ಕನ್ನಡಪ್ರಭ ವಾರ್ತೆ ಕಲಬುರಗಿ
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗಕ್ಕೆ ಖರ್ಗೆ ಕೊಡುಗೆ ಏನು ಎಂಬುದು ಇಡೀ ದೇಶಕ್ಕೆ ಗೊತ್ತಿದೆ. 2013-2018 ಅವಧಿಯಲ್ಲಿ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು, ಜಯದೇವ ಹೃದ್ರೋಗ ವಿಜ್ಞಾನಗಳ ಸಂಶೋಧನಾ ಸಂಸ್ಥೆ ಸ್ಥಾಪನೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ₹1000 ಕೋಟಿ ಅನುದಾನ ನೀಡುವುದರಿಂದ ಈಗ ವಾರ್ಷಿಕ ₹5000 ಕೋಟಿ ಅನುದಾನ ನೀಡಲಾಗಿದೆ. ಇದೆಲ್ಲವೂ ಸಾಧ್ಯವಾಗಿದ್ದರ ಹಿಂದೆ ಖರ್ಗೆ ಅವರು 371(ಜೆ) ಜಾರಿಗೆ ತಂದಿದ್ದು ಪ್ರಮುಖ ಕಾರಣ ಎಂಬುದನ್ನು ಪ್ರಧಾನಿ ಮೋದಿ ಅರ್ಥ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಕಲ್ಯಾಣ ಕರ್ನಾಟಕ ಭಾಗದ ಒಬ್ಬನೇ ಒಬ್ಬ ಶಾಸಕರಿಗೂ ಸಚಿವ ಸ್ಥಾನ ನೀಡಿರಲಿಲ್ಲ. ಮತ್ತೊಂದೆಡೆ, ಹಾಲಿ ಕಾಂಗ್ರೆಸ್ ಸರಕಾರ ಕಲ್ಯಾಣ ಕರ್ನಾಟಕ ಭಾಗದ ಎಂಟು ಶಾಸಕರಿಗೆ ಸಚಿವ ಸ್ಥಾನ ನೀಡಿದೆ. ಇದರ ಮೇಲೆಯೇ ಕಾಂಗ್ರೆಸ್ ಪಕ್ಷಕ್ಕೆ ಈ ಭಾಗದ ಮೇಲೆ ಎಷ್ಟು ಕಾಳಜಿಯಿದೆ ಎಂಬುದು ಅರ್ಥವಾಗುತ್ತದೆ ಎಂದರು.ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರ ಸರಕಾರ ಕೇವಲ ₹400ರಿಂದ ₹500 ಕೋಟಿ ಅನುದಾನ ನೀಡುತ್ತಿದೆ. ಇನ್ನೊಂದೆಡೆ, ರಾಜ್ಯ ಸರಕಾರ ₹1200-1300 ಕೋಟಿ ನೀಡುತ್ತಿದೆ. ಉದ್ದೇಶಪೂರ್ವಕವಾಗಿಯೇ ಕೇಂದ್ರ ಸರಕಾರ ಕರ್ನಾಟಕ ಮತ್ತು ಕೇರಳ ರಾಜ್ಯಕ್ಕೆ ಏಮ್ಸ್ ನೀಡಿಲ್ಲ. ಪ್ರಧಾನಿ ಮೋದಿ ಅವರಿಗೆ ಕಲಬುರಗಿ ಮೇಲೆ ವಕ್ರದೃಷ್ಟಿ ಇರುವುದೇ ಇದಕ್ಕೆ ಕಾರಣ ಎಂದು ವ್ಯಾಖ್ಯಾನಿಸಿದರು.
ಚುನಾವಣಾ ಬಾಂಡ್ ದೊಡ್ಡ ಹಗರಣ: ಚುನಾವಣಾ ಬಾಂಡ್ ಹೆಸರಿನಲ್ಲಿ ₹6300 ಕೋಟಿ ಹಗರಣ ನಡೆದಿದೆ. ಇದು ಕೇಂದ್ರದ ಬಿಜೆಪಿ ಸರಕಾರದ ಬಹುದೊಡ್ಡ ಹಗರಣ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಟೀಕಿಸಿದರು. ಈ ಕುರಿತು ಸ್ವತಃ ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ಕಪಾಳಮೋಕ್ಷ ಮಾಡಿದೆ. ಇಷ್ಟೆಲ್ಲಾ ದೊಡ್ಡ ಹಗರಣ ನಡೆದಿದ್ದರೂ ಕರ್ನಾಟಕದ ರಾಜ್ಯ ಸರಕಾರ ಕಾಂಗ್ರೆಸ್ ಹೈಕಮಾಂಡ್ ಪಾಲಿನ ಟಿಎಂ ಎಂದಿದ್ದಾರೆ. ಈ ಆರೋಪ ಖಂಡಿತ ಸುಳ್ಳು ಆರೋಪವಾಗಿದ್ದು, ಕೇಂದ್ರ ಸರಕಾರವೇ ಕಾರ್ಪೊರೇಟ್ ಕಂಪನಿಗಳನ್ನು ಎಟಿಎಂ ರೀತಿಯಲ್ಲಿ ಬಳಸಿಕೊಳ್ಳುತ್ತಿದೆ ಎಂದರು.