ಬಾಲ್ಯವಿವಾಹ ಪರಿಶೀಲನೆಗೆ ತೆರಳಿದಾಗ ಪೊಲೀಸರು ಸಹಕರಿಸಲಿಲ್ಲ

KannadaprabhaNewsNetwork |  
Published : Nov 26, 2025, 02:30 AM IST
ಫೋಟೊ ಶೀರ್ಷಿಕೆ: 25ಆರ್‌ಎನ್‌ಆರ್1ರಾಣಿಬೆನ್ನೂರು ನಗರದ ತಾಪಂ ಸಭಾಭವನದಲ್ಲಿ ತಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್ ಬಿ.ಆರ್. ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು.   | Kannada Prabha

ಸಾರಾಂಶ

ಬಾಲ್ಯ ವಿವಾಹ ಕುರಿತು ಮಾಹಿತಿ ಬಂದಾಗ ಪರಿಶೀಲನೆ ನಡೆಸಲು ತೆರಳಿದಾಗ ಪೊಲೀಸರು ಸರಿಯಾಗಿ ಸಹಕಾರ ನೀಡಲಿಲ್ಲ ಎಂದು ಸಿಡಿಪಿಒ ಪಾರ್ವತಿ ಹುಂಡೇಕಾರ ಅಳಲು ತೊಡಿಕೊಂಡ ಘಟನೆ ಮಂಗಳವಾರ ನಗರದ ತಾಲೂಕು ಪಂಚಾಯತ್ ಸಭಾಭವನದಲ್ಲಿ ತಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್ ಬಿ.ಆರ್. ಅಧ್ಯಕ್ಷತೆಯಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಕಂಡು ಬಂದಿತು.

