ಔರಾದ್ ತಾಲೂಕಿನ ಸಂತಪೂರಿನ ಅನುಭವ ಮಂಟಪ ಪ್ರೌಢ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ ಜರುಗಿತು.
ಕನ್ನಡಪ್ರಭ ವಾರ್ತೆ ಔರಾದ್
ಸಾಧಿಸುವ ಛಲ ಇದ್ದವರಿಗೆ ಕಷ್ಟ, ಬಡತನ ಯಾವುದೂ ಅಡ್ಡಿಯಾಗುವುದಿಲ್ಲ ಎಂದು ಬಸವಕಲ್ಯಾಣದ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಹೇಳಿದರು.ತಾಲೂಕಿನ ಸಂತಪೂರಿನ ಅನುಭವ ಮಂಟಪ ಪ್ರೌಢ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಸತ್ಕಾರ ಸಮಾರಂಭದಲ್ಲಿ ಮಾತನಾಡಿ, ಕಠಿಣ ಶ್ರಮ ವಹಿಸಿದರೆ ಯಾರು ಬೇಕಾದರೂ ಉನ್ನತವಾದುದನ್ನು ಸಾಧಿಸಬಹುದು. ಜೀವನದಲ್ಲಿ ಸಾಧನೆ ಮಾಡಲು ಗುರಿ, ಆತ್ಮವಿಶ್ವಾಸ, ದೃಢ ನಿರ್ಧಾರ ಮುಖ್ಯ. ವಿದ್ಯಾರ್ಥಿಗಳು ಗುರಿ ನಿರ್ಧರಿರಿಸಿಕೊಂಡು ಕಾರ್ಯೋನ್ಮೂಖರಾದರೆ ಯಶಸ್ಸು ಸಾಧಿಸಬಹುದು ಎಂದರು.
ನಾಡೋಜ ಡಾ.ಬಸವಲಿಂಗ ಪಟ್ಟದೇವರು ಮಾತನಾಡಿ, ಬೀದರ ಜಿಲ್ಲೆಯಲ್ಲಿ ಅನುಭವ ಮಂಟಪ ಶಾಲೆ ಮಾದರಿಯಾಗಿದೆ. ಇಲ್ಲಿಯ ಶಿಕ್ಷಕರ ಪ್ರಯತ್ನದಿಂದ ವಿದ್ಯಾರ್ಥಿಗಳು ನೀರಿಕ್ಷೆಯಂತೆ ಫಲಿತಾಂಶ ತೆಗೆಯುತ್ತಿದ್ದಾರೆ. ಇನ್ನೂ ಹೆಚ್ಚಿನ ಪ್ರಯತ್ನ ಮಾಡಿದರೇ ರಾಜ್ಯಕ್ಕೆ ಪ್ರಥಮ ಸ್ಥಾನವು ಬರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಮರಳಿ ಹೋದ ಕಾಲ ಮತ್ತೆ ಬರುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ತಾವು ಏನಾದರೂ ಸಾಧನೆ ಮಾಡಬೇಕೆಂದರೆ ಇದೊಂದು ಉತ್ತಮ ಅವಕಾಶವಿದೆ ಎಂದರು.
ಇಲ್ಲಿಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಉತ್ತಮ ಬಾಂಧವ್ಯ ಏರ್ಪಟ್ಟಿದರಿಂದ ಕಳೆದ 14 ವರ್ಷದಿಂದ ಶೇ.100ರಷ್ಟು ಫಲಿತಾಂಶ ಬರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಸಾಧಿಸುವ ಸಂಕಲ್ಪ ಮಾಡಬೇಕು ಅಂದಾಗ ಸಾಧನೆ ಮಾಡಲು ಸಾಧ್ಯ ಎಂದು ಸಲಹೆ ನೀಡಿದರು.
ಭಾರತೀಯ ಬಸವ ಬಳಗದ ಜಿಲ್ಲಾಧ್ಯಕ್ಷ ಡಾ. ಸಂಜೀವಕುಮಾರ ಜುಮ್ಮಾ, ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ಮೊಕ್ತೆದಾರ್, ಹಿರಿಯ ಪತ್ರಕರ್ತ ಶರಣಪ್ಪ ಚಿಟಮೆ, ಮನ್ಮಥ ಸ್ವಾಮಿ, ಮಲ್ಲಪ್ಪ ಗೌಡಾ, ಸೂರ್ಯಕಾಂತ ಎಕಲಾರ, ಶಿವಕುಮಾರ ಸಾದುರೆ, ಅಹ್ಮದ್ ಜಂಬಗಿ, ಪಿಯು ಕಾಲೇಜಿನ ಪ್ರಾಂಶುಪಾಲ ನವೀಲಕುಮಾರ ಉತ್ಕಾರ, ಶಾಲೆಯ ಮುಖ್ಯಗುರು ಶಿವಕುಮಾರ ಹಿರೇಮಠ, ಶಿಕ್ಷಕರಾದ ರಾಜಕುಮಾರ ಘಾಟೆ, ತಾನಾಜಿ ಗಾಯಕವಾಡ, ಅವಿನಾಶ, ರಾಜಕುಮಾರ ಸೇರಿ ಅನೇಕರಿದ್ದರು.
ಈ ವೇಳೆ ಎಸ್ಸೆಸ್ಸೆಲ್ಸಿ ಅಗ್ರಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಹಾಗೂ ಪತ್ರಕರ್ತರಿಗೆ ಸತ್ಕರಿಸಲಾಯಿತು. ಸಂಗಮೇಶ ಬ್ಯಾಳೆ ನಿರೂಪಿಸಿದರೆ ಮಾರುತಿ ಗಾದಗೆ ಸ್ವಾಗತಿಸಿದರು. ಸಾಯಪ್ಪ ಕರಂಜೆ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.