ನಾರಿಶಕ್ತಿ ಬಗ್ಗೆ ಪ್ರಧಾನಿ ಮೋದಿಗೆ ಅಚಲ ವಿಶ್ವಾಸ

KannadaprabhaNewsNetwork |  
Published : Apr 17, 2026, 01:15 AM IST
 | Kannada Prabha

ಸಾರಾಂಶ

ಮಹಿಳೆಯರ ರಾಜಕೀಯ ಸ್ಥಾನಮಾನಕ್ಕಾಗಿ ಹಲವು ವರ್ಷಗಳಿಂದ ನಡೆದ ಹೋರಾಟಕ್ಕೆ ಮೋದಿ ನ್ಯಾಯ ಒದಗಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ. ಮಂಜುಳಾ ಹೇಳಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ಮಹಿಳಾ ಮೀಸಲಾತಿ ವಿರೋಧಿಸುವ ಪುರುಷ ಪ್ರಧಾನ ಮನಸ್ಥಿತಿಗಳನ್ನು ಮೆಟ್ಟಿ ನಿಂತು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿಯ ನಾರಿಶಕ್ತಿ ವಂದನ್ ಅಧಿನಿಯಮ ಜಾರಿಗೆ ತರಲು ಹೊರಟಿರುವುದು ಸ್ವಾಗತಾರ್ಹ. ಮಹಿಳೆಯರ ರಾಜಕೀಯ ಸ್ಥಾನಮಾನಕ್ಕಾಗಿ ಹಲವು ವರ್ಷಗಳಿಂದ ನಡೆದ ಹೋರಾಟಕ್ಕೆ ಮೋದಿ ನ್ಯಾಯ ಒದಗಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ. ಮಂಜುಳಾ ಹೇಳಿದರು.

ಗುರುವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಆದಿಚುಂಚನಗಿರಿಗೆ ಬಂದು ಕಾಲಭೈರವೇಶ್ವರನ ಹಾಗೂ ಚಾಮುಂಡೇಶ್ವರಿಯ ಆಶೀರ್ವಾದ ಪಡೆದುಹೋಗಿ ಲೋಕಸಭೆಯ ವಿಶೇಷ ಅಧಿವೇಶನದಲ್ಲಿ ನಾರಿಶಕ್ತಿ ವಂದನ್ ಅಧಿನಿಯಮ ಜಾರಿ ಮಾಡುತ್ತಿದ್ದಾರೆ. ಸೀತೆಯನ್ನು ರಾಮ, ದ್ರೌಪದಿಯನ್ನು ಕೃಷ್ಣ ರಕ್ಷಿಸಿದಂತೆ ರಾಜಕೀಯ ಸ್ಥಾನಮಾನ ಕಲ್ಪಿಸುವ ಮೂಲಕ ಮೋದಿಯವರು ದೇಶದ ಮಹಿಳೆಯರ ರಕ್ಷಣೆಯಲ್ಲಿದ್ದಾರೆ ಎಂದು ಅಭಿನಂದಿಸಿದರು.

ಲೋಕಸಭೆ ಹಾಗೂ ರಾಜ್ಯ ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33 ರಷ್ಟು ಸ್ಥಾನ ಮೀಸಲಾತಿ ನೀಡುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ, ಯಾರ ಹಕ್ಕನ್ನೂ ಕಸಿದುಕೊಂಡಂತಾಗುವುದಿಲ್ಲ. ಲೋಕಸಭೆಯ ಕ್ಷೇತ್ರ ಮರುವಿಂಗಡನೆಯಿಂದ 543 ಕ್ಷೇತ್ರಗಳ ಬದಲು 816 ಕ್ಷೇತ್ರಗಳಾಗುತ್ತವೆ. ಹೆಚ್ಚುವರಿ ಕ್ಷೇತ್ರಗಳು ಮಹಿಳಾ ಮೀಸಲಾತಿ ಪ್ರಮಾಣಕ್ಕೆ ಪೂರಕವಾಗಿರುತ್ತವೆ. ಮೀಸಲಾತಿ ಬಗ್ಗೆ ಕಾಂಗ್ರೆಸ್ ನಾಯಕರು ಒಂದಲ್ಲೊಂದು ರೀತಿಯಲ್ಲಿ ಆಕ್ಷೇಪ ಮಾಡುತ್ತಲೇ ಬಂದಿದ್ದಾರೆ. ಅವರು ಮಹಿಳೆಯರು ರಾಜಕೀಯ ಸ್ಥಾನ ಪಡೆಯವುದನ್ನು ಸಹಿಸುತ್ತಿಲ್ಲ ಎಂದು ಟೀಕಿಸಿದರು.

ಇಂದು ಎಲ್ಲಾ ಕ್ಷೇತ್ರಗಳಲ್ಲಿ ಸಮರ್ಥವಾಗಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ದೇಶದ, ರಾಜ್ಯಗಳ ಆಡಳಿತ ಚುಕ್ಕಾಣಿ ಹಿಡಿಯುವ ಅರ್ಹತೆ, ಸಾಮಥ್ಯವಿದೆ ಎಂಬ ಅಚಲ ವಿಶ್ವಾಸ ಹೊಂದಿರುವ ಪ್ರಧಾನಿ ಮೋದಿಯವರು ಮಹಿಳಾ ಮೀಸಲಾತಿಯ ಎಲ್ಲಾ ಅಡ್ಡಿಗಳನ್ನು ನಿವಾರಣೆ ಮಾಡಿ ಜಾರಿಗೆ ತರಲು ಹೊರಟಿದ್ದಾರೆ. ಇದು ಅವರು ದೇಶದ ಮಹಿಳೆಯರಿಗೆ ಸಲ್ಲಿಸುವ ಗೌರವವಾಗಿದೆ ಎಂದು ಮಂಜುಳಾ ಹೇಳಿದರು.

ಮಹಿಳಾ ಮೀಸಲಾತಿ ಸಂಬಂಧ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳ ಮೂಲಕ ಮಹಿಳೆಯರಲ್ಲಿ ರಾಜಕೀಯ ಪ್ರಜ್ಞೆ, ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಮಹಿಳೆಯರು ರಾಜಕೀಯ ಸ್ಥಾನಮಾನ ಪಡೆದು ಆಡಳಿತ ಚುಕ್ಕಾಣಿ ಹಿಡಿಯುವುದರಿಂದ ಆಡಳಿತಾತ್ಮಕವಾಗಿ ಹೊಸ ಬದಲಾವಣೆ ನಿರೀಕ್ಷಿಸಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ವಕ್ತಾರರಾದ ಶ್ರೀವಲ್ಲಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಿತ್ರಾದೇವಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಜ್ಯೋತಿ ತಿಪ್ಪೇಸ್ವಾಮಿ, ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ವಸಂತ ಸುದರ್ಶನ್, ಪ್ರಧಾನ ಕಾರ್ಯದರ್ಶಿಗಳಾದ ನಾಗರತ್ನ, ಮಂಜುಳಾ ಲೋಕೇಶ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ
ಪಿಪಿ ವೃತ್ತದಲ್ಲಿ ಬಸವೇಶ್ವರರ ಪ್ರತಿಮೆ ಸ್ಥಾಪನೆಗೆ ಮುನ್ನುಡಿ