ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಪಟ್ಟಣದ ನಂದೀಶ್ವರ ರಂಗಮಂದಿರದ ಮುಂಭಾಗ ಗುರುವಾರ ಸಂಜೆ ಮೂಲನಂದೀಶ್ವರ ಜಾತ್ರಾಮಹೋತ್ಸವದಂಗವಾಗಿ ಜರುಗಿದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಾತ್ರೆಯ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಹೆಸ್ಕಾಂ ಅಧಿಕಾರಿಗಳು ಗಮನ ಹರಿಸಬೇಕು. ರೌಡಿ ಶೀಟರ್ಗಳು ಸೇರಿದಂತೆ ಕಿಡಿಗೇಡಿಗಳ ಮೇಲೆ ಪೊಲೀಸ್ ಇಲಾಖೆ ವಿಶೇಷ ನಿಗಾ ವಹಿಸಬೇಕು. ಪುರಸಭೆ ಅಧಿಕಾರಿಗಳು ಪಟ್ಟಣದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆರೋಗ್ಯ ಇಲಾಖೆಯವರು ಮುನ್ನಚ್ಚರಿಕೆಯ ಕ್ರಮವಾಗಿ ಸಂಚಾರಿ ಆಸ್ಪತ್ರೆಗಳನ್ನು ಆಯಕಟ್ಟಿನ ಸ್ಥಳದಲ್ಲಿ ಇರುವಂತೆ ಕೈಗೊಳ್ಳುವಂತಾಗಬೇಕು. ಪಟ್ಟಣದಲ್ಲಿ ಜಾತ್ರೆಯಂಗವಾಗಿ ದೀಪಾಲಂಕಾರ ಮಾಡಲಾಗುತ್ತಿದೆ. ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಜಾತ್ರೆಯ ಸಂದರ್ಭದಲ್ಲಿ ವಾಹನಗಳನ್ನು ಮೆಗಾ ಮಾರುಕಟ್ಟೆ ಆವರಣದಲ್ಲಿ ನಿಲುಗಡೆ ಮಾಡುವಂತೆ ಸೂಚನೆ ನೀಡಲಾಗುವುದು. ಐದು ದಿನಗಳ ಕಾಲ ವಾಹನಗಳ ಶುಲ್ಕ ವಿನಾಯಿತಿ ನೀಡುವಂತೆ ಅವಕಾಶ ಮಾಡಿಕೊಡಲಾಗುವುದು. ಮೆರವಣಿಗೆ ವೇಳೆ ಬೈಕ್ ಸೇರಿದಂತೆ ಯಾವುದೇ ವಾಹನಗಳು ಮಧ್ಯೆ ಪ್ರವೇಶಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದರು.ಆ.13ರಿಂದ ಆರಂಭವಾಗಿರುವ ಪ್ರವಚನ ಕಾರ್ಯಕ್ರಮದಲ್ಲಿ ನಿತ್ಯ ಬಸವಪ್ರಸಾದ ಸೇವೆಗೆ ಭಕ್ತರು ಸ್ವಯಂಪ್ರೇರಿತವಾಗಿ ಮುಂದಾಗುತ್ತಿರುವುದು ಶ್ಲಾಘನೀಯವಾಗಿದೆ. ಜಾತಿ-ಮತ ಭೇದವಿಲ್ಲದೆ ನಡೆಯುವ ಜಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಮಾತನಾಡಿ, ಪಟ್ಟಣದಲ್ಲಿ ಈಗಾಗಲೇ ವಿದ್ಯುತ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಾತ್ರೆಯ ಸಂದರ್ಭದಲ್ಲಿ ಪಟ್ಟಣದ ಸ್ವಚ್ಛತೆಗೆ ಪುರಸಭೆಯಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಜಾತ್ರಾ ಉತ್ಸವ ಸಮಿತಿ ಅಧ್ಯಕ್ಷ ಶ್ರೀಕಾಂತ ಕೊಟ್ರಶೆಟ್ಟಿ ಮಾತನಾಡಿ, ಅಧಿಕಾರಿಗಳೊಂದಿಗೆ ಸಹಕಾರ ನೀಡುವ ಮೂಲಕ ಜಾತ್ರೆಯನ್ನು ಯಶಸ್ವಿಗೊಳಿಸಬೇಕು. ಇದು ಧಾರ್ಮಿಕ ಕ್ಷೇತ್ರವಾಗಿರುವುದರಿಂದ ಭಕ್ತರು ಯಾವುದೇ ರೀತಿಯ ಗಲಾಟೆ ಮಾಡದೆ ಶಾಂತಿಯುತವಾಗಿ ಜಾತ್ರೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.