಏ.2ರಂದು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು. ಏ.29ರಂದು ರಾಜ್ಯ ಮಹಿಳಾ ಆಯೋಗ ಅವರಿಗೆ ಡಾ.ನಾಗಲಕ್ಷ್ಮಿ ಪತ್ರ ನೀಡಿ ಯಡಿಯೂರಪ್ಪ ಅವರನ್ನು ಬಂಧಿಸಲು ಕೋರಿದ್ದರು. ಮೇ 20ರಂದು ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್‌ ಅವರಿಗೆ ಪತ್ರ ನೀಡಿದ್ದಾರೆ. ನನಗೆ ತಿಳಿದಿರುವಂತೆ ಮಾ.26ರಂದು 25ನೇ ಎಸಿಎಂಎಂ ನ್ಯಾಯಾಲಯವು ಸಂತ್ರಸ್ತೆಯ ಸ್ವಯಂಕೃತ ಹೇಳಿಕೆ ದಾಖಲಿಸಿಕೊಂಡಿದೆ. ತನಿಖಾಧಿಕಾರಿಯು ಧ್ವನಿ ದಾಖಲೆಗೊಂಡಿದ್ದ ಮೊಬೈಲ್‌ ಜಪ್ತಿ ಮಾಡಿದ್ದಾರೆ. ತನಿಖಾಧಿಕಾರಿಯು ಯಡಿಯೂರಪ್ಪ ಅವರಿಗೆ ನೋಟಿಸ್‌ ನೀಡಿದ್ದು, ಅವರ ಧ್ವನಿ ಮಾದರಿಯನ್ನೂ ಸಂಗ್ರಹಿಸಿದ್ದಾರೆ. ದೂರು ದಾಖಲಾಗಿ ಎರಡು ತಿಂಗಳು ಕಳೆದರೂ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿಲ್ಲ. ಕೊನೆಪಕ್ಷ ವಿಚಾರಣೆಗೆ ಹಾಜರಾಗಲು ಸೂಚಿಸಿ ಪೋಕ್ಸೋ ಕಾಯ್ದೆ ಸೆಕ್ಷನ್‌ 41(ಎ) ಅಡಿಯಲ್ಲಿ ನೋಟಿಸ್‌ ಸಹ ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಆದ್ದರಿಂದ ಯಡಿಯೂರಪ್ಪ ಅವರನ್ನು ಬಂಧಿಸಿ, ವಿಚಾರಣೆ ನಡೆಸಿ ಸತ್ಯಾಂಶ ತಿಳಿಯಬೇಕು. ಅಗತ್ಯವಿರುವ ಸಿಸಿಟಿವಿ ದೃಶ್ಯಗಳು, ಮೆಮೊರಿಕಾರ್ಡ್‌ ಮತ್ತು ಹಾರ್ಡ್‌ ಡಿಸ್ಕ್‌ ಅನ್ನು ವಶಪಡಿಸಿಕೊಳ್ಳಬೇಕು. ತನಿಖೆಯನ್ನು ಚುರುಕುಗೊಳಿಸಿ ಒಂದು ತಿಂಗಳ ಒಳಗೆ ವರದಿ ಸಲ್ಲಿಸಲು ಸೂಚಿಸಬೇಕು ಎಂದು ನಗರ ಪೊಲೀಸ್‌ ಆಯುಕ್ತರು ಮತ್ತು ಸಿಐಡಿ ಇನ್ಸ್‌ಪೆಕ್ಟರ್‌ಗೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತುಂಗಭದ್ರಾ ಜಲಾಶಯಕ್ಕೆ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ
ಸಂಪುಟ ಸಭೆಯಲ್ಲಿ ಚರ್ಚಿಸಿ ರಿತ್ತಿ ಕುಟುಂಬಕ್ಕೆ ನೆರವು: ಸಚಿವ ಎಚ್.ಕೆ ಪಾಟೀಲ