ಮಂಡ್ಯ : ತಾಲೂಕಿನ ಹಂಪಾಪುರ ಗ್ರಾಮದಲ್ಲಿ 600 ಕೋಟಿ ರು. ವೆಚ್ಚದಲ್ಲಿ 400/220 ಕೆ.ವಿ ಸಾಮರ್ಥ್ಯದ ವಿದ್ಯುತ್ ಕೇಂದ್ರ ಸ್ಥಾಪನೆಯಾಗಲಿದೆ. ಇದರಿಂದ ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ಸಮಸ್ಯೆಯಾಗುವುದಿಲ್ಲ. ಕ್ಷೇತ್ರದ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.
ತಾಲೂಕು ಆಡಳಿತದಿಂದ ತಾಲೂಕಿನ ಉಪ್ಪರಕನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಜನತಾದರ್ಶನದಲ್ಲಿ ಮಾತನಾಡಿ, ಕಾವೇರಿ ನೀರಾವರಿ ನಿಗಮದಿಂದ 100 ಕೋಟಿ ರು. ವೆಚ್ಚದಲ್ಲಿ ನಾಲೆಗಳ ಆಧುನೀಕರಣ ಕೆಲಸವಾಗುತ್ತಿದೆ. ಈ ವರ್ಷ 120 ಕೋಟಿ ರು. ಅನುದಾನ ಘೋಷಣೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶೀಘ್ರವೇ ಟೆಂಡರ್ ಆಗಲಿದೆ ಎಂದರು.
ಒಂದೆಡೆ ಅಭಿವೃದ್ಧಿ ಕೆಲಸ ನಿರಂತರವಾಗಿ ನಡೆಯುತ್ತಿದೆ. ಮತ್ತೊಂದೆಡೆ ಗ್ಯಾರಂಟಿ ಯೋಜನೆಗಳಿಂದಲೂ ಸಾರ್ವಜನಿಕರಿಗೆ ಸೌಲಭ್ಯ ಸಿಗುತ್ತಿದೆ. ಒಂದು ವೇಳೆ ಗ್ಯಾರಂಟಿ ಯೋಜನೆಗೆ ಸಂಬಂಸಿದಂತೆ ಸಮಸ್ಯೆಗಳಿದ್ದರೆ ಬಗೆಹರಿಸಿಕೊಳ್ಳಲು ಜನತಾದರ್ಶನದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.
ಉಪ್ಪರಕನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಎರಡು ವರ್ಷದ ಅವಧಿಯಲ್ಲಿ 10 ಕೋಟಿ ರು. ವೆಚ್ಚದ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಉಪ್ಪರಕನಹಳ್ಳಿಯಿಂದ ಗಂಟಗೌಡನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಎರಡೂವರೆ ಕೋಟಿ ರು. ವೆಚ್ಚದಲ್ಲಿ ಮಾಡಲಾಗುತ್ತಿದೆ. ಇದರ ಮುಂದುವರೆದ ಭಾಗವಾಗಿ ದ್ಯಾಪಸಂದ್ರ ಗ್ರಾಮದವರೆಗೂ ಕೆಲಸ ನಡೆಯಲಿದೆ. ಅದೇ ರೀತಿ ಮಲ್ಲಾಘಟ್ಟ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಎರಡೂವರೆ ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ವಿವರಿಸಿದರು.
ಅಧಿಕಾರ ಕೊಟ್ಟಿರುವ ಜನರಿಗೆ ಅನುಕೂಲ ಕಲ್ಪಿಸುವುದು ನಮ್ಮ ಗುರಿ. ಅಂತೆಯೇ ಜನರು ಕೆಲಸ ಮಾಡಿಸಿಕೊಳ್ಳಲು ಕಚೇರಿಗೆ ಅಲೆದಾಡಬಾರದೆನ್ನುವ ಕಾರಣಕ್ಕೆ ನಿಮ್ಮ ಬಳಿಗೆ ಸರ್ಕಾರವನ್ನು ತರಲಾಗುತ್ತಿದೆ. ಅಂದರೆ ಸಾರ್ವಜನಿಕರಿಗೆ ನೆರವಾಗಲಿರುವ ಜನತಾದರ್ಶನ ಆಯೋಜಿಸಲಾಗುತ್ತಿದೆ. ಎಲ್ಲ ಇಲಾಖೆ ಅಕಾರಿಗಳು ಪಾಲ್ಗೊಂಡು ಸಾರ್ವಜನಿಕರ ಸಮಸ್ಯೆಯನ್ನು ಬಗೆಹರಿಸಲಿದ್ದಾರೆ ಎಂದರು.
ಜನತಾ ದರ್ಶನ ಕಾರ್ಯಕ್ರಮದಲ್ಲಿ ೧೫೦ ಅರ್ಜಿಗಳು ಸ್ವೀಕರಿಸಲಾಯಿತು. ಸ್ಥಳದಲ್ಲೇ ಹಲವು ಅರ್ಜಿಗಳಿಗೆ ಪರಿಹಾರ ಸೂಚಿಸಲಾಯಿತು. ಅಂತ್ಯಸಂಸ್ಕಾರಕ್ಕೆ ಸಹಾಯಧನ, ಅಂಗವಿಕಲರಿಗೆ ಸಹಾಯಧನ ವಿತರಿಸಲಾಯಿತು. ಹಲವು ಜನರಿಗೆ ಇ-ಸ್ವತ್ತು ನೀಡಲಾಯಿತು. ಆರೋಗ್ಯ ತಪಾಸಣೆ ನಡೆಸಿ ಅವಶ್ಯವಿರುವವರಿಗೆ ಕನ್ನಡಕ ವಿತರಿಸಿದರು. ಕೃಷಿ ಇಲಾಖೆಯಿಂದ ಫಲಾನುಭವಿಗಳಿಗೆ ಮೇವು ಕಟಾವು ಯಂತ್ರಗಳು ನೀಡಿದರು. ಮಹಿಳಾ ಮತ್ತು ಕಲ್ಯಾಣ ಇಲಾಖೆಯಿಂದ ಗರ್ಭಿಣಿಯರಿಗೆ ಸೀಮಂತ ಕಾರ್ಯ ನೆರವೇರಿಸಲಾಯಿತು.
ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್, ಉಪ್ಪರಕನಹಳ್ಳಿ ಗ್ರಾಪಂ ಅಧ್ಯಕ್ಷ ಕರೀಗೌಡ, ಉಪಾಧ್ಯಕ್ಷೆ ದೊಡ್ಡಮ್ಮ, ಸೊಸೈಟಿ ಅಧ್ಯಕ್ಷ ಪುನೀತ್, ಉಪ ತಹಸೀಲ್ದಾರ್ ಗಣೇಶ್, ಗ್ರಾಮ ಆಡಳಿತಾಧಿಕಾರಿ ಸಿದ್ದಪ್ಪ, ಗ್ರಾಪಂ ಸದಸ್ಯ ನಾಗೇಶ್ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ರುದ್ರಪ್ಪ ಇತರರಿದ್ದರು. ಇದೇ ವೇಳೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಕಣ್ಣಿನ ಸಮಸ್ಯೆ ಇರುವವರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು.