ಅಹವಾಲು ಸ್ವೀಕರಿಸಿದ ಜಿಲ್ಲಾಧಿಕಾರಿ, ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳಿಗೆ ಸೂಚನೆ
ರಸ್ತೆ ಇಲ್ಲ, ಚರಂಡಿ ವ್ಯವಸ್ಥೆ ಇಲ್ಲ, ಖಾತೆ ಮಾಡಲು ವಿಳಂಬ ಮಾಡುತ್ತಿದ್ದಾರೆ, ನಮ್ಮ ವಾರ್ಡಿನಲ್ಲಿ ನೀರಿನ ಸಮಸ್ಯೆ ಇದೆ, ಹೀಗೆ ಜಿಲ್ಲಾಧಿಕಾರಿಗಳ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಸುರಿಮಳೆಯೇ ಹರಿದು ಬಂದಿತು.
ಗೌರಿಬಿದನೂರು ನಗರದ ಡಾ. ಎಚ್. ಎನ್. ಕಲಾ ಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರರ ಮುಂದೆ ಬರೀ ಸಮಸ್ಯೆಗಳೇ ಎದುರಾದವು. ನಂತರ ಸರಿಯಾದ ಸಮಯಕ್ಕೆ ಜನತಾ ದರ್ಶನ ನಡೆಸದೇ ಇರುವುದರಿಂದ ಬಹಳ ಮಂದಿ ರೈತರು ಆಕ್ರೋಶ ವ್ಯಕ್ತಪಡಿಸಿದರು.ಕಾಟಾಚಾರಕ್ಕೆ ಸಭೆ:
ನಗರಸಭೆಯಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ ಪೌರಾಯುಕ್ತರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಪಕ್ಷಾತೀತವಾಗಿ ನಗರಸಭೆ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಒಂದು ವಾರದೊಳಗೆ ಸಭೆ ಕರೆದು ಎಲ್ಲಾ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆ ಹರಿಸಲಾಗುವುದು ಎಂದು ಹೇಳಿದರು.
ಜನತಾ ದರ್ಶನ ಕಾರ್ಯಕ್ರಮದಲ್ಲಿ ಕಲಾಭವನ ತುಂಬಿ ಹೊರಗಡೆ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕೌಂಟರ್ ಬಳಿ ದೂರು ದಾಖಲಿಸಿ ಸಮಸ್ಯೆಗಳನ್ನು ಬಗೆ ಹರಿಸುವಂತೆ ಸಾಲುಗಟ್ಟಿ ನಿಂತಿದ್ದರು. ಇನ್ನು ಕೆಲವರು ಇಲ್ಲಿ ಅರ್ಜಿ ಸಲ್ಲಿಸಿದರೆ ಪ್ರಯೋಜನವಿಲ್ಲ ಎಂದು ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ ನಡೆದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಮಹೇಶ್.ಎಸ್.ಪತ್ರಿ, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಹರೀಶ್. ಪೌರಾಯುಕ್ತೆ ಡಿ.ಎಂ.ಗೀತಾ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸಮೂರ್ತಿ, ತಾಲ್ಲೂಕು ಆರೋಗ್ಯಾದಾಕಾರಿ ಡಾ. ಚಂದ್ರಮೋಹನ್ ರೆಡ್ಡಿ, ಆಡಳಿತಾಧಿಕಾರಿ ಡಾ. ಲಕ್ಷ್ಮೀಕಾಂತ, ತಾಲೂಕಿನ ಅಧಿಕಾರಿಗಳು ಸಾರ್ವಜನಿಕರು ಇದ್ದರು.