ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಮಾಧ್ಯಮಗಳ ಮುಂದೆ ಬಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ಕಳೆದ ಒಂಬತ್ತುವರೆ ವರ್ಷಗಳಿಂದ ಕೇವಲ ಮನ್ ಕಿ ಬಾತ್ ಮೂಲಕ ಸಿದ್ಧಪಡಿಸಿದ ವರದಿ ಓದುವುದಲ್ಲಾ, ಎಂದಾದರೂ ಮಾಧ್ಯಮಗಳ ಮುಂದೆ ಬಂದು ಅವರ ಒಂದು ಪ್ರಶ್ನೆಗೆ ಉತ್ತರಿಸಿದ್ದಾರಾ? ಎಂದು ಪ್ರಶ್ನಿಸಿ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಿ ಆಗ ಅವರು ಹೇಳಿದಂತೆ ಕೇಳುವೆ ಎಂದರು.
ಬರ, ಮುಂದಿನ ಅಧಿಕ ಮಳೆ ಎರಡನ್ನು ಎದುರಿಸಲು ಸೂಚನೆ:ಮಳೆ ಕೊರತೆಯ ಕಾರಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 75,200 ಹೆಕ್ಟೇರ್ ನಷ್ಟು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಜಿಲ್ಲೆಗೆ ಇತ್ತೀಚಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಆಗಿರುವ ಬೆಳೆಹಾನಿ ಬಗ್ಗೆ ಪರಿಶೀಲನೆ ನಡೆಸಿದೆ. ಬೆಳೆಹಾನಿ ಪರಿಹಾರವಾಗಿ 64.70 ಕೋಟಿ ರು. ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.ಜಿಲ್ಲೆಯ ಗ್ರಾಮೀಣ ಪ್ರದೇಶದ ರೈತರು, ಕೃಷಿ ಕೂಲಿ ಕಾರ್ಮಿಕರಿಗೆ ಆಸರೆಯಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ವರ್ಷ ಎರಡು ಲಕ್ಷ ಮಾನವ ದಿನಗಳ ಗುರಿ ಸಾಧನೆ ಮಾಡಲಾಗಿತ್ತು. ಪ್ರಸಕ್ತ ವರ್ಷ ಮೂರು ಲಕ್ಷ ಮಾನವ ದಿನಗಳ ಗುರಿ ಸಾಧನೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಫಸಲ್ ಭಿಮಾ ಯೋಜನೆಯಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲೂಕುಗಳ ವ್ಯಾಪ್ತಿಯಲ್ಲಿ ರಾಗಿ ಬೆಳೆಹಾನಿಯಾಗಿರುವುದಕ್ಕೆ ಸಂಬಂಧಿಸಿ 5,482 ನೋಂದಣಿಗಳಲ್ಲಿ ಒಟ್ಟು 2.63 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದೆ ಎಂದರು.ಸದ್ಯ ಜಿಲ್ಲೆಯಲ್ಲಿ 20 ವಾರಗಳಿಗೆ ಆಗುವಷ್ಟು ಜಾನುವಾರುಗಳ ಮೇವು ದಾಸ್ತಾನಿದೆ. ಅಲ್ಲದೇ ರೈತರ ಜಮೀನುಗಳಲ್ಲಿ ಬೆಳೆಯುತ್ತಿರುವ ಮೇವು ಹತ್ತು ವಾರಗಳಿಗೆ ಆಗುವಷ್ಟಿದೆ. ಜಿಲ್ಲೆಯಲ್ಲಿ ಬರದ ಹಿನ್ನೆಲೆಯಲ್ಲಿ ಗೋಶಾಲೆಗಳನ್ನು ಆರಂಭಿಸುವ ಬಗ್ಗೆಯೂ ಚರ್ಚೆಯಾಗಿದ್ದು, ಗೋಶಾಲೆ ಆರಂಭಿಸಬೇಕೆಂಬ ಬೇಡಿಕೆ ಸದ್ಯ ಯಾವ ತಾಲೂಕಿನಿಂದಲೂ ಬಂದಿಲ್ಲ. ಆದ್ದರಿಂದ ತಕ್ಷಣ ಗೋಶಾಲೆಗಳನ್ನು ತೆರೆಯುವ ಅವಶ್ಯಕತೆಯಿಲ್ಲ. ಜಿಲ್ಲೆಯ ಯಾವುದೇ ಶಾಸಕರೂ ಗೋಶಾಲೆಯ ಬೇಡಿಕೆ ಇಟ್ಟಿಲ್ಲ. ಆದಾಗ್ಯೂ ಗೋಶಾಲೆ ತೆರೆಯುವ ಸಂದರ್ಭ ಬಂದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಗೋಶಾಲೆ ತೆರೆಯಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ತಿಳಿಸಿದರು.
ಮಳೆಗೆ ಮುನ್ನೆಚ್ಚರಿಕೆ:ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಹೆಚ್ಚಿನ ಮಳೆ ಬರುವ ಸಾಧ್ಯತೆ ಇದೆ. ಆದ್ದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿಸಬೇಕು. ಬರದ ಸ್ಥಿತಿಯ ಜೊತೆಗೆ ಮುಂದೆ ಸುರಿಯುವ ಮಳೆ ಕಡೆ ಗಮನ ನೀಡಬೇಕು. ಮಳೆ ಪ್ರಮಾಣ ಹೆಚ್ಚಾದರೆ ಅದರಿಂದ ಆಗುವ ಹಾನಿಯ ಬಗ್ಗೆ ಗಮನವಹಿಬೇಕು ಎಲ್ಲೆಲ್ಲಿ ಮನೆಗಳು ಶಿಥಿಲವಾಗಿವೆ. ಎಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಬಗ್ಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.
ಶುದ್ಧ ನೀರಿನ ಘಟಕಗಳ ಸ್ಥಾಪನೆ:ಎಲ್ಲೆಲ್ಲಿ ಶುದ್ಧ ನೀರಿನ ಘಟಕಗಳ ಅಗತ್ಯವಿದೆಯೊ ಅಲ್ಲಿ ಘಟಕಗಳನ್ನು ಸ್ಥಾಪಿಸಲಾಗುವುದು. ದುರಸ್ತಿಗೆ ಬಂದ ಘಟಕಗಳನ್ನು ಸರಿಮಾಡಿಸಲಾಗುವುದು ಎಂದು ಸಚಿವರು ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಪ್ರಸ್ತುತ ಜಿಲ್ಲೆಯಲ್ಲಿ ಬರಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಆದ್ಯತೆ ಮೇರೆಗೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂಬರುವ ಬೇಸಿಗೆಯನ್ನೂ ಗಮನದಲ್ಲಿಟ್ಟುಕೊಂಡು ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ ಎಂದರು.ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಫಾಯಿ ಕರ್ಮಚಾರಿಗಳ 30 ಮಕ್ಕಳಿಗೆ ನೀಡಲಾಗುವ ಪ್ರೋತ್ಸಾಹ ಧನದ ಚೆಕ್ಕುಗಳನ್ನು ಸಚಿವರು ವಿತರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಪ್ರದೀಪ್ ಈಶ್ವರ್, ಎಸ್.ಎನ್.ಸುಬ್ಬಾರೆಡ್ಡಿ, ಬಿ.ಎನ್.ರವಿಕುಮಾರ್, ಅನಿಲ್ ಕುಮಾರ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಾಶ್.ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಜಿ.ಪಂ.ಉಪ ಕಾರ್ಯದರ್ಶಿ ಡಾ.ಎನ್.ಭಾಸ್ಕರ್ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.