ಸಮಾಜ ರಕ್ಷಿಸುವ ಪೊಲೀಸರ ಸೇವೆ ಶ್ಲಾಘನೀಯ: ನ್ಯಾಯಾಧೀಶ ಜಯಂತಕುಮಾರ್

KannadaprabhaNewsNetwork |  
Published : Oct 22, 2024, 12:14 AM IST
 ಪೊಲೀಸರ ಸೇವೆ ಶ್ಲಾಘನೀಯ | Kannada Prabha

ಸಾರಾಂಶ

ಪ್ರಾಣದ ಹಂಗನ್ನು ತೊರೆದು ಸದಾ ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಶ್ಲಾಘನೀಯ ಎಂದು ನ್ಯಾಯಾಧೀಶ ಜಯಂತಕುಮಾರ್ ಹೇಳಿದರು. ತುಮಕೂರಿನಲ್ಲಿ ಪೊಲೀಸ್‌ ಹುತಾತ್ಮ ದಿನಾಚರಣೆ ಹಿನ್ನೆಲೆ ಹುತಾತ್ಮ ಪೊಲೀಸರ ಸ್ಮಾರಕದ ಪುತ್ಥಳಿಗೆ ಪುಷ್ಪಗುಚ್ಛ ಇರಿಸಿ ಮಾತನಾಡಿದರು.

ಮಳೆಯಲ್ಲೂ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಕೆ ಕನ್ನಡಪ್ರಭ ವಾರ್ತೆ ತುಮಕೂರು

ಪ್ರಾಣದ ಹಂಗನ್ನು ತೊರೆದು ಸದಾ ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಶ್ಲಾಘನೀಯ ಎಂದು ನ್ಯಾಯಾಧೀಶ ಜಯಂತಕುಮಾರ್ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸರ ಸ್ಮಾರಕದ ಪುತ್ಥಳಿಗೆ ಪುಷ್ಪಗುಚ್ಛ ಇರಿಸಿ ಗೌರವ ಸಲ್ಲಿಸಿ ಮಾತನಾಡಿದರು.

ದೇಶದಲ್ಲಿ ನಾವುಗಳು ರಾತ್ರಿ ವೇಳೆ ನೆಮ್ಮದಿಯಾಗಿ ನಿದ್ದೆ ಮಾಡುತ್ತಿದ್ದೇವೆ ಎಂದರೆ ಅದಕ್ಕೆ ಪೊಲೀಸರ ಸೇವೆಯೇ ಕಾರಣ. ಪೊಲೀಸರು ದೇಶಕ್ಕಾಗಿ, ಸಮಾಜಕ್ಕಾಗಿ ದಿನದ 24 ಗಂಟೆಯೂ ಸಾಕಷ್ಟು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ ಎಂದರು.

ದೇಶ ಮತ್ತು ಸಮಾಜದ ರಕ್ಷಣೆಗಾಗಿ ಪ್ರತಿ ಕ್ಷಣವೂ ಸೇವೆ ಸಲ್ಲಿಸುತ್ತಿರುವ ಪೊಲೀಸರ ಕಾರ್ಯವನ್ನು ನಾವೆಲ್ಲರೂ ಸ್ಮರಿಸಬೇಕು. ಒಮ್ಮೊಮ್ಮೆ ತಮ್ಮ ಕುಟುಂಬದ ಹಿತವನ್ನು ಬದಿಗೊತ್ತಿ ಸಮಾಜದ ರಕ್ಷಣೆ ಕಾಪಾಡುವ ಪೊಲೀಸರ ಸೇವೆ ಶ್ಲಾಘನೀಯ ಎಂದರು.

