21ರಿಂದ ಪೋಲಿಯೋ ಲಸಿಕಾ ಕಾರ್ಯಕ್ರಮ ಆರಂಭ: ಕವಿತಾ ಎಸ್.ಮನ್ನಿಕೇರಿ

KannadaprabhaNewsNetwork |  
Published : Dec 10, 2025, 01:15 AM IST
9ಎಚ್‌ಪಿಟಿ3- ಹೊಸಪೇಟೆಯಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ ಅಧ್ಯಕ್ಷತೆ ವಹಿಸಿ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿದರು. ಡಾ. ಎಲ್‌.ಆರ್‌. ಶಂಕರ್ ನಾಯ್ಕ ಮತ್ತಿತರರಿದ್ದರು. | Kannada Prabha

ಸಾರಾಂಶ

ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನಿಗಾ ವಹಿಸಬೇಕು ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದ್ದಾರೆ.

ಹೊಸಪೇಟೆ: ಜಿಲ್ಲಾದ್ಯಂತ ಡಿ. 21ರಿಂದ 24ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಆಯೋಜಿಸಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನಿಗಾ ವಹಿಸಬೇಕು ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ, ಡಿಟಿಎಫ್‌ಐ ದಡಾರ ಮತ್ತು ರುಬೆಲ್ಲಾ ನಿರ್ಮೂಲನಾ ಕಾರ್ಯಕ್ರಮದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪೊಲೀಯೋ ಮುಕ್ತ ಭಾರತ ನಿರ್ಮಾಣಕ್ಕೆ ಸರ್ಕಾರಗಳು ಹೆಚ್ಚಿನ ಉತ್ತೇಜನ ನೀಡಿದ ಹಿನ್ನೆಲೆಯಲ್ಲಿ ಸದ್ಯಕ್ಕೆ ದೇಶದಲ್ಲಿ ಪ್ರಕರಣಗಳು ದಾಖಲಾಗದಿರುವುದು ಹೆಮ್ಮೆಯ ವಿಷಯ. ಆದರೂ ನೆರೆಯ ದೇಶಗಳಲ್ಲಿ ಪೊಲೀಯೋ ಹಾವಳಿ ಇರುವುದರಿಂದ ನಮ್ಮಲ್ಲಿ ನಿರ್ಲಕ್ಷ್ಯ ಸಲ್ಲದು. ವಿವಿಧ ಇಲಾಖೆಗಳ ಸಹಕಾರ ತೆಗೆದುಕೊಂಡು ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಬಗ್ಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಲಸಿಕೆಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.

ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಮನ್ವಯದಿಂದ ಕಾರ್ಯ ನಿರ್ವಹಿಸಿ ಯಶಸ್ವಿಗೊಳಿಸಬೇಕು.

ಎಲ್ಲ ಶಾಲೆಗಳಲ್ಲಿ ಪ್ರಾರ್ಥನೆ ವೇಳೆ ವಿದ್ಯಾರ್ಥಿಗಳಿಗೆ ಪೊಲೀಯೋ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಿ. ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ ತ್ಯಾಜ್ಯ ವಿಲೇವಾರಿ ವಾಹನಗಳಲ್ಲಿ ಧ್ವನಿ ಮುದ್ರಿಕೆ ಮೂಲಕ ವ್ಯಾಪಕ ಪ್ರಚಾರ ನೀಡಬೇಕು. ಡಿ. 21ರಂದು ಗರಿಷ್ಟ ಪ್ರಮಾಣದ ಗುರಿ ಸಾಧಿಸಬೇಕು. 24ರೊಳಗೆ ಸಂಪೂರ್ಣ ಗುರಿ ಸಾಧಿಸಲು ಅಗತ್ಯ ಕ್ರಮವಹಿಸಬೇಕು. ಕಾರ್ಯಕ್ರಮಕ್ಕೆ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ವಾಹನಗಳ ಪೂರೈಕೆ ಮಾಡಬೇಕು. ಅಧಿಕಾರಿಗಳು ವಿವಿಧ ಇಲಾಖೆಗಳ ಮತ್ತು ಸಂಘ ಸಂಸ್ಥೆಗಳ ಸಹಕಾರ ತೆಗೆದುಕೊಂಡು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶೇ. 100ಕ್ಕೆ 100ರಷ್ಟು ಪ್ರಗತಿ ಸಾಧಿಸಬೇಕು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಂಕರ್ ನಾಯ್ಕ ಎಲ್.ಆರ್. ಮಾತನಾಡಿ, ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 5 ವರ್ಷದೊಳಗಿನ ಮಕ್ಕಳ ಸಂಖ್ಯೆ 1,21,585 ಇದ್ದು, ಜಿಲ್ಲೆಯಲ್ಲಿ ಒಟ್ಟು 1040 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತದೆ. ಒಟ್ಟು 923 ತಂಡಗಳನ್ನು ರಚಿಸಲಾಗಿದೆ. ನಾಲ್ಕು ಮೊಬೈಲ್ ತಂಡಗಳು ಹಾಗೂ ಬಸ್ ನಿಲ್ದಾಣ, ರೈಲ್ವೆ ಸ್ಟೆಷನ್ ಮತ್ತು ಪ್ರಮುಖ ವೃತ್ತಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 50 ಟ್ರಾನ್ಸಿಟ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. 2170 ಲಸಿಕಾ ಕಾರ್ಯಕರ್ತರನ್ನು ನಿಯೋಜನೆ ಮಾಡಲಾಗಿದೆ. ಮೊದಲ ದಿನ ಬೂತ್ ಮಟ್ಟದಲ್ಲಿ ನಂತರ ಮೂರು ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಾಗುತ್ತದೆ ಎಂದರು.

ಈ ವೇಳೆ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಬಿ. ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖ ನಾಯ್ಕ, ಜಿಲ್ಲಾ ವೈದ್ಯಾಧಿಕಾರಿ ಡಾ. ಭಾಸ್ಕರ್, ಡಾ. ರಾಧಿಕಾ ಸೇರಿದಂತೆ ತಾಲೂಕು ವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಸಿದ ಕರ್ನಾಟಕ ಕ್ರಿಕೆಟ್‌ ಗುಣಮಟ್ಟ - ಈ ಸಲ 7 ಟಿ20ಯಲ್ಲಿ ಗೆದ್ದಿದ್ದು ಕೇವಲ 2
ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌ : ಬಿಜೆಪಿ