ಔರಾದ್: ಬೆಳಗ್ಗೆ 10 ಗಂಟೆಗೆ ತಹಸೀಲ್ ಕಚೇರಿಗೆ ಬಂದ ಶಾಸಕರು, ಕಚೇರಿಯ ಎಲ್ಲ ವಿಭಾಗಗಳಲ್ಲಿ ಸಂಚರಿಸಿದಾಗ ಬೆರಳೆಣಿಕೆಯಷ್ಟು ಸಿಬ್ಬಂದಿ ಮಾತ್ರ ಕೆಲಸ ಮಾಡುತ್ತಿರುವುದನ್ನು ಕಂಡು ತೀವ್ರ ಅಸಮಾಧಾನಗೊಂಡರು. ನಂತರ ಮುಖ್ಯದ್ವಾರದ ಬಳಿ ಕುಳಿತು ಅಧಿಕಾರಿ ಮತ್ತು ಸಿಬ್ಬಂದಿಯ ಸಮಯ ಪಾಲನೆಯ ಬಗ್ಗೆ ತಿಳಿದುಕೊಂಡರು.
ಈ ವೇಳೆ ಜಿಲ್ಲಾಧಿಕಾರಿಯವರನ್ನು ದೂರವಾಣಿ ಮುಖಾಂತರ ಸಂಪರ್ಕಿಸಿ ಸರಿಯಾಗಿ ಕೆಲಸ ಮಾಡದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಅವ್ಯವಸ್ಥೆ ಸುಧಾರಿಸಬೇಕೆಂದು ತಿಳಿಸಿದರು.
ಔರಾದ್ ತಹಸೀಲ್ ಕಚೇರಿ ಸಿಬ್ಬಂದಿ ಬಗ್ಗೆ ಜನರಿಂದ ನಿರಂತರ ದೂರುಗಳು ಬರುತ್ತಿರುವ ಹಿನ್ನೆಲೆ ದಿಢೀರ್ ಭೇಟಿ ನೀಡಲಾಗಿದೆ. ಸಾಕಷ್ಟು ಅಧಿಕಾರಿಗಳು ಮತ್ತು ಸಿಬ್ಬಂದಿ ತಡವಾಗಿ ಆಗಮಿಸುವುದು, ಅನಧಿಕೃತ ಗೈರಾಗುವುದು ಕಾಣಿಸಿದೆ. ಈ ಕುರಿತು ಸಚಿವರು, ಪ್ರಧಾನ ಕಾರ್ಯದರ್ಶಿಯವರಿಗೂ ಪತ್ರ ಬರೆಯಲಾಗುವುದು ಎಂದರು.ತಹಸೀಲ್ ಆವರಣ ಕಸದಿಂದ ತುಂಬಿದೆ. ಇನ್ನೂ ಗುಟಕಾ ತಿಂದು ಗೋಡೆಯ ಮೇಲೆ ಉಗುಳುವುದು ಕಾಣಿಸುತ್ತಿದೆ. ಇವೆಲ್ಲವೂ ಸುಧಾರಣೆಯಾಗಬೇಕು. ಕಛೇರಿಯಲ್ಲಿ ಸಿಸಿ ಟಿವಿ ಅಳವಡಿಸಿ ಕಛೇರಿಯ ಸಿಬ್ಬಂದಿಯ ಮೇಲೆ ನಿಗಾ ವಹಿಸಬೇಕೆಂದು ತಹಸೀಲ್ದಾರರಾದ ಮಲಶೆಟ್ಟಿ ಚಿದ್ರೆ ಅವರಿಗೆ ಹೇಳಿದರು.