ಬೆಳಿಗ್ಗೆಯೇ ಸುರಿಯುವ ಮಳೆಯಲ್ಲೂ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸುತ್ತಿರುವುದು ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ ಎಂಬುದು ಮತ್ತೊಮ್ಮೆ ಸಾಬೀತಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ದೇಶದ ಉತ್ತರದ ಗಡಿ ಭಾಗವು ವರ್ಷವಿಡೀ ಹಿಮದಿಂದ ಆವೃತವಾಗಿರುವ ದುರ್ಗಮ ಪ್ರದೇಶವಾಗಿದೆ. ಇಂತಹ ಸಂದರ್ಭದಲ್ಲಿ 1959 ರ ಅ. 21 ರಂದು ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಕರಣ್‌ಸಿಂಗ್ ಎಂಬ ಡಿವೈಎಸ್ಪಿರವರ ನಾಯಕತ್ವದಲ್ಲಿ ಸಿಆರ್‌ಪಿ ತಂಡದವರು ನಮ್ಮ ದೇಶದ ಗಡಿ ಭಾಗದ ಲಡಾಕ್ ಎಂಬಲ್ಲಿ ಕಾವಲು ಕಾಯುತ್ತಿರುವಾಗ ಚೀನಾ ದೇಶದ ಅಸಂಖ್ಯಾತ ಸೈನಿಕರು ನಮ್ಮ ದೇಶದ ಗಡಿ ಭಾಗದಲ್ಲಿ ಒಳನುಗ್ಗಿದರು. ಅಲ್ಲಿದ್ದ ನಮ್ಮ ಸೈನಿಕರು ದೇಶದ ರಕ್ಷಣೆಗಾಗಿ ಕೊನೆಯ ಹನಿ ರಕ್ತ ಇರುವವರೆಗೂ ಅಪ್ರತಿಮವಾಗಿ ಹೋರಾಡಿ ವೀರ ಮರಣ ಹೊಂದಿದರು ಎಂದು ಸ್ಮರಿಸಿದರು.

ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಾ ಸಾವನ್ನಪುತ್ತಿರುವ ವೀರ ಯೋಧರ ನೆನಪಿಗೋಸ್ಕರ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ನಮ್ಮ ಇಲಾಖೆ ವತಿಯಿಂದ ಪ್ರತಿ ವರ್ಷ ಅ. 21 ರಂದು ಆಚರಿಸುತ್ತಾ ಬಂದಿದ್ದೇವೆ ಎಂದರು.

ಈ ಬಾರಿ ತುಮಕೂರು ಜಿಲ್ಲೆಯ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ಮಹೇಶ್ ಜಿ.ವಿ. ಸೇರಿದಂತೆ ಕರ್ನಾಟಕದಲ್ಲಿ 5 ಮಂದಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ಸ್ಮರಿಸಿದರು.

ಪ್ರಸಕ್ತ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುವಾಗ ಪ್ರಾಣ ತೆತ್ತಿರುವ 213 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರ ಹೆಸರನ್ನು ಎಸ್ಪಿ ಅಶೋಕ್ ಅವರು ಪಠಿಸಿ ಗೌರವ ನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದರು.

ಅಡಿಷಲ್ ಎಸ್ಪಿಗಳಾದ ಮರಿಯಪ್ಪ, ಅಬ್ದುಲ್ ಖಾದರ್. ಕೆಎಸ್‌ಆರ್‌ಪಿ ಕಮಾಂಡೆಂಟ್ ಸತ್ಯನಾರಾಯಣ ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸರು ಭಾಗವಹಿಸಿದ್ದರು. 1959 ರ ಅ. 21ರಂದು ದೇಶದ ಗಡಿ ಕಾಯುವಾಗ ನಡೆದ ಯುದ್ಧದಲ್ಲಿ ಪೊಲೀಸರು ಹುತಾತ್ಮರಾದರು. ಅಂದಿನಿಂದ ಪ್ರತಿ ವರ್ಷ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸುತ್ತಾ ಬರಲಾಗುತ್ತಿದೆ. ಹುತಾತ್ಮರಾಗಿರುವ ಪೊಲೀಸರ ಆತ್ಮಕ್ಕೆ ಚಿರಶಾಂತಿ ದೊರೆಯಲಿ, ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕುರಣಿಸಲಿ.

ಜಯಂತಕುಮಾರ್ ನ್ಯಾಯಾಧೀಶ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀದಿ ನಾಯಿ ಮರಿ ದತ್ತು ಪಡೆದು ಮಾನವೀಯತೆ ತೋರಿ
5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಕಡ್ಡಾಯ