ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ವೈಜ್ಞಾನಿಕವಾಗಿ ಹಸಿ ಹಾಗೂ ಒಣ ತ್ಯಾಜ್ಯ ವಿಲೇವಾರಿಯ ಮೂಲಕ ಉತ್ತಮ ಕಾರ್ಯನಿರ್ವಹಿಸುತ್ತಿದ್ದರೂ ಚಿಕ್ಕಬಳ್ಳಾಪುರ ತ್ಯಾಜ್ಯ ಸಮಸ್ಯೆಯಿಂದ ಸಂಪೂರ್ಣವಾಗಿ ಮುಕ್ತವಾಗಿಲ್ಲ. ನಗರದ ಹೊರವಲಯ, ನಿರ್ಜನ ಪ್ರದೇಶ, ಹೆದ್ದಾರಿಯ ಇಕ್ಕೆಲ ಹಾಗೂ ರಾಜಕಾಲುವೆಗಳಲ್ಲಿ ತ್ಯಾಜ್ಯದ ರಾಶಿ ತುಂಬಿಕೊಂಡಿದ್ದು ‘ಸ್ವಚ್ಛ ಚಿಕ್ಕಬಳ್ಳಾಪುರ ಸುಂದರ ಚಿಕ್ಕಬಳ್ಳಾಪುರ’ ಪರಿಕಲ್ಪನೆಯನ್ನು ಅಣಕಿಸುವಂತೆ ಭಾಸವಾಗುತ್ತಿದೆ.ನಗರ ಹೊರವಲಯದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 44 ತ್ಯಾಜ್ಯ ವಿಲೇವಾರಿ ಕೇಂದ್ರವಾಗಿದ್ದು ಗಬ್ಬು ನಾರುತ್ತಿದೆ. ತಾಲ್ಲೂಕಿನ ಬೀಡಗಾನಹಳ್ಳಿಯಿಂದ ಆರಂಭವಾಗಿ ಬಾಗೇಪಲ್ಲಿ ತಾಲ್ಲೂಕಿನ ನಂತರ ಆಂಧ್ರ ಪ್ರದೇಶದ ಗಡಿಯವರೆಗೆ ಚಾಚಿಕೊಂಡಿರುವ ಸುಮಾರು 50 ಕಿ.ಮೀ ಹೆದ್ದಾರಿ ವ್ಯಾಪ್ತಿಯ ಇಕ್ಕೆಲಗಳಲ್ಲಿ ತ್ಯಾಜ್ಯ ಎಲ್ಲೆಂದರಲ್ಲಿ ಹರಡಿಕೊಂಡಿದೆ.ರಸ್ತೆ ಬದಿ ದುರ್ವಾಸನೆರಸ್ತೆ ಬದಿ ಸಂಚರಿಸಲು ಸಾಧ್ಯವಾಗದಷ್ಟು ದುರ್ವಾಸನೆ ತುಂಬಿಕೊಂಡಿದೆ. ಹೆದ್ದಾರಿ ಬದಿಯಲ್ಲಿ ವಾಸವಿರುವ ಸಾರ್ವಜನಿಕರ ಗೋಳು ಹೇಳತೀರದು. ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಹೆದ್ದಾರಿ ಬದಿ ತ್ಯಾಜ್ಯದ ರಾಶಿ ಸಂಗ್ರಹವಾಗುತ್ತಿದ್ದು ದುರ್ನಾತದಲ್ಲಿ ಬದುಕಬೇಕಾಗಿದೆ. ಕಟ್ಟಡದ ಅವಶೇಷಗಳು, ಹಳೆಯ ಬಟ್ಟೆ, ಚಪ್ಪಲಿಗಳು, ಹಾಳಾದ ಗೃಹ ಬಳಕೆ ವಸ್ತುಗಳನ್ನು ತಂದು ಹೆದ್ದಾರಿ ಬದಿಯೇ ಸುರಿಯಲಾಗುತ್ತಿದ್ದು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ.ತಾಲ್ಲೂಕಿನ ಪೆರೇಸಂದ್ರ ಸೇತುವೆ ಕೆಳಗೆ ಟನ್ಗಟ್ಟಲೆ ಪ್ಲಾಸ್ಟಿಕ್ ವಸ್ತುಗಳು ಸಂಗ್ರಹವಾಗಿರುವುದು ಸಮಸ್ಯೆಯ ಗಂಭೀರತೆ ತೋರಿಸುತ್ತಿದ್ದು ಈ ಮಾರ್ಗದಲ್ಲಿ ಸಾಗುವ ವಾಹನಗಳಿಗೆ ಮಾರಕವಾಗಿದೆ. ಹೆದ್ದಾರಿಯಲ್ಲಿ ಸಾಗುವಾಗ ಕಣ್ಣಿಗೆ ರಾಚುವಂತೆ ಕಂಡರೂ ತ್ಯಾಜ್ಯವನ್ನು ವಿಲೇವಾರಿ ಮಾಡುವ ಗೋಜಿಗೆ ನಗರಸಭೆ, ಗ್ರಾಪಂ, ಹೆದ್ದಾರಿ ಪ್ರಾಧಿಕಾರಿ ತಲೆಕೆಡಿಸಿಕೊಂಡಿಲ್ಲ.
ಗ್ರಾಪಂ ವ್ಯಾಪ್ತಿಯಲ್ಲೂ ತ್ಯಾಜ್ಯಹೆದ್ದಾರಿ ಮಾತ್ರವಲ್ಲ ನಗರ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ತ್ಯಾಜ್ಯ ಸಮಸ್ಯೆ ಹೆಚ್ಚಾಗಿದೆ. ನಿರ್ಜನ ಪ್ರದೇಶ ಹಾಗೂ ಖಾಲಿ ನಿವೇಶನಗಳಲ್ಲಿ ತ್ಯಾಜ್ಯದ ರಾಶಿ ಸಂಗ್ರಹವಾಗುತ್ತಿದೆ. ಪ್ರತಿದಿನ ರಾತ್ರಿ ಹಾಗೂ ಬೆಳಗಿನ ಜಾವ ನಿರುಪಯುಕ್ತ ವಸ್ತುಗಳನ್ನು ತಂದು ಹೆದ್ದಾರಿ ಬದಿ ಎಸೆದು ಹೋಗುತ್ತಾರೆ. .