ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದು, ಮುನ್ನೆಚ್ಚರಿಕೆ ವಹಿಸಿದರೆ ಸೋಂಕನ್ನು ತಡೆಯಬಹುದಾಗಿದೆ. ಹೀಗಾಗಿ ಕಾಯಿಲೆಯ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಮಾಹಿತಿ ಕೇಂದ್ರ ಅಥವಾ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು.
ಗುಡಿಬಂಡೆ : ಜಿಲ್ಲೆಯಲ್ಲಿ ಹಕ್ಕಿ ಜ್ವರ ದ ಭೀತಿ ಹೆಚ್ಚಾಗಿದ್ದು, ಈ ಹಕ್ಕಿ ಜ್ವರ ಹರಡದಂತೆ ಕೋಳಿ ಫಾರಂ ಮಾಲೀಕರು ಸರ್ಕಾರದ ಮಾರ್ಗಸೂಚಿಯಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ಯಾವುದೇ ಜನರೂ ಸಹ ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ, ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು ಎಂದು ತಹಸೀಲ್ದಾರ್ ಸಿಗ್ಬತ್ತುಲ್ಲಾ ತಿಳಿಸಿದರು.
ಪಟ್ಟಣದ ಪಶು ವೈದ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಹಕ್ಕಿ ಜ್ವರದ ಕುರಿತು ಜಾಗೃತಿ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಗ್ರಾಮವೊಂದರಲ್ಲಿ ಮೊದಲ ಹಕ್ಕಿ ಜ್ವರ ಪ್ರಕರಣ ಪತ್ತೆಯಾಗಿದೆ. ಈಗಾಗಲೇ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.ಕೋಳಿ ಸತ್ತರೆ ಮಾಹಿತಿ ನೀಡಿ
ಪಶು ವೈದ್ಯ ನಟರಾಜ್ ಮಾತನಾಡಿ, ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದು, ಮುನ್ನೆಚ್ಚರಿಕೆ ವಹಿಸಿದರೆ ಸೋಂಕನ್ನು ತಡೆಯಬಹುದಾಗಿದೆ. ಹೀಗಾಗಿ ಕಾಯಿಲೆಯ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಮಾಹಿತಿ ಕೇಂದ್ರ ಅಥವಾ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು. ಒಂದು ವೇಳೆ ತಮ್ಮ ಫಾರಂಗಳಲ್ಲಿ ಕೋಳಿಗಳು ಆಕಸ್ಮಿಕವಾಗಿ ಮೃತಪಟ್ಟರೇ ಕೂಡಲೇ ನಮಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಹಕ್ಕಿ ಜ್ವರ ಗಾಳಿಯ ಮೂಲಕವೂ ಹರಡುತ್ತದೆ. ಆದ್ದರಿಂದ ಈ ವೈರಸ್ ಅತ್ಯಂತ ವೇಗವಾಗಿ ಹರಡಬಹುದಾಗಿದೆ. ಆದ್ದರಿಂದ ಸರ್ಕಾರದ ಮಾರ್ಗಸೂಚಿಗಳನ್ನು ತಾವು ತಪ್ಪದೇ ಅನುಸರಿಸಬೇಕು. ನಿಮಗೆ ಏನಾದರೂ ಸಂದೇಹಗಳಿದ್ದರೇ ಪಶು ಇಲಾಖೆಯ ವೈದ್ಯರನ್ನು ಸಂಪರ್ಕ ಮಾಡಬಹುದು ಎಂದರು.
ಫಾರಂನಲ್ಲಿ ಸ್ವಚ್ಛತೆ ಕಾಪಾಡಿ
ಆರೋಗ್ಯಾಧಿಕಾರಿ ನರಸಿಂಹಯ್ಯ ಮಾತನಾಡಿ, ಕೋಳಿ ಫಾರಂ ಸುತ್ತ ಸ್ವಚ್ಛತೆಗೆ ಒತ್ತು ನೀಡುವಂತೆ ಸೂಚಿಸಲಾಗಿದೆ. ಕೋಳಿ ಮಾಂಸದ ಮಾರಾಟದ ಅಂಗಡಿಗಳ ಮಾಲೀಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಂಗಡಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಸುತ್ತಮುತ್ತ ಕ್ರಿಮಿನಾಶಕಗಳನ್ನು ಸಿಂಪಡಿಸಬೇಕು. ಈ ಸಂಬಂಧ ತಾಲೂಕು ಆಡಳಿತ ಸಹ ಅರಿವು ಮೂಡಿಸುವ ಕೆಲಸಕ್ಕೆ ಕೈಜೋಡಿಸಬೇಕು ಎಂದರು.
ಈ ವೇಳೆ ಕೋಳಿ ಫಾರಂ ಮಾಲೀಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಬಳಿ ಹೇಳಿಕೊಂಡು. ಕೋಳಿ ಉದ್ಯಮವನ್ನು ಕೃಷಿ ಉಪಕಸಬು ಎಂದು ಘೋಷಣೆ ಮಾಡಲು ಸರ್ಕಾರಕ್ಕೆ ಪತ್ರ ಕಳಿಸಬೇಕು ಎಂದು ಮನವಿ ಮಾಡಿಕೊಂಡರು.