ರಾಣಿಬೆನ್ನೂರು: ಬಾಲ್ಯ ವಿವಾಹ ಕುರಿತು ಮಾಹಿತಿ ಬಂದಾಗ ಪರಿಶೀಲನೆ ನಡೆಸಲು ತೆರಳಿದಾಗ ಪೊಲೀಸರು ಸರಿಯಾಗಿ ಸಹಕಾರ ನೀಡಲಿಲ್ಲ ಎಂದು ಸಿಡಿಪಿಒ ಪಾರ್ವತಿ ಹುಂಡೇಕಾರ ಅಳಲು ತೊಡಿಕೊಂಡ ಘಟನೆ ಮಂಗಳವಾರ ನಗರದ ತಾಲೂಕು ಪಂಚಾಯತ್ ಸಭಾಭವನದಲ್ಲಿ ತಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್ ಬಿ.ಆರ್. ಅಧ್ಯಕ್ಷತೆಯಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಕಂಡು ಬಂದಿತು. ಸಭೆಯ ಪ್ರಾರಂಭದಲ್ಲಿಯೇ ಅನುಸರಣಾ ವರದಿ ಮೇಲಿನ ಚರ್ಚೆ ವೇಳೆ ಬಾಲ ಗರ್ಭಿಣಿಯರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್ ಬಿ.ಆರ್. ಅವರು ತಾಲೂಕಿನ ಮೆಡ್ಲೇರಿ ಗ್ರಾಮದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಇದಕ್ಕೆ ಸಂಬಂಧಿಸಿದಂತೆ ಯಾವ ಕ್ರಮ ಜಗುಗಿಸಿದ್ದೀರಿ? ಎಂದು ಪ್ರಶ್ನಿಸಿದರು. ಬಾಲ್ಯ ವಿವಾಹ ತಡೆಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಇದಕ್ಕೆ ಉತ್ತರಿಸಿದ ಸಿಡಿಪಿಒ ಪಾರ್ವತಿ ಹುಂಡೇಕಾರ ಅವರು, ಬಾಲ್ಯ ವಿವಾಹ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು. ತಾಲೂಕಿನಲ್ಲಿ ಮೂರು ತಿಂಗಳ ಅವಧಿಯಲ್ಲಿ ಬಾಲ ಗರ್ಭಿಣಿಯರ 7 ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ 4 ಪ್ರಕರಣಗಳು ಮೆಡ್ಲೇರಿಯಲ್ಲಿ ಕಂಡು ಬಂದಿವೆ. ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ಜರುಗದಂತೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು. ತಾಲೂಕಿನ ಕಜ್ಜರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 6 ತಿಂಗಳುಗಳಿಂದ ವೈದ್ಯರಿಲ್ಲ. ಇಲ್ಲಿಗೆ ಬೇರೆ ವೈದ್ಯರ ನಿಯೋಜನೆ ಮಾಡಿಲ್ಲ ಏಕೆ? ಎಂದು ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್ ಬಿ.ಆರ್. ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ, ಅಲ್ಲಿನ ವೈದ್ಯರು ಹೆರಿಗೆ ರಜೆ ಮೇಲೆ ತೆರಳಿದ್ದರಿಂದ ಸಮಸ್ಯೆಯಾಗಿದೆ. ಸದ್ಯ ವಾರಕ್ಕೆ ಮೂರು ದಿನ ಅಲ್ಲಿಗೆ ಬೇರೆ ವೈದ್ಯರ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು. ಎಸ್‌ಸಿ ವರ್ಗದ ರೈತರಿಗೆ ಸ್ಪ್ರಿಂಕ್ಲರ್ ಸಲುವಾಗಿ ಶೇ. 90ರಷ್ಟು ಸಬ್ಸಿಡಿ ಇದ್ದರೂ ಯೋಜನೆಯ ಲಾಭ ಪಡೆದುಕೊಳ್ಳಲು ಫಲಾನುಭವಿಗಳು ಮುಂದೆ ಬಾರದಿರುವುದು ಅಚ್ಚರಿಯ ಸಂಗತಿ. ಇದಕ್ಕೆ ಕಾರಣವೇನು ಎಂದು ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್ ಬಿ.ಆರ್. ಅವರು ಕೃಷಿ ಅಧಿಕಾರಿಂಯನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಶಾಂತಮಣಿ ಜಿ. ಅವರು, ಸರ್ಕಾರದ ಯೋಜನೆ ಪ್ರಕಾರ ಒಂದು ಸಲ ಈ ಸೌಲಭ್ಯ ಪಡೆದವರು 7 ವರ್ಷಗಳವರೆಗೆ ಮತ್ತೊಂದು ಬಾರಿ ಪಡೆದುಕೊಳ್ಳಲು ಅವಕಾಶವಿಲ್ಲದಿರುವುದು ಇದಕ್ಕೆ ಕಾರಣವಾಗಿದೆ ಎಂದರು. ಬಿಸಿಎಂ ಇಲಾಖೆ ಹಾಸ್ಟೆಲ್‌ಗಳಲ್ಲಿ ಹಾಸಿಗೆ, ದಿಂಬುಗಳ ಕೊರತೆಯಿದೆ. ಇದರ ಬಗ್ಗೆ ಕೆಲವು ವಿದ್ಯಾರ್ಥಿ ಸಂಘಟನೆಗಳವರು ಪ್ರತಿಭಟನೆ ಕೂಡ ಮಾಡಿದ್ದಾರೆ. ಆದ್ದರಿಂದ ಇದರ ಬಗ್ಗೆ ಅಗತ್ಯ ಕ್ರಮ ಜರುಗಿಸುವಂತೆ ಬಿಸಿಎಂ ಇಲಾಖೆ ಅಧಿಕಾರಿ ಮನವಿ ಮಾಡಿದರು. ತಾಲೂಕಿನಲ್ಲಿ ರೇಷ್ಮೆ ಇಲಾಖೆಯ ವತಿಯಿಂದ 743 ರೈತರಿಗೆ ಸಾಗಾಣಿಕೆ ವೆಚ್ಚ ನೀಡಲಾಗುತ್ತದೆ. ಆದರೆ 2024ಜೂನ್ ನಿಂದ ಬಾಕಿ ಉಳಿದುಕೊಂಡಿದೆ ಎಂದು ರೇಷ್ಮೆ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳ ಅಧ್ಯಯನದ ಸಲುವಾಗಿ ಅಗತ್ಯ ಪುಸ್ತಕಗಳನ್ನು, ಮಾಸಿಕ ಪುಸ್ತಕಗಳನ್ನು ತರಿಸಿರಿ ಎಂದು ಜಿಪಂ ಉಪ ಕಾರ್ಯದರ್ಶಿ ಡಾ. ಪುನೀತ್ ಬಿ.ಆರ್. ಸಲಹೆ ನೀಡಿದರು. ತಾಪಂ ಇಒ ಡಾ.ವೆಂಕಟೇಶ ಬಿದರಿ ವೇದಿಕೆಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

4 ದಿನದಲ್ಲಿ 37 ಜನರಿಗೆ ನಾಯಿ ಕಡಿತ, ಬಾಲಕಿ ಗಂಭೀರ - 4 ನಗರಗಳಲ್ಲಿ ಬೀದಿ ನಾಯಿ, ಹುಚ್ಚು ನಾಯಿ ಕಡಿತ
ವಿಧಾನಸಭೆಯಲ್ಲಿ ಗಂಭೀರ ಆರೋಪ - ಮತ್ತೆ ಟೆಲಿಫೋನ್‌ ಕದ್ದಾಲಿಕೆ ಗದ್ದಲ!