ಗಂಗಾವತಿ: ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ಅವ್ಯವಸ್ಥೆ ಖಂಡಿಸಿ ಖಂಡಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ತಾಪಂಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.ಈ ವೇಳೆ ಮಾತನಾಡಿದ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ, ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳೂ ದೊರೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಟ್ಟು ವಿದ್ಯಾರ್ಥಿಗಳಿಗೆ ಕೇವಲ ಮೂರು ಶೌಚಾಲಯಗಳಿವೆ, ಕುಡಿಯುವ ನೀರಿನ ಸಮಸ್ಯೆ ಇದೆ, ನೀರನ್ನು ಸಮರ್ಪಕವಾಗಿ ಶುದ್ಧೀಕರಿಸಲಾಗುತ್ತಿಲ್ಲ. ನೀರಿನಲ್ಲಿ ಹುಳು, ಪಾಚಿ ಕಾಣಿಸಿಕೊಳ್ಳುತ್ತಿವೆ, ಇಂತಹ ಗಂಭೀರ ಸಮಸ್ಯೆ ಇದ್ದರೂ ಅಧಿಕಾರಿಗಳು ಮೌನ ವಹಿಸಿರುವುದು ಖಂಡನೀಯ ಎಂದು ಹೇಳಿದರು.
ಅಡುಗೆ ಸಿಬ್ಬಂದಿ ಹಾಗೂ ನಿಲಯ ಪಾಲಕರು ವಿದ್ಯಾರ್ಥಿನಿಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಸಮಸ್ಯೆ ಪ್ರಶ್ನಿಸಿದ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ವಸತಿ ನಿಲಯದಿಂದ ಹೊರಹಾಕುವ ಬೆದರಿಕೆ ಹಾಕುತ್ತಾರೆ. ಪೋಷಕರಿಗೂ ವಸತಿ ನಿಲಯದೊಳಗೆ ಪ್ರವೇಶ ನೀಡದಿರುವ ಆರೋಪಗಳಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಂದು ಆಗ್ರಹಿಸಿದರು.
ತಾಲೂಕು ಅಧ್ಯಕ್ಷ ನಾಗರಾಜು ಯು. ಮಾತನಾಡಿ, ಈ ಸಮಸ್ಯೆಗಳನ್ನು ಈಗಾಗಲೇ ನಿಲಯ ಪಾಲಕರು, ತಾಲೂಕು ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರೂ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ. ಕೂಡಲೇ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಮಧ್ಯಪ್ರವೇಶಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಹಾಗೂ ನಿರ್ಲಕ್ಷ್ಯ ತೋರಿದ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ವಿದ್ಯಾರ್ಥಿನಿಯರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಅನಿರ್ದಿಷ್ಟ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.ಉಪಾಧ್ಯಕ್ಷ ಶರೀಫ್ ಎಂ., ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಹೋಸ್ಕೆರ, ಮುಖಂಡರಾದ ಮಾರುತಿ ವಿಠಲಪುರ, ವೆಂಕಟೇಶ್ ಹಾಗೂ ವಿದ್ಯಾರ್ಥಿನಿಯರಾದ ರಾಧಿಕಾ, ಲಕ್ಷ್ಮೀ, ಅಕ್ಷತಾ, ಭವಾನಿ, ಐಶ್ವರ್ಯಾ, ಅಂಬಿಕಾ ಉಪಸ್ಥಿತರಿದ್ದರು.